ಗದಗ: ವರ್ಷಗಳಿಂದ ಗಲಭೆ, ಜಾತಿ ನಿಂದನೆ, ಮಹಿಳೆಯರ ಮೇಲಿನ ದೌರ್ಜನ್ಯ, ಜೂಜಾಟ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಜೀವ ಬೆದರಿಕೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದ ನಾಲ್ವರು ಕುಖ್ಯಾತ ಆರೋಪಿಗಳ ವಿರುದ್ಧ ಗದಗ ಜಿಲ್ಲಾ ಪೊಲೀಸ್ ಇಲಾಖೆ ಖಡಕ್ ಕ್ರಮ ಕೈಗೊಂಡಿದೆ.
ಸಮಾಜದ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದಾರೆ ಎಂಬ ಕಾರಣಕ್ಕೆ ನಾಲ್ವರು ಆರೋಪಿಗಳನ್ನು ವಿವಿಧ ಜಿಲ್ಲೆಗಳಿಗೆ ಗಡಿಪಾರು ಮಾಡುವಂತೆ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವರದಿ, ಆರೋಪಿಗಳ ಅಪರಾಧ ಹಿನ್ನೆಲೆ ಹಾಗೂ ಸಾರ್ವಜನಿಕ ಹಿತಾಸಕ್ತಿಯನ್ನು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಸಮಾಜವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಈ ಮೂಲಕ ಸ್ಪಷ್ಟ ಸಂದೇಶ ರವಾನಿಸಿದೆ.
ಗಡಿಪಾರು ಆದ ಆರೋಪಿಗಳ ವಿವರ:
ಹರೀಶ ಮೀರಪ್ಪ ಹೊಸಮನಿ (ಗದಗ):
ಈತನ ವಿರುದ್ಧ ಮಹಿಳೆಯರ ಮೇಲಿನ ದೌರ್ಜನ್ಯ, ಜಾತಿ ನಿಂದನೆ, ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಜೀವ ಬೆದರಿಕೆ ಸೇರಿದಂತೆ ವಿವಿಧ ಪ್ರಕರಣಗಳು ದಾಖಲಾಗಿವೆ.
ಕ್ರೈಂ ನಂ. 51/2024ರಲ್ಲಿ ಐಪಿಸಿ ಕಲಂ 323, 354, 504, 506, 34 ಹಾಗೂ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಕ್ರೈಂ ನಂ. 10/2025ರಲ್ಲಿ ಬಿಎನ್ಎಸ್ ಕಲಂ 189(2), 191(1), 352, 351(1), 190 ಹಾಗೂ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ನಾಗರಾಜ ಅಂದಪ್ಪ ಉಕ್ಕಲಿ (ಮುಂಡರಗಿ):
ಜೂಜಾಟವನ್ನೇ ದಂಧೆಯಾಗಿ ಮಾಡಿಕೊಂಡಿದ್ದ ಈತನ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ 78(3) ಅಡಿಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ.
ಕ್ರೈಂ ನಂ. 31/2023, ಕ್ರೈಂ ನಂ. 167/2023 ಹಾಗೂ ಕ್ರೈಂ ನಂ. 186/2024ರಲ್ಲಿ ಪ್ರಕರಣಗಳು ದಾಖಲಾಗಿವೆ.
ಮುತ್ತಪ್ಪ ಹನುಮಂತಪ್ಪ ಲಕ್ಕಲಕಟ್ಟಿ (ಗಜೇಂದ್ರಗಡ):
ಗಲಭೆ, ಮಾರಾಮಾರಿ, ಅಪಾಯಕಾರಿ ಆಯುಧಗಳಿಂದ ಹಲ್ಲೆ, ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ದರೋಡೆ ಯತ್ನ, ವಂಚನೆ ಹಾಗೂ ಜೀವ ಬೆದರಿಕೆ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಈತ ಆರೋಪಿಯಾಗಿದ್ದಾನೆ.
ಕ್ರೈಂ ನಂ. 19/2012ರಲ್ಲಿ ಐಪಿಸಿ ಕಲಂ 143, 147, 148, 323, 326, 353, 504, 149 ಹಾಗೂ ಕರ್ನಾಟಕ ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಕ್ರೈಂ ನಂ. 146/2015ರಲ್ಲಿ ಐಪಿಸಿ ಕಲಂ 341, 393, 34ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಕ್ರೈಂ ನಂ. 19/2026ರಲ್ಲಿ ಬಿಎನ್ಎಸ್-2023ರ ಕಲಂ 318(3), 318(4), 319(2), 322, 336(2), 336(3), 340(2), 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಚಿದಾನಂದ ವಿರೂಪಾಕ್ಷಪ್ಪ ಗೋಟೂರ (ಬೆಟಗೇರಿ):
ಜೂಜಾಟ ಪ್ರಕರಣಗಳಲ್ಲಿ ನಿರಂತರವಾಗಿ ಭಾಗಿಯಾಗಿದ್ದ ಈತನ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ 78(3) ಅಡಿಯಲ್ಲಿ ಐದು ಪ್ರಕರಣಗಳು ದಾಖಲಾಗಿವೆ.
ಕ್ರೈಂ ನಂ. 96/2020, 17/2021, 73/2023, 101/2023 ಹಾಗೂ 23/2024ರಲ್ಲಿ ಪ್ರಕರಣಗಳು ದಾಖಲಾಗಿವೆ.
ಪೊಲೀಸರ ಖಡಕ್ ಸಂದೇಶ:
ಜಿಲ್ಲೆಯಲ್ಲಿ ಸಮಾಜವಿರೋಧಿ ಚಟುವಟಿಕೆಗಳಲ್ಲಿ ತೊಡಗಿ ಸಾರ್ವಜನಿಕರ ನೆಮ್ಮದಿ ಹಾಳು ಮಾಡುವವರ ವಿರುದ್ಧ ಯಾವುದೇ ಮನ್ನಣೆ ನೀಡುವುದಿಲ್ಲ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಮುಂದೆಯೂ ಇದೇ ರೀತಿಯ ಕಠಿಣ ಕ್ರಮ ಮುಂದುವರಿಸಲಾಗುವುದು ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

