ಪಾಲಕ್ಕಾಡ್: ವಲಯಾರ್–ವಡಕ್ಕಂಚೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಂಗಡಿ ಹಣ್ಣು ಸಾಗಿಸುತ್ತಿದ್ದ ಲಾರಿಯಲ್ಲಿ ಭಾರಿ ಪ್ರಮಾಣದ ಸ್ಫೋಟಕಗಳು ಪತ್ತೆಯಾಗಿದ್ದು, ಕೇರಳ–ತಮಿಳುನಾಡು ಗಡಿಭಾಗದಲ್ಲಿ ಆತಂಕ ಸೃಷ್ಟಿಯಾಗಿದೆ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಪಾಪರಪಟ್ಟಿ ಮೂಲದ ಲಾರಿ ಚಾಲಕ ಸೆಂಥಿಲ್ ಕುಮಾರ್ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬುಧವಾರ ರಾತ್ರಿ ಸುಮಾರು 9 ಗಂಟೆ ವೇಳೆಗೆ ಪಾಲಕ್ಕಾಡ್ ಸರ್ಕಾರಿ ವೈದ್ಯಕೀಯ ಕಾಲೇಜು ಸಮೀಪದ ಸರ್ವೀಸ್ ರಸ್ತೆಯಲ್ಲಿ ಲಾರಿಯನ್ನು ತಪಾಸಣೆ ನಡೆಸಿದಾಗ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿದೆ. ಲಾರಿಯ ಮೇಲೆ ರಾಶಿಯಾಗಿ ತುಂಬಿದ್ದ ಕಲ್ಲಂಗಡಿ ಹಣ್ಣುಗಳನ್ನು ತೆರವುಗೊಳಿಸಿ ಪರಿಶೀಲಿಸಿದ ವೇಳೆ, 100ಕ್ಕೂ ಹೆಚ್ಚು ಪೆಟ್ಟಿಗೆಗಳಲ್ಲಿ ಜಿಲೆಟಿನ್ ಸ್ಟಿಕ್ಗಳು ಹಾಗೂ ಡಿಟೋನೇಟರ್ಗಳು ಪತ್ತೆಯಾಗಿವೆ.
ಪ್ರಾಥಮಿಕ ವಿಚಾರಣೆಯಲ್ಲಿ ಈ ಸ್ಫೋಟಕಗಳನ್ನು ತ್ರಿಶೂರ್ಗೆ ಸಾಗಿಸಲಾಗುತ್ತಿತ್ತು ಎಂದು ಚಾಲಕ ಸೆಂಥಿಲ್ ಕುಮಾರ್ ತಿಳಿಸಿದ್ದಾನೆ. ಮಾಹಿತಿ ದೊರಕುತ್ತಿದ್ದಂತೆಯೇ ದಕ್ಷಿಣ ಪೊಲೀಸ್ ಇನ್ಸ್ಪೆಕ್ಟರ್ ವಿಪಿನ್ ಕುಮಾರ್ ನೇತೃತ್ವದಲ್ಲಿ ತನಿಖೆ ಕೈಗೊಳ್ಳಲಾಗಿದ್ದು, ಬಾಂಬ್ ನಿಷ್ಕ್ರಿಯ ದಳವನ್ನು ಕೂಡ ಸ್ಥಳಕ್ಕೆ ಕರೆಸಲಾಗಿದೆ.
ಚಾಲಕನ ವಿಚಾರಣೆ ಮುಂದುವರೆದಿದ್ದು, ಸ್ಫೋಟಕಗಳ ಮೂಲ, ಉದ್ದೇಶ ಹಾಗೂ ಇದಕ್ಕೆ ಸಂಬಂಧಿಸಿದ ಜಾಲದ ಬಗ್ಗೆ ಹೆಚ್ಚಿನ ಮಾಹಿತಿ ವಿಚಾರಣೆ ನಂತರವೇ ಲಭ್ಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಮನಾರ್ಹ ಸಂಗತಿಯೆಂದರೆ, ಕಳೆದ ವರ್ಷ ಪಾಲಕ್ಕಾಡ್ ಮತ್ತು ಕೊಯಮತ್ತೂರು ಪೊಲೀಸರು ತಮಿಳುನಾಡಿನಿಂದ ಕೇರಳಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿದ್ದ 40,000ಕ್ಕೂ ಹೆಚ್ಚು ಜಿಲೆಟಿನ್ಗಳು ಹಾಗೂ 5,000ಕ್ಕೂ ಹೆಚ್ಚು ಡಿಟೋನೇಟರ್ಗಳನ್ನು ವಶಪಡಿಸಿಕೊಂಡಿದ್ದರು. ಇತ್ತೀಚಿನ ಘಟನೆ ಗಡಿ ಪ್ರದೇಶಗಳಲ್ಲಿ ಸ್ಫೋಟಕ ಕಳ್ಳಸಾಗಣೆ ಪ್ರಕರಣಗಳು ಮತ್ತೆ ತಲೆಎತ್ತುತ್ತಿರುವ ಆತಂಕವನ್ನು ಹೆಚ್ಚಿಸಿದೆ.



