ಬೆಂಗಳೂರು: ಕರ್ನಾಟಕದ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ವಿದ್ಯಾ ವಿಕಾಸ ಯೋಜನೆಯಡಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕಗಳ ಜೊತೆಗೆ ನೋಟ್ಬುಕ್ಗಳನ್ನು ಸಹ ಉಚಿತವಾಗಿ ವಿತರಿಸಲು ಸರ್ಕಾರ ಒಪ್ಪಿಗೆ ಸೂಚಿಸಿದೆ.
2026–27ನೇ ಶೈಕ್ಷಣಿಕ ಸಾಲಿನಲ್ಲಿ 1ರಿಂದ 10ನೇ ತರಗತಿಯವರೆಗೆ ಓದುತ್ತಿರುವ ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ನೀಡಲು ಅನುಮೋದನೆ ನೀಡಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಶುಭಮಂಗಳಾ ಅವರು ಆದೇಶ ಹೊರಡಿಸಿದ್ದಾರೆ. ಇದರಿಂದ ಸುಮಾರು 61 ಲಕ್ಷ ವಿದ್ಯಾರ್ಥಿಗಳಿಗೆ ಲಾಭವಾಗಲಿದೆ.
ಈ ಮೂಲಕ ರಾಜ್ಯದಲ್ಲಿ ಮೊದಲ ಬಾರಿಗೆ 1ರಿಂದ 12ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕದ ಜೊತೆಗೆ ನೋಟ್ಬುಕ್ ವಿತರಣೆ ಮಾಡಲಾಗುತ್ತಿದೆ. ಈ ಹಿಂದೆ 1ರಿಂದ 10ನೇ ತರಗತಿಯವರೆಗೆ ಪಠ್ಯಪುಸ್ತಕ ಮಾತ್ರ ನೀಡಲಾಗುತ್ತಿದ್ದು, ನೋಟ್ಬುಕ್ಗಳನ್ನು ಪೋಷಕರು ಖರೀದಿಸಬೇಕಾಗಿತ್ತು. ಇದೀಗ 11 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೂ ಪುಸ್ತಕಗಳನ್ನು ನೀಡಲಾಗುತ್ತಿರುವುದರಿಂದ ಪೋಷಕರ ಆರ್ಥಿಕ ಹೊರೆ ಗಣನೀಯವಾಗಿ ಕಡಿಮೆಯಾಗಲಿದೆ.
ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಅಭ್ಯಾಸ ಪುಸ್ತಕ ಹಾಗೂ 1ರಿಂದ 12ನೇ ತರಗತಿಯವರೆಗೆ ದಿನಚರಿ ಪುಸ್ತಕ ವಿತರಿಸಲು ಶಿಕ್ಷಣ ಇಲಾಖೆ ಸರ್ಕಾರಕ್ಕೆ 30 ಕೋಟಿ 83 ಲಕ್ಷ 25 ಸಾವಿರ ರೂ. ಪ್ರಸ್ತಾವನೆ ಸಲ್ಲಿಸಿತ್ತು. ಸರ್ಕಾರ ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿದ್ದು, ಶಾಲಾ ಶಿಕ್ಷಣ ಇಲಾಖೆಗೆ 290.46 ಕೋಟಿ ರೂ. ಅನುದಾನಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲೇ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ. ಪಠ್ಯಪುಸ್ತಕಗಳ ಕಾಗದ ಮತ್ತು ಮುದ್ರಣ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು, ಹೆಚ್ಚುವರಿ ಪುಸ್ತಕಗಳಿಗೆ ಸುಳ್ಳು ಬೇಡಿಕೆ ಸಲ್ಲಿಸಿ ಸರ್ಕಾರದ ಹಣ ದುರುಪಯೋಗ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.
ಇದಲ್ಲದೆ, ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ದ್ವಿಭಾಷಾ ಬಾಲ ಚೇತನ ಚಟುವಟಿಕೆ ಪುಸ್ತಕಗಳು, 4ರಿಂದ 9ನೇ ತರಗತಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅಭ್ಯಾಸ ಪುಸ್ತಕಗಳು, ಪೂರ್ವ ಪ್ರಾಥಮಿಕದಿಂದ 12ನೇ ತರಗತಿಯವರೆಗೆ ದಿನಚರಿ ಪುಸ್ತಕಗಳು ಹಾಗೂ 1ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ವಿತರಿಸಲು ಸೂಚಿಸಲಾಗಿದೆ.
ಕೆಟಿಪಿಪಿ ಕಾಯ್ದೆ–1999ರ ನಿಯಮಗಳಂತೆ ಪಾರದರ್ಶಕ ಟೆಂಡರ್ ಮೂಲಕ ಕರ್ನಾಟಕ ಪುಸ್ತಕ ಸಂಘದ ಮೂಲಕ ಪುಸ್ತಕಗಳನ್ನು ಮುದ್ರಿಸಿ ವಿತರಿಸಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಒಟ್ಟು 264.62 ಕೋಟಿ ರೂ. ವೆಚ್ಚದಲ್ಲಿ ವಿದ್ಯಾ ವಿಕಾಸ ಯೋಜನೆಯಡಿ ಪುಸ್ತಕ ವಿತರಣೆಗೆ ಅನುಮೋದನೆ ನೀಡಲಾಗಿದೆ. ಸಮಗ್ರ ಶಿಕ್ಷಣ ಕರ್ನಾಟಕದಡಿ ಹೊಸ ಕಾರ್ಯಕ್ರಮಗಳಿಗೆ 25.841 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ.
ಶೈಕ್ಷಣಿಕ ವರ್ಷದ ಆರಂಭದಲ್ಲೇ ಪಠ್ಯಪುಸ್ತಕಗಳು ವಿದ್ಯಾರ್ಥಿಗಳಿಗೆ ತಲುಪುವಂತೆ ಎಸ್ಎಟಿಎಸ್ ಮೂಲಕ ಶಾಲೆಗಳಿಂದ ಬೇಡಿಕೆಯ ಮಾಹಿತಿಯನ್ನು ಪಡೆದು ಎಲ್ಲಾ ವಿವರಗಳನ್ನು ದಾಖಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.



