ಬೆಂಗಳೂರು: ಐತಿಹಾಸಿಕ ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂಭ್ರಮ ಜೋರಾಗಿದೆ.
ಹಬ್ಬದ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸಿ ದೊಡ್ಡ ಗಣಪತಿಯ ದರ್ಶನ ಪಡೆದರು.
ಗಣೇಶ ಚತುರ್ಥಿ ಪ್ರಯುಕ್ತ ಬೆಳಗ್ಗೆ 2.30ರಿಂದ ದೇವರಿಗೆ ವಿಶೇಷ ಅಭಿಷೇಕ ಕಾರ್ಯಕ್ರಮಗಳು ಆರಂಭವಾದವು. ದೇವಸ್ಥಾನದ ಆಡಳಿತ ಮಂಡಳಿ ಮಾಹಿತಿ ಪ್ರಕಾರ, ಗಣಪತಿಗೆ 1,000 ಲೀಟರ್ ಹಾಲಿನ ಅಭಿಷೇಕ ನೆರವೇರಿಸಲಾಯಿತು.
ಬೆಳಗ್ಗೆ 6 ಗಂಟೆಗೆ ಮಹಾಮಂಗಳಾರತಿ ನೆರವೇರಿತು. ಬಳಿಕ ರಾತ್ರಿ 12 ಗಂಟೆಯವರೆಗೆ ಭಕ್ತರಿಗೆ ನಿರಂತರವಾಗಿ ಪ್ರಸಾದ ವಿತರಿಸುವ ವ್ಯವಸ್ಥೆ ಮಾಡಲಾಗಿದೆ.
ದೇವಸ್ಥಾನದಲ್ಲಿ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದ ಭಕ್ತರು, ಗಣೇಶ ಚತುರ್ಥಿಯಂದು ದೊಡ್ಡ ಗಣಪತಿಯ ದರ್ಶನ ಪಡೆದಿರುವುದು ಸಂತಸ ತಂದಿದೆ ಎಂದು ಹೇಳಿದರು.
ಇನ್ನು ಸೆ.15ರಂದು ಸಂಜೆ 6 ಗಂಟೆಗೆ ಪಲ್ಲಕ್ಕಿ ಉತ್ಸವ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.



