ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಇಂಗ್ಲೀಷ್ ವಿಷಯ ಕಬ್ಬಿಣದ ಕಡಲೆ ಎಂಬ ಕೀಳರಿಮೆ ತೊರೆದು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಬೇಕು ಎಂದು ಗದಗ ಜಿಲ್ಲಾ ಶಾಲಾ ಶಿಕ್ಷಣ( ಪದವಿಪೂರ್ವ) ಇಲಾಖೆಯ ಉಪನಿರ್ದೇಶಕ ಸಿದ್ಧಲಿಂಗ ಬಂಡು ಮಸನಾಯಕ ಸಲಹೆ ನೀಡಿದರು.
ಇಲ್ಲಿಯ ಜನತಾ ವಿದ್ಯಾವರ್ಧಕ ಸಂಸ್ಥೆಯ ಬಿ.ಎಚ್. ಪಾಟೀಲ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಗದಗ ಜಿಲ್ಲಾ ಪದವಿಪೂರ್ವ ಆಂಗ್ಲ ಭಾಷಾ ಉಪನ್ಯಾಸಕರ ವೇದಿಕೆ, ಕೆ.ವಿ.ಎಸ್.ಆರ್ ಪಿಯು ಕಾಲೇಜು ತಿಮ್ಮಾಪೂರ ಹಾಗೂ ಬಿ.ಎಚ್. ಪಾಟೀಲ ಪಿ.ಯು. ಕಾಲೇಜು ಲಕ್ಕುಂಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಇಂಗ್ಲೀಷ್ ವಿಷಯ ಪ್ರಶ್ನೆ ಪತ್ರಿಕೆ ಬಿಡಿಸುವ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂಗ್ಲೀಷ್ ಭಾಷೆ ಕನ್ನಡಕ್ಕಿಂತಲೂ ಸರಳವಾಗಿದ್ದು, ಶೃದ್ಧೆಯಿಂದ ಓದಿದರೆ ಆತಂಕವಿಲ್ಲದೇ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಬಹುದು. ಜಗತ್ತಿನಾದ್ಯಾಂತ ಇಂಗ್ಲೀಷ್ ಭಾಷೆಯು ಸಂಪರ್ಕ ಭಾಷೆಯಾಗಿ ಬಳಕೆಯಾಗುತ್ತಿರುವದರಿಂದ ಪ್ರಸ್ತುತ ಸಮಯದಲ್ಲಿ ಅತ್ಯಂತ ಮಹತ್ವ ಪಡೆದಿದೆ. ದೈನಂದಿನ ಜೀವನದಲ್ಲಿ ಇಂಗ್ಲೀಷ್ ಬಳಸುವ ಮೂಲಕ ಭಾಷೆಯನ್ನು ಕರಗತ ಮಾಡಿಕೊಳ್ಳಬೇಕು. ವಾರ್ಷಿಕ ಪರೀಕ್ಷೆ ಸಮೀಪಿಸುತ್ತಿದ್ದು, ವಿದ್ಯಾರ್ಥಿಗಳು ಮದುವೆ, ಜಾತ್ರೆಗಳಂತಹ ಕಾರ್ಯಕ್ರಮಗಳಿಂದ ದೂರವಿದ್ದು ಓದಿನ ಕಡೆ ಹೆಚ್ಚಿನ ಗಮನ ಹರಿಸಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಆಂಗ್ಲ ಭಾಷಾ ಉಪನ್ಯಾಸಕರ ವೇದಿಕೆಯ ಕಾರ್ಯದರ್ಶಿ ರಮಾಕಾಂತ ದೊಡ್ಡಮನಿ, ಪ್ರತಿ ವರ್ಷದಂತೆ ಈ ವರ್ಷ ಕೂಡಾ ಜಿಲ್ಲೆಯಾದ್ಯಂತ ಪ್ರಶ್ನೆ ಪತ್ರಿಕೆ ಬಿಡಿಸುವ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು, ದ್ವಿತೀಯ ಪಿಯುಸಿ ವಾರ್ಷಿಕ ಫಲಿತಾಂಶವನ್ನು ಹೆಚ್ಚಿಸಲು ಕಾರ್ಯಾಗಾರಗಳು ಪರಿಣಾಮಕಾರಿಯಾಗಿವೆ ಎಂದರು.
ಆಂಗ್ಲ ಭಾಷಾ ಉಪನ್ಯಾಸಕರ ವೇದಿಕೆಯ ಅಧ್ಯಕ್ಷ ಪ್ರಾಚಾರ್ಯ ಬಸವರಾಜ ಗಿರಿತಿಮ್ಮಣ್ಣವರ, ಜನತಾ ವಿದ್ಯಾವರ್ಧಕ ಸಂಸ್ಥೆಯ ಕಾರ್ಯದರ್ಶಿ ಪಿ.ಎಫ್. ತೋಪಿನ್, ನಿರ್ದೇಶಕರಾದ ವ್ಹಿ.ವ್ಹಿ. ಗಂಧದ, ಕೆ.ಎಂ. ಪಾಟೀಲ, ಟಿ.ಎನ್. ಅಂಬಕ್ಕಿ ಉಪಸ್ಥಿತರಿದ್ದರು.
ಎ.ಎಂ. ನದಾಫ್ ಹಾಗೂ ಸುರೇಶ ಸಣ್ಣೆಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಪ್ರಾಚಾರ್ಯ ಬಿ.ವ್ಹಿ. ಪಾಟೀಲ ಸ್ವಾಗತಿಸಿದರು. ಆರ್.ಎಸ್. ಚವಡಿ ನಿರೂಪಿಸಿದರು. ಎಸ್.ಎಚ್. ಮಲ್ಲಾಪೂರ ವಂದಿಸಿದರು.
ಅಧ್ಯಕ್ಷತೆ ವಹಿಸಿದ್ದ ಜನತಾ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಆಯ್.ಎನ್. ಕುಂಬಾರ ಮಾತನಾಡಿ, ಇಂಗ್ಲೀಷ್ ಕಠಿಣ ಎಂಬ ಭೀತಿ ದೂರ ಮಾಡುವ ಉದ್ದೇಶದಿಂದ ಗ್ರಾಮೀಣ ಭಾಗದಲ್ಲಿ ಹೆಚ್ಚು ಹೆಚ್ಚು ಕಾರ್ಯಾಗಾರಗಳನ್ನು ಏರ್ಪಡಿಸುತ್ತಿರುವ ಆಂಗ್ಲ ಭಾಷಾ ಉಪನ್ಯಾಸಕರ ವೇದಿಕೆಯ ಕಾರ್ಯವನ್ನು ಶ್ಲಾಘಿಸಿದರು.



