ಅನುಮತಿ ಇಲ್ಲದೆ ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣ: ರಾಣಾ ನಟನೆಯ ಸಿನಿಮಾದ ಮೇಲೆ ಅರಣ್ಯ ಇಲಾಖೆಯಿಂದ ದಾಳಿ

0
Spread the love

ಇತ್ತೀಚಿನ ದಿನಗಳಲ್ಲಿ ಸಿನಿಮಾ ಚಿತ್ರೀಕರಣ, ಧಾರವಾಹಿ ಹೀಗೆ ಯಾವುದೇ ಚಿತ್ರೀಕರಣ  ಮಾಡಬೇಕು ಅಂದರೆ ಅನುಮತಿ ಪಡೆಯೋದು ಕಡ್ಡಾಯವಾಗಿದೆ. ಆದರೂ ಬಹುತೇಕ ಸಿನಿಮಾ ತಂಡಗಳು ಅನುಮತಿ ಪಡೆಯದೆ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದೆ. ಹೀಗೆ ಅನುಮತಿ ಇಲ್ಲದೆ ಅರಣ್ಯದಲ್ಲಿ, ಸಂರಕ್ಷಿತ ಅರಣ್ಯಗಳಲ್ಲಿ ಚಿತ್ರೀಕರಣ ಮಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ, ಚಿತ್ರತಂಡಗಳ ಮೇಲೆ ಕ್ರಮಕ್ಕೆ ಮುಂದಾಗಿದೆ. ಇದೀಗ ತುಮಕೂರಿನ ನಾಮಚಿಲುಮೆ ಬಳಿ ಅನುಮತಿ ಇಲ್ಲದೆ ಚಿತ್ರೀಕರಣ ಮಾಡುತ್ತಿದ್ದ ಚಿತ್ರತಂಡಕ್ಕೆ ಅರಣ್ಯ ಇಲಾಖೆ ಶಾಕ್‌ ನೀಡಿದೆ.

Advertisement

ನಟಿ ರಕ್ಷಿತಾ ಅವರ ಸಹೋದರ ರಾಣಾ ನಾಯಕನಾಗಿ ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ತುಮಕೂರಿನ ಬಳಿಕ ನಾಮಚಿಲುಮೆಯಲ್ಲಿ ನಡೆಯುತ್ತಿತ್ತು. ಕಳೆದ ಕೆಲ ದಿನಗಳಿಂದ ಚಿತ್ರೀಕರಣ ನಡೆಯುತ್ತಿದ್ದು ಇಂದು ಅರಣ್ಯ ಇಲಾಖೆ ಚಿತ್ರತಂಡಕ್ಕೆ ಶಾಕ್‌ ನೀಡಿದೆ.

ತುಮಕೂರು ಎಸಿಎಫ್​ ಪವಿತ್ರಾ ನೇತೃತ್ವದಲ್ಲಿ ಚಿತ್ರೀಕರಣ ನಡೆಯುತ್ತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ, ಚಿತ್ರೀಕರಣವನ್ನು ಬಂದ್ ಮಾಡಿಸಿದ್ದಲ್ಲದೆ, ಚಿತ್ರೀಕರಣಕ್ಕೆ ಬಳಸಿದ್ದ ಕೆಲ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ.

ತರುಣ್ ಸುಧೀರ್ ಕ್ರಿಯೇಟಿವ್ ಹೆಸರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದು ಸುಮಾರು 50-100 ಜನ ಈ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಿದ್ದರು. ಅನುಮತಿ ಇಲ್ಲದೆ ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಇಂದು ಅರಣ್ಯ ಇಲಾಖೆ ದಾಳಿ ನಡೆಸಿ ಸಿನಿಮಾ ಚಿತ್ರೀಕರಣಕ್ಕೆ ಬಳಸಲಾಗಿರುವ ಕ್ಯಾರವಾನ್, ಕ್ಯಾಮರಾ ಲೈಟ್, ಅಡುಗೆ ಸಾಮಗ್ರಿ, ಚೇರ್​ಗಳು, ಟೆಂಪೊ ಟ್ರಾವೆಲರ್ ಅನ್ನು ವಶಕ್ಕೆ ಪಡೆದುಕೊಂಡಿದೆ.

ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ಕೋರಿ ಈ ಮೊದಲೇ ಚಿತ್ರತಂಡ ಅರ್ಜಿ ಸಲ್ಲಿಸಿತ್ತಂತೆ. ಆದರೆ ಅರಣ್ಯ ಇಲಾಖೆ ಅನುಮತಿ ನೀಡಿರಲಿಲ್ಲ. ಫೆಬ್ರವರಿ 4, 18, 20ರಂದು ಶೂಟಿಂಗ್​ಗೆ ಅನುಮತಿ ‌ನೀಡುವಂತೆ ಪತ್ರ, ಜೊತೆಗೆ ಫೆ.13, 14, 18ರಂದು ಚಿತ್ರೀಕರಣಕ್ಕೆ ಅನುಮತಿ ನೀಡಲು ಪತ್ರ ಬರೆಯಲಾಗಿತ್ತು. ಆದರೆ ಅರಣ್ಯ ಇಲಾಖೆ ಅನುಮತಿ ನೀಡದ ಕಾರಣ, ಅನುಮತಿಯ ಹೊರತಾಗಿಯೂ ಚಿತ್ರತಂಡ ಚಿತ್ರೀಕರಣ ಶುರು ಮಾಡಿತ್ತು. ಇದೇ ಕಾರಣಕ್ಕೆ ಅರಣ್ಯ ಇಲಾಖೆಯವರು ಈಗ ಚಿತ್ರೀಕರಣ ಬಂದ್ ಮಾಡಿಸಿ, ಚಿತ್ರೀಕರಣಕ್ಕೆ ಬಳಸಿದ್ದ ವಸ್ತುಗಳನ್ನು ಸೀಜ್ ಮಾಡಿ ತೆಗೆದುಕೊಂಡು ಹೋಗಿದ್ದಾರೆ.


Spread the love

LEAVE A REPLY

Please enter your comment!
Please enter your name here