HomeGadag Newsಶಾಲೆ-ಅಂಗನವಾಡಿಗಳಲ್ಲಿ ಇಒ ದಿಢೀರ್ ತಪಾಸಣೆ

ಶಾಲೆ-ಅಂಗನವಾಡಿಗಳಲ್ಲಿ ಇಒ ದಿಢೀರ್ ತಪಾಸಣೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ನರಗುಂದ: ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ಅವರು ವಿವಿಧ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲೂಕು ಉಸ್ತುವಾರಿ ಕಾರ್ಯದರ್ಶಿ ರಮೇಶ ಕಳಸದ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಲೆಗಳ ಶಿಥಿಲಗೊಂಡ ಕೊಠಡಿಗಳ ದುರಸ್ತಿ ಕುರಿತು ವಿಷಯ ಪ್ರಸ್ತಾಪವಾಗಿತ್ತು. ಇದರ ಹಿನ್ನೆಲೆಯಲ್ಲಿ ಇಒ ಶ್ರೀಧರ್ ಚಿನಗುಂಡಿ ಅವರು ಸುರಕೋಡ, ಹದಲಿ, ರೆಡ್ಡರನಾಗನೂರು ಹಾಗೂ ಶಿರೋಳ ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.

ಮಳೆಗಾಲದ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಯಾವುದೇ ತೊಂದರೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕುರಿತು ಶಾಲಾ ಮುಖ್ಯೋಪಾಧ್ಯಾಯರಿಂದ ಮಾಹಿತಿ ಪಡೆದರು. ಶಾಲಾ ಕೊಠಡಿಗಳ ಸುರಕ್ಷತೆ, ವಿದ್ಯಾರ್ಥಿಗಳ ಕಲಿಕಾ ವಾತಾವರಣ ಹಾಗೂ ಮೂಲಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.

ಇದೇ ವೇಳೆ ಶಿಕ್ಷಕರ ಹಾಜರಾತಿ ಪುಸ್ತಕ, ವಿದ್ಯಾರ್ಥಿಗಳ ಹಾಜರಾತಿ ಹಾಗೂ ಚಲನವಲನ ನೋಂದಣಿ (ಮೂವ್‌ಮೆಂಟ್ ರಿಜಿಸ್ಟರ್)ಗಳನ್ನು ಪರಿಶೀಲಿಸಿ, ಶಿಕ್ಷಕರು ದಾಖಲಾತಿಗಳನ್ನು ನಿಯಮಿತವಾಗಿ ನಿರ್ವಹಿಸುವಂತೆ ಸೂಚಿಸಿದರು.

ಶಾಲಾ ಬಿಸಿಯೂಟ ವ್ಯವಸ್ಥೆಯ ಪರಿಶೀಲನೆ ವೇಳೆ ಅಡುಗೆ ಸಿಬ್ಬಂದಿ ನಿರ್ವಹಿಸುವ ನಮೂನೆ-3 ರಿಜಿಸ್ಟರ್ ಪರಿಶೀಲಿಸಲಾಯಿತು. ರೆಡ್ಡರನಾಗನೂರಿನ ಸೀತಮ್ಮ ದೊಡ್ಡನಗೌಡ್ರ ಪ್ರೌಢಶಾಲೆಯಲ್ಲಿ ನಮೂನೆ-3 ರಿಜಿಸ್ಟರ್ ನವೀಕರಿಸದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಿ ತಾಲೂಕಿನ ಎಲ್ಲ ಶಾಲೆಗಳಲ್ಲಿ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಕ್ರಮ ಕೈಗೊಳ್ಳಲು ತಿಳಿಸಿದರು. ಪರಿಶೀಲನೆ ಸಂದರ್ಭದಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಬಿ.ಇ. ಮೇಯೂಟಿ ಹಾಗೂ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.

ರಜೆ ಮೇಲಿದ್ದ ಕಾರ್ಯಕರ್ತೆಯ ಸಹಿ ಪತ್ತೆ!

ಹದಲಿ ಗ್ರಾಮದ 122ನೇ ಅಂಗನವಾಡಿ ಕೇಂದ್ರಕ್ಕೆ ತಾಲೂಕು ಪಂಚಾಯಿತಿ ಇಒ ಶ್ರೀಧರ್ ಚಿನಗುಂಡಿ ಭೇಟಿ ನೀಡಿದ ವೇಳೆ ರಜೆ ಮೇಲಿದ್ದ ಕಾರ್ಯಕರ್ತೆಯೊಬ್ಬರು ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿರುವುದು ಬೆಳಕಿಗೆ ಬಂತು. ಈ ಕುರಿತು ಸಿಡಿಪಿಒ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಇಒ ಶ್ರೀಧರ್ ಚಿನಗುಂಡಿ, ಪ್ರಕರಣದ ಕುರಿತು ಸಮಗ್ರ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ತಾಲೂಕು ಪಂಚಾಯಿತಿಗೆ ವರದಿ ಸಲ್ಲಿಸುವಂತೆ ಸೂಚಿಸಿದರು.

“ಮಳೆಗಾಲದಲ್ಲಿ ಶಾಲಾ ಮಕ್ಕಳ ಸುರಕ್ಷತೆಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ಶಿಥಿಲಗೊಂಡಿರುವ ಶಾಲಾ ಕೊಠಡಿಗಳ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಶಿಕ್ಷಣ ಸಂಸ್ಥೆಗಳಲ್ಲಿ ದಾಖಲೆಗಳ ನಿರ್ವಹಣೆಯಲ್ಲೂ ನಿರ್ಲಕ್ಷ್ಯ ಸಹಿಸುವುದಿಲ್ಲ.”

– ಶ್ರೀಧರ್ ಚಿನಗುಂಡಿ, ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯಿತಿ, ನರಗುಂದ


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!