ವಿಜಯಸಾಕ್ಷಿ ಸುದ್ದಿ, ಗದಗ: ಗದುಗಿನ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯಕ್ಕೆ ಸಹಕಾರಿ ರಂಗದ ಭೀಷ್ಮರೆಂದೇ ಹೆಸರಾಗಿರುವ ಕೆ.ಎಚ್. ಪಾಟೀಲರ ಹೆಸರನ್ನಿಡಲು ಸಚಿವ ಸಂಪುಟ ನಿರ್ಧರಿಸಿದೆ.
ಗುರುವಾರ ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರದ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ಮಾಹಿತಿ ನೀಡಿದ್ದು, ಸಹಕಾರಿ ರಂಗದಲ್ಲಿ ಅನುಪಮ ಸೇವೆ ಸಲ್ಲಿಸಿದ ಕೆ.ಎಚ್. ಪಾಟೀಲರು ಸಚಿವರಾಗಿ, ಶಾಸಕರಾಗಿ ಜನೋಪಯೋಗಿ ಕಾರ್ಯಗಳನ್ನು ಕೈಗೊಂಡು ಜನಮಾನಸದಲ್ಲಿ ಅಜರಾಮರರಾಗಿದ್ದಾರೆ. ಇಂತಹ ಮಹಾನ್ ನಾಯಕನ ಹೆಸರನ್ನು ಸಾರ್ವಜನಿಕ ಸೇವೆ ಮಾಡುತ್ತಿರುವ ಗದಗ ಮೆಡಿಕಲ್ ಕಾಲೇಜಿಗೆ ನಾಮಕರಣ ಮಾಡುವ ಮೂಲಕ ಅವರ ಸೇವೆಯನ್ನು ಗೌರವಿಸುವ, ಶಾಶ್ವತವಾಗಿಸುವ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.
ಇದೇ ಮಾರ್ಚ್ 16ರಂದು ಗದಗದಲ್ಲಿ ಮಾಜಿ ಸಚಿವ ಕೆ.ಎಚ್. ಪಾಟೀಲ ಜನ್ಮಶತಮಾನೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂದೇಶ ನೀಡಿ, ಕೆ.ಎಚ್. ಪಾಟೀಲರು ನಾಡು-ನುಡಿಗೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ, ಗದಗ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯಕ್ಕೆ ಕೆ.ಎಚ್. ಪಾಟೀಲರ ಹೆಸರಿಡಲಾಗುವುದು ಎಂದು ಭರವಸೆ ನೀಡಿದ್ದರು.
ಅದರಂತೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತವಾಗಿ ನಿರ್ಧಾರವನ್ನು ಪ್ರಕಟಿಸಿದ್ದು, ಕೆ.ಎಚ್. ಪಾಟೀಲರ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.