ವಿಜಯಸಾಕ್ಷಿ ಸುದ್ದಿ, ಗದಗ: ಬೆಂಗಳೂರಿನ ಮೇತ್ರಿ ವೃತ್ತದ ಹತ್ತಿರ ಅರಮನೆ ಆವರಣ ತ್ರಿಪುರವಾಸಿನಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ ಹಾಗೂ ಜಿಲ್ಲೆ-ತಾಲೂಕು ಶಾಖೆಗಳ ನಿರ್ದೇಶಕರ-ಪದಾಧಿಕಾರಿಗಳ ಸಮಾವೇಶ ಹಾಗೂ ಕಾರ್ಯಾಗಾರ ಫೆ. 20ರಂದು ಬೆಳಿಗ್ಗೆ 11.45ಕ್ಕೆ ಜರುಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾದ್ಯಕ್ಷ ಸಿ.ಎಸ್. ಷಡಾಕ್ಷರಿ ಹಾಗೂ ರಾಜ್ಯ ಹಿರಿಯ ಉಪಾಧ್ಯಕ್ಷ ರವಿ ಗುಂಜೀಕರ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಈ ಕಾರ್ಯಕ್ರಮಕ್ಕೆ ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು ಶಾಖೆಗಳಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ಸಂಘದ ಚುನಾಯಿತ ನಿರ್ದೆಶಕರು ಮತ್ತು ಪದಾಕಾರಿಗಳು ಭಾಗವಹಿಸಲಿದ್ದಾರೆ.
ಫೆ. 20ರಂದು ಬೆಳಿಗ್ಗೆ 10ಕ್ಕೆ `ಪ್ರಜಾಸ್ನೇಹಿ ಆಡಳಿತ ಕಾರ್ಯಾಗಾರ’ ಆಯೋಜಿಸಿದ್ದು, ಆಡಳಿತದಲ್ಲಿ ದಕ್ಷತೆ, ಪಾರದರ್ಶಕತೆ, ಪ್ರಾಮಾಣಿಕತೆ ವಿಷಯ ಕುರಿತಂತೆ ಕರ್ನಾಟಕ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಉಪನ್ಯಾಸ ನೀಡಲಿದ್ದಾರೆ.
`ಸಾರ್ವಜನಿಕ ಸೇವೆಯಲ್ಲಿ ನೌಕರರ ಪಾತ್ರ’ ವಿಷಯ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಉಪನ್ಯಾಸ ನೀಡಲಿದ್ದಾರೆ. `ಮಾಹಿತಿ ಹಕ್ಕು ಅಧಿನಿಯಮ(2005) ಸವಾಲುಗಳು-ಪರಿಹಾರಗಳು’ ವಿಷಯವಾಗಿ ರಾಜ್ಯ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತರಾದ ರವೀಂದ್ರ ಗುರುನಾಥ ಧಾಕಪ್ಪ ಉಪನ್ಯಾಸ ನೀಡಲಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆಯೋಜಿಸಿರುವ ಈ ಸಮಾವೇಶ ಹಾಗೂ ಕಾರ್ಯಾಗಾರದಲ್ಲಿ ಸಂಘದ ಪದಾಧಿಕಾರಿಗಳು, ನಿರ್ದೇಶಕರು, ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.