‘ಪುಷ್ಪ 2: ದಿ ರೂಲ್’ ಥಿಯೇಟರ್ನಲ್ಲಿ ಅಬ್ಬರಿಸುತ್ತಿದೆ. ನಟ ಅಲ್ಲು ಅರ್ಜುನ್ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2′ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾ ಇದುವರೆಗೆ ವಿಶ್ವದಾದ್ಯಂತ 1,300 ಕೋಟಿ ಕಲೆಕ್ಷನ್ ಮಾಡಿದೆ. ಸಿನಿಮಾ ರಿಲೀಸ್ ಆಗಿ 10 ದಿನ ಕಳೆದರೂ ಥಿಯೇಟರ್ಗಳಲ್ಲಿ ಅಭಿಮಾನಿಗಳ ದಂಡು ದಂಡಾಗಿ ಬರುತ್ತಿದ್ದಾರೆ.
ಇನ್ನೂ ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಚಿಕ್ಕಡಪಲ್ಲಿ ಪೊಲೀಸರು ಬಿಗ್ ಟ್ವಿಸ್ಟ್ ನೀಡಿದ್ದಾರೆ. ಕೇಸ್ನಲ್ಲಿ ಅಲ್ಲು ಅರ್ಜುನ್ಗೆ ಜೈಲು ದರ್ಶನ ಮಾಡಿಸಿದ್ದ ಪೊಲೀಸರು ಇದೀಗ, ಬೇಲ್ ರದ್ದು ಮಾಡುವಂತೆ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ.
ಹೌದು ಡಿ.13 ರಂದು ಹೈದರಾಬಾದ್ನಲ್ಲಿ ಚಿಕ್ಕಡಪಲ್ಲಿ ಪೊಲೀಸರು ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದರು. ಬಳಿಕ ತೆಲಂಗಾಣ ಹೈಕೋರ್ಟ್ಗೆ ಹಾಜರುಪಡಿಸಿದಾಗ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು. ಕೋರ್ಟ್ ಆದೇಶದ ಬೆನ್ನಲ್ಲೇ ಅಲ್ಲು ಅರ್ಜುನ್ ಅವರನ್ನು ಚಂಚಲಗೂಡ ಜೈಲಿಗೆ ಶಿಫ್ಟ್ ಮಾಡುವ ಪ್ರಕ್ರಿಯೆ ಆರಂಭವಾಗಿತ್ತು.
ತದನಂತರ ತುರ್ತು ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ 50,000 ವೈಯಕ್ತಿಕ ಬಾಂಡ್ ಆಧಾರದ ಮೇಲೆ 4 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧ ಇದೀಗ ತೆಲಂಗಾಣ ಪೊಲೀಸ್ ಅಧಿಕಾರಿಗಳು ಅಲ್ಲು ಅರ್ಜುನ್ಗೆ ನೀಡಿರುವ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.