ವಿಜಯಸಾಕ್ಷಿ ಸುದ್ದಿ, ನರೇಗಲ್ಲ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸಮೀಪದ ಜಕ್ಕಲಿ ಗ್ರಾಮದಲ್ಲಿ ಶ್ರೀ ಸ್ವಾಮಿ ವಿವೇಕಾನಂದ ಯುವಸೇವಾ ಸಂಘದ ವತಿಯಿಂದ ಆ.14ರಂದು ಮಧ್ಯರಾತ್ರಿ 12 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಮಿಥುನ್ ಗಾಣಿಗೇರ ತಿಳಿಸಿದರು.
ನರೇಗಲ್ಲ ಹಿರೇಮಠದ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕೊಪ್ಪಳ ಜಿಲ್ಲೆಯ ಕುಣಿಕೇರಿ ಗ್ರಾಮದ ಸಮಾಜಸೇವಕಿ ಹಾಗೂ ದಾನಿ ಹುಚ್ಚಮ್ಮ ಚೌದ್ರಿ ಪಾಲ್ಗೊಳ್ಳಲಿದ್ದಾರೆ. ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆ ನಿರ್ಮಿಸಲು ತಮ್ಮ ಎರಡು ಎಕರೆ ಜಮೀನು ದಾನ ಮಾಡಿರುವ ಅವರ ನಿಸ್ವಾರ್ಥ ಸೇವೆಯನ್ನು ಗೌರವಿಸುವ ಉದ್ದೇಶದಿಂದ ಆಹ್ವಾನಿಸಲಾಗಿದೆ ಎಂದರು.
ಹುಚ್ಚಮ್ಮ ಚೌದ್ರಿ ಅವರು ತಮ್ಮೂರಿನ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕು ಎಂಬ ಆಶಯದಿಂದ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕೋಟ್ಯಂತರ ರೂಪಾಯಿ ಮೌಲ್ಯದ ಎರಡು ಎಕರೆ ಜಮೀನನ್ನು ಸರ್ಕಾರಿ ಶಾಲೆ ನಿರ್ಮಾಣಕ್ಕೆ ನೀಡಿದ್ದಾರೆ. ಹಲವು ವರ್ಷ ಇದೇ ಶಾಲೆಯಲ್ಲಿ ಬಿಸಿಯೂಟದ ಅಡುಗೆ ಕೆಲಸ ಮಾಡಿದ್ದ ಅವರು, ಇಂದಿಗೂ ಸರಳ ಜೀವನ ನಡೆಸುತ್ತ ಕೂಲಿ ಕೆಲಸ ಮಾಡುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಕರ್ನಾಟಕ ಸರ್ಕಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.
ಆ.14ರಂದು ಸಂಜೆ 6ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಮಧ್ಯರಾತ್ರಿ 12ಕ್ಕೆ ಧ್ವಜಾರೋಹಣ ನೆರವೇರಲಿದೆ. ಇದೇ ವೇಳೆ ಅಮೋಘ ಭಾರತ, ಪ್ರಥಿಕ್ ಕುಂದಗೋಳ, ಮಾಜಿ ಸೈನಿಕರಾದ ಮಲ್ಲಪ್ಪ ಮುಗಳಿ, ಬಸವರಾಜ ಕೋರಿ, ಮಹೇಶ್ವರಯ್ಯ ಹಿರೇಮಠ, ಯುವ ಸಾಧಕಿಯರಾದ ಪ್ರೀತಿ ಬುಳ್ಳಾ ಹಾಗೂ ಸೃಷ್ಟಿ ಮೇಟಿ ಅವರನ್ನು ಸನ್ಮಾನಿಸಲಾಗುವುದು.
ಗ್ರಾಮದ ಮಕ್ಕಳು, ಯುವಕರು, ಮಹಿಳೆಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಿಥುನ ಗಾಣಿಗೇರ ಮನವಿ ಮಾಡಿದರು.

