ಬೆಂಗಳೂರು: ಒಂದೆಡೆ ಮಂತ್ರಿ ಆಗಿರೋದು ಖುಷಿ ತಂದಿದೆ. ಇನ್ನೊಂದೆಡೆ ತಂದೆ ಅವಧಿ ಪೂರೈಸಿದ್ದಕ್ಕೆ ದುಃಖವಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಒಂದು ಕಡೆ ನನಗೆ ಸಚಿವನಾಗಿ ಜವಾಬ್ದಾರಿ ಸಿಕ್ಕಿರುವುದು ಸಂತೋಷ ತಂದಿದೆ. ಆದರೆ ಇನ್ನೊಂದೆಡೆ ಅಷ್ಟೇ ದುಃಖವೂ ಇದೆ” ಎಂದು ಹೇಳಿದರು.
ನನ್ನ ತಂದೆ ಸಿದ್ದರಾಮಯ್ಯ ಅವರು ಪೂರ್ಣ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರಾವಧಿ ಪೂರೈಸುತ್ತಾರೆ ಎಂದು ನಾನು ನಿರೀಕ್ಷಿಸಿದ್ದೆ. ಆದರೆ ಅದು ಸಾಧ್ಯವಾಗದೇ ಇರುವುದು ವೈಯಕ್ತಿಕವಾಗಿ ತೀವ್ರ ದುಃಖ ತಂದಿದೆ. ಅವರ ಸ್ಥಾನಕ್ಕೆ ನನಗೆ ಸಚಿವ ಸ್ಥಾನ ನೀಡಲಾಗಿದೆ ಎಂದರು.
ಇಂದು ನಡೆದ ಮೊದಲ ಸಚಿವ ಸಂಪುಟ ಸಭೆ ಯಶಸ್ವಿಯಾಗಿ ನಡೆದಿದೆ. ಆದರೆ ಸಂಪುಟದಲ್ಲಿ ಕೈಗೊಂಡ ನಿರ್ಣಯಗಳನ್ನು ಸಭೆಯಿಂದ ಹೊರಗಡೆ ಅಧಿಕೃತವಾಗಿ ಹೇಳಲು ನಿಯಮಗಳ ಕಾರಣದಿಂದ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಕುರಿತು ಸಿಎಂ ಹಾಗೂ ಡಿಸಿಎಂ ಅವರೇ ವಿವರ ನೀಡಲಿದ್ದಾರೆ ಎಂದು ಹೇಳಿದರು.
ತಮಗೆ ನೀಡಲಾಗುವ ಖಾತೆಯ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ, ಪಕ್ಷದ ವರಿಷ್ಠರು ಯಾವ ಖಾತೆ ನೀಡಿದರೂ ಅದನ್ನು ಜವಾಬ್ದಾರಿಯಿಂದ ನಿರ್ವಹಿಸುವೆ. ಯಾರಿಗೆ ಯಾವ ಖಾತೆ ನೀಡಬೇಕು ಎಂಬುದು ಸಂಪೂರ್ಣವಾಗಿ ಪಕ್ಷದ ಹಿರಿಯ ನಾಯಕರ ನಿರ್ಧಾರಕ್ಕೆ ಬಿಟ್ಟ ವಿಚಾರ ಎಂದು ಹೇಳಿದರು.



