HomeGadag Newsಸಂಘಟಿತ ಪ್ರಯತ್ನದಿಂದ ಗದಗ ಮುಂಚೂಣಿಯಲ್ಲಿದೆ: ಸಿ.ಎನ್. ಕುಂದಗೋಳ

ಸಂಘಟಿತ ಪ್ರಯತ್ನದಿಂದ ಗದಗ ಮುಂಚೂಣಿಯಲ್ಲಿದೆ: ಸಿ.ಎನ್. ಕುಂದಗೋಳ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯಾದ್ಯಂತ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ಗದಗ ಜಿಲ್ಲೆ ಶೇ.93ರಷ್ಟು ಸಾಧನೆ ದಾಖಲಿಸಿ ರಾಜ್ಯದಲ್ಲಿ ಅತ್ಯುತ್ತಮ ಸ್ಥಾನ ಗಳಿಸಿದ್ದು, ಈ ಸಾಧನೆಗೆ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಸಿ.ಎನ್. ಕುಂದಗೋಳ ಮೆಚ್ಚುಗೆ ವ್ಯಕ್ತಪಡಿಸಿದರು.

ಗದಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಆಯೋಗ ನಿಗದಿಪಡಿಸಿದ ಅವಧಿಯೊಳಗೆ ಗದಗ ಜಿಲ್ಲೆಯಲ್ಲಿ ಸಮೀಕ್ಷೆ ಕಾರ್ಯ ಅತ್ಯಂತ ಶ್ರದ್ಧೆಯಿಂದ ಹಾಗೂ ಯೋಜಿತವಾಗಿ ನಡೆಯುತ್ತಿದೆ. ಜಿಲ್ಲೆಯಲ್ಲಿ 6 ಸಾವಿರಕ್ಕೂ ಹೆಚ್ಚು ಎನ್‌ಎಸ್‌ಎಸ್ ವಿದ್ಯಾರ್ಥಿಗಳನ್ನು ಸಮೀಕ್ಷಾ ಕಾರ್ಯದಲ್ಲಿ ಬಳಸಿರುವುದು ಶ್ಲಾಘನೀಯ. ಅವರು ಮನೆಮನೆಗೆ ತೆರಳಿ ಜನರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಯ ಕುರಿತು ಮಾಹಿತಿಯನ್ನು ಸಂಗ್ರಹಿಸಲು ಸಮೀಕ್ಷಾದಾರರು ಆಗಮಿಸುವ ಕುರಿತು ಸರಿಯಾದ ಮಾಹಿತಿ ನೀಡುವಂತೆ ಮೊದಲೇ ಜಾಗೃತಿ ಮೂಡಿಸಿದ್ದು ಪ್ರಗತಿ ಸಾಧಿಸಲು ಸಹಕಾರಿಯಾಗಿದೆ. ಈ ರೀತಿಯ ಸಂಘಟಿತ ಪ್ರಯತ್ನದಿಂದಲೇ ಗದಗ ಜಿಲ್ಲೆ ರಾಜ್ಯದ ಶ್ರೇಷ್ಠ ಜಿಲ್ಲೆಗಳ ಪೈಕಿ ಒಂದಾಗಿದೆ ಎಂದು ಹೇಳಿದರು.

ಸಮೀಕ್ಷೆಯಲ್ಲಿ ಸಹಕರಿಸಿದ ಜಿಲ್ಲಾಧಿಕಾರಿಗಳು, ಇಲಾಖಾ ಮುಖ್ಯಸ್ಥರು, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು. ಗದಗ ಜಿಲ್ಲೆಯ ಈ ಮಾದರಿ ಪ್ರಗತಿ ರಾಜ್ಯದ ಇತರ ಜಿಲ್ಲೆಗಳಿಗೂ ಪ್ರೇರಣೆಯಾಗಲಿ ಎಂದು ಹೇಳಿದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಸಮೀಕ್ಷೆಯ ಯಶಸ್ಸಿಗೆ ಎಲ್ಲಾ ಇಲಾಖೆಗಳ ಸಂಯೋಜನೆ ಮುಖ್ಯ ಪಾತ್ರ ವಹಿಸಿದೆ. ನಗರಸಭೆಯ ವಾಹನಗಳಲ್ಲಿ ಜಿಂಗಲ್‌ಗಳ ಮೂಲಕ ಜನಜಾಗೃತಿ ಮೂಡಿಸಲಾಯಿತು. ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಹಾಗೂ ಆಶಾ ಕಾರ್ಯಕರ್ತೆಯರು ಸಮೀಕ್ಷಾ ಕಾರ್ಯದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಸಮೀಕ್ಷೆಯಲ್ಲಿ ಒಟ್ಟು 65 ಪ್ರಶ್ನೆಗಳಿದ್ದು, ಅವುಗಳನ್ನು ಜನರಿಗೆ ಸರಳವಾಗಿ ಅರ್ಥವಾಗುವಂತೆ ತಿಳಿಸಿ ಮಾಹಿತಿ ಸಂಗ್ರಹಿಸಲಾಗಿದೆ.

ಇದೇ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಸಿ.ಎನ್. ಕುಂದಗೋಳ ಅವರನ್ನು ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು. ಸಭೆಯಲ್ಲಿ ಸಮೀಕ್ಷೆಯ ಜಿಲ್ಲಾ ನೋಡಲ್ ಅಧಿಕಾರಿ ಸೈದಾ ಬಳ್ಳಾರಿ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಸಹಾಯಕ ಆಯುಕ್ತ ಗಂಗಪ್ಪ ಎಂ, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಬಿಸಿಎಂ ಜಿಲ್ಲಾ ಅಧಿಕಾರಿ ಎಂ.ಎಂ. ತುಂಬರಮಟ್ಟಿ ಸೇರಿದಂತೆ ಆರ್.ಎಸ್. ಬುರಡಿ, ಅಮಿತ್ ಬಿದರಿ, ಶ್ರೀಶೈಲ್ ಸೋಮನಕಟ್ಟಿ, ಕೆ. ಮಲ್ಲಯ್ಯ, ಡಾ. ನಂದಾ ಹಣಬರಟ್ಟಿ, ಡಾ. ಬಸವರಾಜ ಬಳ್ಳಾರಿ, ರಾಜಾರಾಮ ಪವಾರ್, ವಸಂತ ಮಡ್ಲೂರ, ತಹಸೀಲ್ದಾರರು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಬಿಇಓಗಳು ಉಪಸ್ಥಿತರಿದ್ದರು.

ಇದುವರೆಗೆ ಶೇ.93 ಕಾರ್ಯ ಪೂರ್ಣಗೊಂಡಿದ್ದು, ಹೊಸ 4 ಮತ್ತು 5ನೇ ಆ್ಯಪ್ ವರ್ಷನ್‌ಗಳ ಮೂಲಕ ಡೇಟಾ ಸಂಗ್ರಹ ಕಾರ್ಯ ಸರಳವಾಗಿ ಹಾಗೂ ನಿಖರವಾಗಿ ನಡೆಯುತ್ತಿದೆ. ಇನ್ನೆರಡು ದಿನಗಳಲ್ಲಿ ಸಂಪೂರ್ಣ ಸಮೀಕ್ಷೆ ಮುಕ್ತಾಯಗೊಳ್ಳಲಿದೆ. ತಮ್ಮ ಇಲಾಖೆಯ ಕೆಲಸದ ನಡುವೆಯೂ ಸಮೀಕ್ಷೆ ಸಮಯಕ್ಕೆ ಪೂರ್ಣಗೊಳ್ಳುವಂತೆ ಕ್ಷೇತ್ರ ಮಟ್ಟದಲ್ಲಿ ಹೆಸ್ಕಾಂ ನೌಕರರು ಸಹಕಾರ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮೆಚ್ಚುಗೆ ವ್ಯಕ್ತಪಡಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!