ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ ಚಿರತೆಯನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಯಡಮೊಗೆ ಗ್ರಾಮದ ಸಾಲಿಮಕ್ಕಿಯ ಮಂಜುನಾಥ ಶೆಟ್ಟಿ, ಕಾವ್ರಾಡಿ ಗ್ರಾಮದ ಕಂಡೂರಿನ ನದೀಮ್ ಕರಾಣಿ ಹಾಗೂ ಯಡಮೊಗೆ ಗ್ರಾಮದ ಹನೆಬಚ್ಚಲು ನಿವಾಸಿಗಳಾದ ನಾಗರಾಜ ಭೋವಿ ಮತ್ತು ವೆಂಕಟರಮಣ ಭೋವಿ ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರಿಂದ ಚಿರತೆಯ ನಾಲ್ಕು ಕಾಲಿನ ಉಗುರುಗಳು, ಮೂಳೆಯ ಭಾಗಗಳು, ಒಂದು ಬಂದೂಕು, ಐದು ಜೀವಂತ ಗುಂಡುಗಳು ಹಾಗೂ ಎರಡು ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿದ್ದಾಪುರ–ಶಿವಮೊಗ್ಗ ಜಿಲ್ಲಾ ರಸ್ತೆ ಸಮೀಪ ಫೆಬ್ರವರಿ 4ರಂದು ಚಿರತೆಯೊಂದನ್ನು ಕೊಂದು ಹಾಕಿರುವ ಬಗ್ಗೆ ಶಂಕರನಾರಾಯಣ ಅರಣ್ಯ ವಲಯದಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ತನಿಖೆ ಕೈಗೊಂಡ ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ಮೇ 21ರಂದು ಆರೋಪಿ ಮಂಜುನಾಥ ಶೆಟ್ಟಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದರು.
ಆತ ನೀಡಿದ ಮಾಹಿತಿಯ ಆಧಾರದ ಮೇಲೆ ಉಳಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.
ಬಂಧಿತ ಆರೋಪಿಗಳನ್ನು ಕುಂದಾಪುರ ಪ್ರಧಾನ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಪ್ರಕರಣದ ತನಿಖೆ ವೇಳೆ ಕುಂದಾಪುರ ಭಾಗದ ವಿವಿಧ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಹಕಾರ ನೀಡಿದ್ದಾರೆ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.



