ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಈ ಬಾರಿ ಬರಗಾಲದ ಹಿನ್ನೆಎಲೆಯಲ್ಲಿ ರೈತರು ಸಾಕಷ್ಟು ತೊಂದರೆಯಲ್ಲಿದ್ದಾರೆ. ನೀರಾವರಿ ಜಮೀನು ಹೊಂದಿದ ರೈತರು ಸಹ ಅಂತರ್ಜಲ ಕೊರತೆಯನ್ನು ಅನುಭವಿಸುತ್ತಿದ್ದು, ಯಾವುದೇ ಬೆಳೆಯನ್ನು ಬೆಳೆಯಲು ಹಿಂಜರಿಯುವಂತಾಗಿದೆ. ಈ ಹಿನ್ನೆಲೆಯಲ್ಲಿ ನೀರಾವರಿ ಇಲಾಖೆಯಿಂದ ರೈತರಿಗೆ ಉಚಿತವಾಗಿ ತರಕಾರಿ ಬೀಜಗಳನ್ನು ನೀಡಲಾಗುತ್ತಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಡಾ.ಚಂದ್ರು ಲಮಾಣಿ ಹೇಳಿದರು.
ಪಟ್ಟಣದಲ್ಲಿ ತೋಟಗಾರಿಕೆ ಇಲಾಖೆಯಿಂದ ನೀರಾವರಿ ಹೊಂದಿದ ರೈತರಿಗೆ ಉಚಿತವಾಗಿ ತರಕಾರಿ ಬೀಜಗಳನ್ನು ವಿತರಿಸಿ ಅವರು ಮಾತನಾಡಿದರು.
ಈ ವರ್ಷ ಮುಂಗಾರು ಮತ್ತು ಹಿಂಗಾರು ಮಳೆ ಕೊರತೆಯಿಂದ ಸಂಪೂರ್ಣ ಬರಗಾಲ ಆವರಿಸಿದೆ. ತೋಟಗಾರಿಕೆ ಬೆಳೆಗಳಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಇಲಾಖೆ ಉಚಿತವಾಗಿ ಬೀಜಗಳನ್ನು ನೀಡಿರುವದು ಸೂಕ್ತವಾಗಿದೆ ಎಂದರು.
ಸಹಾಯಕ ಹಿರಿಯ ತೋಟಗಾರಿಕೆ ನಿರ್ದೇಶಕ ಸುರೇಶ ಕುಂಬಾರ ಮಾತನಾಡಿ, ಮಳೆಯ ಅಭಾವದಿಂದ ನೀರಾವರಿ ಕ್ಷೇತ್ರಗಳು ಕಡಿಮೆಯಾಗುತ್ತಿವೆ. ಆದರೆ ಇರುವ ನೀರಿನಲ್ಲಿಯೇ ತರಕಾರಿ ಬೆಳೆಗಳನ್ನು ಉತ್ತಮವಾಗಿ ಬೆಳೆದು ಅದರಿಂದ ರೈತರು ಲಾಭ ಮಾಡಿಕೊಳ್ಳಬಹುದಾಗಿದೆ. ಅಲ್ಪಾವದಿಯಲ್ಲಿ ತರಕಾರಿ ಬೆಳೆಗಳನ್ನು ಬೆಳೆಯಬಹುದಾಗಿದ್ದು, ರೈತರಿಗೆ ಸುಮಾರು ೨ ಸಾವಿರ ರೂ. ಬೆಲೆಯ ತರಕಾರಿ ಬೀಜಗಳನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಲಕ್ಷ್ಮೇಶ್ವರ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ, ತಹಸೀಲ್ದಾರ ವಾಸುದೇವ ಸ್ವಾಮಿ, ಆಡಳಿತಾಧಿಕಾರಿ ಜಗದೇವ ಬಿ. ಮತ್ತು ರೈತರು ಹಾಜರಿದ್ದರು.