ವಿಜಯಪುರ: ಕೃಷ್ಣಾ ನದಿಯ ಮೇಲೆ ಅವಲಂಬಿತವಾಗಿರುವ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಗಂಭೀರ ಸಂಕಷ್ಟ ಎದುರಾಗುವ ಭೀತಿ ಹೆಚ್ಚಾಗಿದೆ. ಆಲಮಟ್ಟಿ ಜಲಾಶಯದಲ್ಲಿ ಸದ್ಯ ಕೇವಲ 9 ಟಿಎಂಸಿ ಬಳಕೆಯ ನೀರು ಮಾತ್ರ ಉಳಿದಿದ್ದು, ಮುಂದಿನ ಮಳೆಗಾಲ ಆರಂಭವಾಗುವವರೆಗೂ ಇದೇ ನೀರಿನ ಮೇಲೆ ಲಕ್ಷಾಂತರ ಜನರು ಮತ್ತು ಜಾನುವಾರುಗಳು ಬದುಕು ಸಾಗಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ಈಗಾಗಲೇ ನೀರಿನ ಪೂರೈಕೆ ಅಸ್ತವ್ಯಸ್ತಗೊಂಡಿದೆ. ಕೆಲವು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಾರಕ್ಕೊಮ್ಮೆ ಮಾತ್ರ ನೀರು ಬಿಡಲಾಗುತ್ತಿದ್ದು, ಹಲವೆಡೆ 15 ದಿನಗಳಿಗೊಮ್ಮೆ ನೀರು ಪೂರೈಕೆ ನಡೆಯುತ್ತಿದೆ. ಬೇಸಿಗೆ ತೀವ್ರಗೊಂಡಿರುವ ಹಿನ್ನೆಲೆ ಜಲಾಶಯಗಳಲ್ಲಿ ಬಾಷ್ಪೀಕರಣ ಪ್ರಮಾಣವೂ ಹೆಚ್ಚಿದ್ದು, ಲಭ್ಯವಿರುವ ನೀರಿನ ಪ್ರಮಾಣ ವೇಗವಾಗಿ ಕುಸಿಯುತ್ತಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜೂನ್ ಮಧ್ಯಭಾಗದ ಬಳಿಕವೇ ಸಮರ್ಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಮುಂದಿನ ಒಂದು ತಿಂಗಳು ನೀರಿನ ನಿರ್ವಹಣೆ ಸರ್ಕಾರ ಮತ್ತು ಸ್ಥಳೀಯ ಆಡಳಿತಕ್ಕೆ ದೊಡ್ಡ ಸವಾಲಾಗಿದೆ. ಕೃಷ್ಣಾ ನದಿಗೆ ಪೂರಕವಾಗಿದ್ದ ಭೀಮಾ ನದಿಯೂ ಸಂಪೂರ್ಣ ಖಾಲಿಯಾಗಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ.
ಒಂದು ವೇಳೆ ಜೂನ್ ತಿಂಗಳಲ್ಲೂ ಮಳೆ ಕೈಕೊಟ್ಟರೆ, ವಿಜಯಪುರ-ಬಾಗಲಕೋಟೆ ಜಿಲ್ಲೆಗಳಲ್ಲಿ ಕುಡಿಯುವ ನೀರಿಗಾಗಿ ಸಂಘರ್ಷದ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎಂಬ ಆತಂಕ ಸಾರ್ವಜನಿಕರಲ್ಲಿ ಹೆಚ್ಚಾಗಿದೆ.



