ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯದಿಂದ ಉಂಟಾದ ಧೂಳಿನ ಪರಿಣಾಮ ಶಾಲಾ ಮಕ್ಕಳು ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ.
ಲಕ್ಕುಂಡಿ ಕೋಟೆಯ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಇರುವ ಸ್ವಾಮಿ ವಿವೇಕಾನಂದ ಖಾಸಗಿ ಶಾಲೆಯ ಎಲ್ಕೆಜಿ ಹಾಗೂ ಯುಕೆಜಿ ತರಗತಿಯ ಪುಟ್ಟಪುಟ್ಟ ಮಕ್ಕಳು ಉತ್ಖನನ ಧೂಳಿನಿಂದ ಅಸ್ವಸ್ಥರಾಗಿದ್ದಾರೆ.
ಧೂಳಿನ ಪರಿಣಾಮ ಮಕ್ಕಳಿಗೆ ವಾಂತಿ, ಜ್ವರ ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಹಲವು ಮಕ್ಕಳು ಡಸ್ಟ್ ಅಲರ್ಜಿಯಿಂದ ನರಳುತ್ತಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ಕೆಲ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗಲು ಸಾಧ್ಯವಾಗಿಲ್ಲ.
ಉತ್ಖನನದಿಂದ ನಿರಂತರವಾಗಿ ಏಳುತ್ತಿರುವ ಧೂಳು ಮಕ್ಕಳ ಆರೋಗ್ಯಕ್ಕೆ ಗಂಭೀರ ಅಪಾಯ ತಂದೊಡ್ಡಿದೆ ಎಂಬ ಆರೋಪ ಪೋಷಕರಿಂದ ಕೇಳಿಬಂದಿದೆ. ಶಾಲಾ ಆವರಣದ ಬಳಿ ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದೇ ಉತ್ಖನನ ನಡೆಸುತ್ತಿರುವ ಅಧಿಕಾರಿಗಳ ವಿರುದ್ಧ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪುಟ್ಟ ಮಕ್ಕಳ ಆರೋಗ್ಯದ ಬಗ್ಗೆ ಯಾರಿಗೂ ಕಾಳಜಿ ಇಲ್ಲವೇ?” ಎಂದು ಪ್ರಶ್ನಿಸಿರುವ ಪೋಷಕರು, ತಕ್ಷಣವೇ ಉತ್ಖನನ ಕಾರ್ಯ ನಿಲ್ಲಿಸಿ ಮಕ್ಕಳಿಗೆ ಸುರಕ್ಷಿತ ವಾತಾವರಣ ಒದಗಿಸುವಂತೆ ಆಗ್ರಹಿಸಿದ್ದಾರೆ.
ಘಟನೆ ಕುರಿತು ಸಂಬಂಧಿಸಿದ ಅಧಿಕಾರಿಗಳು ಸ್ಪಷ್ಟನೆ ನೀಡಬೇಕಿದ್ದು, ಮಕ್ಕಳ ಆರೋಗ್ಯದ ರಕ್ಷಣೆಗಾಗಿ ತುರ್ತು ಕ್ರಮ ಕೈಗೊಳ್ಳಬೇಕಾದ ಅವಶ್ಯಕತೆ ಎದುರಾಗಿದೆ.



