ವಿಜಯಸಾಕ್ಷಿ ಸುದ್ದಿ, ಗದಗ: ನಮ್ಮ ಸಂವಿಧಾನದಡಿ ಎಲ್ಲರೂ ಸಮಾನರು. ಹಿಂದುಳಿದವರು, ಸಮಾಜದ ಮುಖ್ಯವಾಹಿನಿಗೆ ಬರಲೆಂದು ಮೀಸಲಾತಿಯಂತಹ ಸೌಲಭ್ಯಗಳನ್ನು ತರಲಾಗಿದೆ. ಯಾವುದೇ ವ್ಯಕ್ತಿಯನ್ನು ಜಾತಿ, ಲಿಂಗ ಆಧಾರದ ಮೇಲೆ ತಾರತಮ್ಯ ಮಾಡುವಂತಿಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ದಿವಾಣಿ ನ್ಯಾಯಾಧೀಶರಾದ ಸಿ.ಎಸ್. ಶಿವನಗೌಡ್ರ ನುಡಿದರು.
ಅವರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಡಾ. ಪುಟ್ಟರಾಜ ಗವಾಯಿಗಳವರ ಅಂಧರ ಶಿಕ್ಷಣ ಸಮಿತಿ, ಪಂ. ಪಂಚಾಕ್ಷರ ಗವಾಯಿಗಳವರ ಶಿಕ್ಷಣ ಮಹಾವಿದ್ಯಾಲಯ ಗದಗ ಇವರ ಸಂಯುಕ್ತಾಶ್ರಯದಲ್ಲಿ ನಗರದ ಹಾತಲಗೇರಿ ರಸ್ತೆಯಲ್ಲಿರುವ ಪಂ.ಪಂಚಾಕ್ಷರ ಗವಾಯಿಗಳವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಯೋಜನೆಗಳ ಕುರಿತ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸ್ವಾತಂತ್ರ್ಯನಂತರ ನಮಗೆ ಯಾವ ರೀತಿ ಹಕ್ಕು, ಕರ್ತವ್ಯ, ಸ್ವಾತಂತ್ರ್ಯವಿರಬೇಕು ಎಂಬುದಕ್ಕೆ ಭಾರತದಲ್ಲಿ ಸಂವಿಧಾನವನ್ನು ಜಾರಿಗೆ ತರಲಾಯಿತು ಎಂದು ತಿಳಿಸಿದ ಅವರು, ವಿವಿಧ ಕಾಯ್ದೆಗಳ ಕುರಿತು ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ.ಐ. ಹಿರೇಮನಿಪಾಟೀಲ ಮಾತನಾಡಿ, ನಮ್ಮ ಸಮಾಜದಲ್ಲಿ ಶಿಕ್ಷಕರಿಗೆ ದೇವರ ಸ್ಥಾನ ಕೊಟ್ಟಿದೆ. ಅಂತಹ ಸ್ಥಾನವನ್ನು ಅಲಂಕರಿಸಲಿರುವ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ನಮ್ಮ ದೇಶದಲ್ಲಿರುವ ಕಾನೂನುಗಳ ಬಗ್ಗೆ ಅರಿವು ಇರಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿಗಳಾದ ರಾಧಾ ಜಿ.ಮಣ್ಣೂರ ಮಾತನಾಡಿ, ಮೂಲಭೂತ ದಾಖಲೆಗಳ ಕೊರತೆಯಿಂದಾಗಿ ಸರ್ಕಾರ ಇಲಾಖೆ ಮೂಲಕ ಜಾರಿಗೆ ತಂದ ಅನೇಕ ಯೋಜನೆಗಳು ಫಲಾನುಭವಿಗಳಿಗೆ ತಲುಪುವುದಿಲ್ಲ. ಹೀಗಾಗಿ ತಮ್ಮತಮ್ಮ ದಾಖಲೆಗಳನ್ನು ಸರಿಯಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದ ಅವರು, ತಮ್ಮಇಲಾಖೆಯ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾಯ ಡಾ. ವೀರೇಶ ಹಿತ್ತಲಮನಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ ಮಾತನಾಡಿ, ಮಕ್ಕಳು ಯಾವುದೇ ಒತ್ತಡವಿಲ್ಲದೇ ಸಂತಸದಿಂದ ಕಲಿಕೆಯಲ್ಲಿ ತೊಡಗಬೇಕು. ಹೊಸ ಹೊಸ ಯೋಚನೆಗಳ ಮೂಲಕ ಮಕ್ಕಳಿಗೆ ಶಿಕ್ಷಣ ನೀಡಬೇಕು. ಇಂದಿನ ಸವಾಲಿನ ಜೀವನದಲ್ಲಿ ಮಕ್ಕಳಲ್ಲಿ ಜ್ಞಾನ, ಶಿಕ್ಷಣ, ಕೌಶಲ್ಯಗಳನ್ನು ಬೆಳೆಸಬೇಕು. ನಮ್ಮ ಸಂವಿಧಾನ, ಕಾನೂನುಗಳ ಬಗ್ಗೆ ಎಲ್ಲರೂ ಅರಿವು ಹೊಂದಬೇಕು ಎಂದರು.