HomeGadag Newsಶಿಕ್ಷಕರ ನಿರಂತರ ಪರಿಶ್ರಮದಿಂದ ಗದಗಕ್ಕೆ ಶೇ.94 ಎಸ್‌ಎಸ್‌ಎಲ್‌ಸಿ ಫಲಿತಾಂಶ: ಸಂಕನೂರ

ಶಿಕ್ಷಕರ ನಿರಂತರ ಪರಿಶ್ರಮದಿಂದ ಗದಗಕ್ಕೆ ಶೇ.94 ಎಸ್‌ಎಸ್‌ಎಲ್‌ಸಿ ಫಲಿತಾಂಶ: ಸಂಕನೂರ

ವಿಜಯಸಾಕ್ಷಿ ಸುದ್ದಿ, ಗದಗ: ಶಿಕ್ಷಕರು ಆಧುನಿಕ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಸಮಯ ಮೀಸಲಿಡಬೇಕು. ಬೋಧನಾ ಕಾರ್ಯಕ್ಕೆ ಆದ್ಯತೆ ನೀಡುವ ಮೂಲಕ ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಹೇಳಿದರು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯದ ಸರಾಸರಿ ಫಲಿತಾಂಶ ಶೇ.93 ಇದ್ದರೆ, ಗದಗ ಜಿಲ್ಲೆ ಶೇ.94ರಷ್ಟು ಫಲಿತಾಂಶ ದಾಖಲಿಸಿ ರಾಜ್ಯದ ಸರಾಸರಿಯನ್ನು ಮೀರಿದೆ. ಇದಕ್ಕೆ ಜಿಲ್ಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ನಿರಂತರ ಪರಿಶ್ರಮವೇ ಕಾರಣ ಎಂದು ಸಂಕನೂರ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲಾ ಅವಧಿಗೂ ಮುನ್ನ ಹಾಗೂ ನಂತರ ಪರಿಹಾರ ಬೋಧನೆ, ಪರೀಕ್ಷಾ ಸಂದರ್ಭದಲ್ಲಿ ‘ಓದಿನ ಮನೆ’ ಸೇರಿದಂತೆ ವಿವಿಧ ಶೈಕ್ಷಣಿಕ ಚಟುವಟಿಕೆಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಶ್ರಮಿಸಿದ ಶಿಕ್ಷಕರ ಸೇವೆಯನ್ನು ಶ್ಲಾಘಿಸಿದರು.

ಶಾಲೆಗಳಲ್ಲಿ ಆನ್‌ಲೈನ್ ಹಾಗೂ ಡಿಜಿಟಲ್ ಕಾರ್ಯಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಂಪ್ಯೂಟರ್ ಅಥವಾ ಡೇಟಾ ಎಂಟ್ರಿ ಆಪರೇಟರ್‌ಗಳಂತಹ ಸಹಾಯಕ ಸಿಬ್ಬಂದಿ ಒದಗಿಸುವ ಕುರಿತು ಸರ್ಕಾರ ಗಮನಹರಿಸಬೇಕು. ಇದರಿಂದ ಶಿಕ್ಷಕರು ಬೋಧನೆ, ವಿದ್ಯಾರ್ಥಿಗಳ ಮಾರ್ಗದರ್ಶನ ಹಾಗೂ ಕಲಿಕಾ ಚಟುವಟಿಕೆಗಳಿಗೆ ಹೆಚ್ಚಿನ ಸಮಯ ನೀಡಲು ಸಾಧ್ಯವಾಗುತ್ತದೆ ಎಂದರು.

ಕನ್ನಡದ ಜತೆಗೆ ಇಂಗ್ಲಿಷ್‌ನಲ್ಲಿಯೂ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ಅವಕಾಶ ಕಲ್ಪಿಸಲು ದ್ವಿಭಾಷಾ ಬೋಧನಾ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಶಿಕ್ಷಕರಿಗೆ ಆರು ತಿಂಗಳಿಂದ ಒಂದು ವರ್ಷದವರೆಗೆ ಹಂತ ಹಂತವಾಗಿ ತರಬೇತಿ ನೀಡಿದರೆ ಆತ್ಮವಿಶ್ವಾಸದಿಂದ ದ್ವಿಭಾಷಾ ಬೋಧನೆ ನಡೆಸಲು ಅನುಕೂಲವಾಗಲಿದೆ ಎಂದು ಸಲಹೆ ನೀಡಿದರು.

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜೀವನ, ಜ್ಞಾನ, ಸರಳತೆ ಹಾಗೂ ನಿರಂತರ ಕಲಿಕೆಯ ಮನೋಭಾವ ಪ್ರತಿಯೊಬ್ಬ ಶಿಕ್ಷಕರಿಗೂ ಪ್ರೇರಣೆಯಾಗಬೇಕು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿ, ವಿಶ್ವವಿದ್ಯಾಲಯದ ಕುಲಪತಿ, ಉಪರಾಷ್ಟ್ರಪತಿ ಹಾಗೂ ರಾಷ್ಟ್ರಪತಿ ಹುದ್ದೆಗೇರಿದ ಅವರ ಜೀವನ ಶಿಕ್ಷಕರಿಗೆ ಆದರ್ಶವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಶಿಕ್ಷಕರನ್ನು ಗೌರವಿಸಲಾಯಿತು. ನಿವೃತ್ತ ಶಿಕ್ಷಕರನ್ನೂ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿದ್ದು ಪಾಟೀಲ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಎಸ್. ಬುರಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ವಿ. ಬಳ್ಳಾರಿ, ನಿವೃತ್ತ ಶಿಕ್ಷಕ ಎಸ್.ಎನ್. ಬಳ್ಳಾರಿ ಸೇರಿದಂತೆ ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ಕೆ.ಡಿ. ಬಡಿಗೇರ ಸ್ವಾಗತಿಸಿದರು. ಎಂ.ಎಂ. ಮೇಗಲಮನಿ ನಿರೂಪಿಸಿ, ವಂದಿಸಿದರು.

ಶಿಕ್ಷಕ ವೃತ್ತಿ ಸಮಾಜ ನಿರ್ಮಾಣದ ಪ್ರಮುಖ ಕೊಂಡಿಯಾಗಿದೆ. ಶಿಕ್ಷಕರು ಪಠ್ಯ ಬೋಧನೆಗೆ ಮಾತ್ರ ಸೀಮಿತವಾಗದೆ, ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯಗಳು, ಶಿಸ್ತು, ಜವಾಬ್ದಾರಿ ಹಾಗೂ ಆತ್ಮವಿಶ್ವಾಸ ಬೆಳೆಸುವ ಕೆಲಸಕ್ಕೂ ಆದ್ಯತೆ ನೀಡಬೇಕು. ಶಿಕ್ಷಕರ ಗೌರವ ಮತ್ತು ಘನತೆ ಎತ್ತಿಹಿಡಿದಾಗ ಮಾತ್ರ ಉತ್ತಮ ಶಿಕ್ಷಣ ವ್ಯವಸ್ಥೆ ನಿರ್ಮಿಸಲು ಸಾಧ್ಯ.

— ಎಸ್.ವಿ. ಸಂಕನೂರ, ವಿಧಾನ ಪರಿಷತ್ ಶಾಸಕ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img