ಗದಗ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ಗಳ ಕೊರತೆಯಿಂದ ಪ್ರಯಾಣಿಕರು ತೀವ್ರ ಪರದಾಟ ಅನುಭವಿಸಿದರು. ಭಾನುವಾರ ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ತೆರಳಲು ಭಕ್ತರು ಬೆಳಗ್ಗಿನಿಂದಲೇ ಬಸ್ ನಿಲ್ದಾಣಕ್ಕೆ ಆಗಮಿಸಿದರೂ, ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಗಂಟೆಗಳ ಕಾಲ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ವಿಶೇಷವಾಗಿ ಸವದತ್ತಿ ಯಲ್ಲಮ್ಮ ದೇವಸ್ಥಾನ ಹಾಗೂ ಇಟಗಿ ಭೀಮಾಂಬಿಕೆ ದೇವಸ್ಥಾನಗಳಿಗೆ ತೆರಳುವ ಭಕ್ತರು ಹೆಚ್ಚು ಸಂಖ್ಯೆಯಲ್ಲಿ ಸೇರಿದ್ದು, ಬಸ್ ಸಿಗದೆ ಆತಂಕ ವ್ಯಕ್ತಪಡಿಸಿದರು.
ದೂರದ ಊರುಗಳಿಗೆ ತೆರಳಲು ಬೆಳಗ್ಗೆ 7 ಗಂಟೆಗೆ ಬಂದ ಪ್ರಯಾಣಿಕರು, ಬೆಳಗ್ಗೆ 9.30 ಆದರೂ ಬಸ್ಗಳು ಬಾರದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಬಸ್ಗಳನ್ನು ನಿಯೋಜಿಸಬೇಕಾಗಿದ್ದರೆ, ಬಸ್ಗಳ ಕೊರತೆ ಜನರಿಗೆ ತೊಂದರೆ ತಂದಿದೆ ಎಂದು ಸಾರ್ವಜನಿಕರು ಆರೋಪಿಸಿದರು.
ಹಾವೇರಿ ಜಿಲ್ಲೆಯಲ್ಲಿ ಇಂದು ನಡೆಯಲಿರುವ ಸರ್ಕಾರಿ ಕಾರ್ಯಕ್ರಮಕ್ಕೆ ಗದಗ ಜಿಲ್ಲೆಯಿಂದ ಸುಮಾರು 250 ಬಸ್ಗಳನ್ನು ಕಳುಹಿಸಿರುವುದರಿಂದ ಸ್ಥಳೀಯ ಪ್ರಯಾಣಿಕರಿಗೆ ಬಸ್ಗಳ ಕೊರತೆ ಉಂಟಾಗಿದೆ. ಇದರ ಪರಿಣಾಮವಾಗಿ ಕೇಂದ್ರ ಬಸ್ ನಿಲ್ದಾಣದಲ್ಲಿ ಜನಸಂದಣಿ ಹೆಚ್ಚಾಗಿ, ಗೊಂದಲದ ವಾತಾವರಣ ನಿರ್ಮಾಣವಾಗಿದೆ.
ಸರ್ಕಾರ ಯಾವುದೇ ಕಾರ್ಯಕ್ರಮ ನಡೆಸಿದರೂ ಜನರಿಗೆ ತೊಂದರೆ ಆಗಬಾರದು. ಆದರೆ ಸರ್ಕಾರದ ನಿರ್ಧಾರಗಳಿಂದಲೇ ಸಾರ್ವಜನಿಕರಿಗೆ ತೊಂದರೆ ಉಂಟಾದರೆ ಹೇಗೆ ಎಂಬ ಪ್ರಶ್ನೆ ಜನರಿಂದ ಕೇಳಿ ಬರುತ್ತಿದೆ.



