ನವದೆಹಲಿ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಯುವಜನತೆಗೆ ಮಹತ್ವದ ಘೋಷಣೆ ಮಾಡಿದ್ದಾರೆ.
ಮುಂದಿನ ವರ್ಷದಲ್ಲಿ ದೇಶದ 1 ಕೋಟಿ ಯುವಕರಿಗೆ ಕೃತಕ ಬುದ್ಧಿಮತ್ತೆ (AI) ತರಬೇತಿ ನೀಡುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಘೋಷಿಸಿದ್ದಾರೆ.
ದೇಶದ ಅಭಿವೃದ್ಧಿಯ ಪಯಣದಲ್ಲಿ ಯುವಜನರನ್ನು ಕೇಂದ್ರಬಿಂದುವಾಗಿ ಪರಿಗಣಿಸಿರುವ ಪ್ರಧಾನಿ ಮೋದಿ, ಭಾರತದ ಯುವ ಪೀಳಿಗೆಯ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದರು. ಯುವಶಕ್ತಿ, ಮಹಿಳೆಯರು, ರೈತರು ಹಾಗೂ ಕಾರ್ಮಿಕರ ಸಹಕಾರದೊಂದಿಗೆ ‘ವಿಕಸಿತ ಭಾರತ’ದ ಕನಸನ್ನು ನನಸಾಗಿಸಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಭಾರತದ ಕನಸುಗಳನ್ನು ನನಸಾಗಿಸುವಲ್ಲಿ Gen Z ಪ್ರಮುಖ ಪಾತ್ರ ವಹಿಸಲಿದೆ ಎಂದು ಹೇಳಿದ ಪ್ರಧಾನಿ, ದೇಶದ ಅಭಿವೃದ್ಧಿಯ ವೇಗವನ್ನು ಮತ್ತಷ್ಟು ಹೆಚ್ಚಿಸಲು ಸುಧಾರಣೆಗಳ ಪ್ರಕ್ರಿಯೆಯನ್ನು ತ್ವರಿತಗೊಳಿಸುವ ಅಗತ್ಯವಿದೆ ಎಂದರು.
ಯುವಜನರು, ತಾಯಂದಿರು ಮತ್ತು ಸಹೋದರಿಯರು, ರೈತರು ಹಾಗೂ ಕಾರ್ಮಿಕರ ಸಾಮರ್ಥ್ಯದ ಮೇಲೆ ತಮಗೆ ಸಂಪೂರ್ಣ ನಂಬಿಕೆಯಿದೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದರೆ ಭಾರತದ ಅಭಿವೃದ್ಧಿಯ ಗುರಿಯನ್ನು ಸಾಧಿಸಲು ಸಾಧ್ಯ ಎಂದು ಪ್ರಧಾನಿ ಮೋದಿ ಹೇಳಿದರು.
ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ‘ವಂದೇ ಮಾತರಂ’:
ಈ ವರ್ಷದ ಸ್ವಾತಂತ್ರ್ಯೋತ್ಸವದಲ್ಲಿ ‘ವಂದೇ ಮಾತರಂ’ ಗೀತೆಯ 150ನೇ ವರ್ಷಾಚರಣೆ ವಿಶೇಷ ಗಮನ ಸೆಳೆಯಿತು. ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ‘ವಂದೇ ಮಾತರಂ’ ಗೀತೆಯನ್ನು ವಿಶೇಷವಾಗಿ ಪ್ರಸ್ತುತಪಡಿಸಲಾಯಿತು.
ಧ್ವಜಾರೋಹಣದ ಬಳಿಕ ಸೇನಾ ಬ್ಯಾಂಡ್ ‘ವಂದೇ ಮಾತರಂ’ ಗೀತೆಯನ್ನು ನುಡಿಸಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು ಹಾಗೂ ಅತಿಥಿಗಳು ಗೀತೆಯನ್ನು ಹಾಡಿದರು. ಬಳಿಕ ರಾಷ್ಟ್ರಗೀತೆ ಮೊಳಗಿತು.
‘ವಂದೇ ಮಾತರಂ’ ಆಕಾರದಲ್ಲಿ ಕುಳಿತ ಕ್ಯಾಡೆಟ್ಗಳು:
ಈ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಜನರು ಭಾಗವಹಿಸಿದ್ದರು. ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯ 2,500 ಬಾಲಕ ಮತ್ತು ಬಾಲಕಿಯರ ಕ್ಯಾಡೆಟ್ಗಳು ಹಾಗೂ ‘ಮೈ ಭಾರತ್’ ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಕ್ಯಾಡೆಟ್ಗಳು ಜ್ಞಾನಪಥದಲ್ಲಿ ಕುಳಿತು ‘ವಂದೇ ಮಾತರಂ’ ಪದದ ಆಕಾರವನ್ನು ರೂಪಿಸುವ ಮೂಲಕ ಗಮನ ಸೆಳೆದರು. ಯುವಜನರ ಹೆಚ್ಚಿನ ಭಾಗವಹಿಸುವಿಕೆಯಿಂದ ಈ ಬಾರಿಯ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮತ್ತಷ್ಟು ವಿಶೇಷವಾಗಿತ್ತು.



