ಕ್ಷಯರೋಗಕ್ಕೆ ಭಯಪಡದೇ ಚಿಕಿತ್ಸೆ ಪಡೆಯಿರಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಪ್ರತಿ ವರ್ಷ ವಿಶ್ವ ಕ್ಷಯರೋಗ ದಿನಾಚರಣೆಯನ್ನು ಮಾರ್ಚ್ 24ರಂದು ಆಚರಿಸಲಾಗುತ್ತದೆ. ಕ್ಷಯ ಮುಕ್ತ ದೇಶವನ್ನಾಗಿ ಮಾಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.

Advertisement

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಸೋಮವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ, ಜಿಲ್ಲಾ ವಾರ್ತಾ ಇಲಾಖೆ, ಜಿಲ್ಲಾ ಆಸ್ಪತ್ರೆ, ಗದಗ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯ, ಐ.ಎಮ್.ಎ ಗದಗ, ಬಸವೇಶ್ವರ ಪ್ಯಾರಾ ಮೆಡಿಕಲ್ ಕಾಲೇಜು, ಗಾಂಧೀಜಿ ಪ್ಯಾರಾ ಮೆಡಿಕಲ್ ಕಾಲೇಜು, ಪಾಲನ್ ಗಾಲಾ ನರ್ಸಿಂಗ್ ಕಾಲೇಜು ಗದಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ -2025 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕ್ಷಯರೋಗವು ಮೈಕ್ರೋ ಬ್ಯಾಕ್ಟೀರಿಯಂ ಟ್ಯುಬರ್‌ಕ್ಯುಲೋಸಿಸ್ ಎಂಬ ಸೂಕ್ಷ್ಮ ರೋಗಾಣುವಿನಿಂದ ಬರುತ್ತದೆ. ನಮ್ಮ ದೇಶದಲ್ಲಿ 1 ಲಕ್ಷ ಜನರಲ್ಲಿ 210 ಜನರು ಕ್ಷಯರೋಗದಿಂದ ಬಳಲುತ್ತಿದ್ದಾರೆ. ಕ್ಷಯರೋಗ ಬರಲು ಬಡತನ, ಅಪೌಷ್ಟಿಕತೆ, ಸ್ವಚ್ಛತೆ ಇಲ್ಲದಿರುವುದು ಮುಖ್ಯ ಕಾರಣವಾಗಿದ್ದು, ಕ್ಷಯರೋಗವನ್ನು ಸೂಕ್ತ ಚಿಕಿತ್ಸೆಯಿಂದ ಗುಣಪಡಿಸಬಹುದಾಗಿದೆ ಎಂದರು.

ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ. ಅರುಂಧತಿ ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿ, ಕ್ಷಯರೋಗಕ್ಕೆ ಸಂಬಂಧಿಸಿದಂತೆ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆರೋಗ್ಯ ಕೇಂದ್ರ ಸೇರಿದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಪರೀಕ್ಷೆಯನ್ನು ಮಾಡಲಾಗುತ್ತದೆ. ವಿವೇಚನೆ ಇಲ್ಲದೇ ಎಲ್ಲೆಂದರಲ್ಲಿ ಉಗುಳುವುದು, ಸೀನುವುದು, ಬೀಡಿ-ಸಿಗರೇಟು, ಕುಡಿತ ಸೇವೆನೆ ಕೂಡಾ ಕ್ಷಯರೋಗಕ್ಕೆ ಪ್ರಮುಖ ಕಾರಣಗಳಾಗಿವೆ. ಕ್ಷಯರೋಗದ ಕುರಿತು ಜಿಲ್ಲೆಯ ಗ್ರ‍್ರಾಮೀಣ ಪ್ರದೇಶಗಳಲ್ಲಿ, ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಮಾಡಲಾಗಿದೆ. ಕಾರಾಗೃಹದಲ್ಲಿಯೂ ಸಹ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕ್ಷಯಮುಕ್ತ ಜಿಲ್ಲೆಯನ್ನಾಗಿಸುವುದು ಮುಖ್ಯ ಗುರಿಯಾಗಿದ್ದು, ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗವನ್ನು ಗುಣಪಡಿಸಬಹುದಾಗಿದೆ ಎಂದರು.

ಜಿಲ್ಲೆಯ ಕ್ಷಯಮುಕ್ತ ಗ್ರಾಮ ಪಂಚಾಯಿತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಿಡಿಓಗಳನ್ನು ಸನ್ಮಾನಿಸಲಾಯಿತು. ಗದಗ ಜಿಮ್ಸ್ನ ಡಾ.ಅರವಿಂದ ಕರಿನಾಗಣ್ಣವರ ಕ್ಷಯರೋಗದ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಮೀನಾಕ್ಷಿ, ಜಿಲ್ಲಾ ಶಸ್ತçಚಿಕಿತ್ಸಕ ಡಾ. ಬಿ.ಸಿ. ಕರಿಗೌಡರ, ಕುಟುಂಬ ಕಲ್ಯಾಣ ಅಧಿಕಾರಿ ಡಾ. ವೈ.ಕೆ. ಭಜಂತ್ರಿ, ಕುಷ್ಟರೋಗ ನಿಯಂತ್ರಣಾದಿಕಾರಿ ಡಾ. ರಾಜೇಂದ್ರ ಬಸರಿಗಿಡದ, ಆರೋಗ್ಯ ಇಲಾಖೆಯ ರೂಪಸೇನ ಚವ್ಹಾಣ, ಗ್ರಾ.ಪಂ ಅಧ್ಯಕ್ಷರು, ಪಿ.ಡಿ.ಓಗಳು, ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು, ನರ್ಸಿಂಗ್ ವಿದ್ಯಾರ್ಥಿಗಳು ಹಾಜರಿದ್ದರು.

ಉಷಾ ಕಾರಂತ ನಾಡಗೀತೆ ಪ್ರಸ್ತುತಪಡಿಸಿದರು. ಕಣವಿ ಸ್ವಾಗತಿಸಿದರು. ಎಸ್.ಎಸ್. ಪೀರಾ ಕಾರ್ಯಕ್ರಮ ನಿರೂಪಿಸಿದರು. ಮೋದಿನ್ನವರ ವಂದಿಸಿದರು.

ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಕ್ಷಯರೋಗಕ್ಕೆ ಸಂಬಂಧಿಸಿ ಉಚಿತ ಕಫ ಪರೀಕ್ಷೆ ಮಾಡಲಾಗುತ್ತದೆ. ಕ್ಷಯರೋಗ ದೃಢಪಟ್ಟರೆ ನಿಗದಿತ ಅವಧಿಯವರೆಗೆ ಮಾತ್ರೆಗಳನ್ನು ಸಹ ನೀಡಲಾಗುತ್ತದೆ. ಕ್ಷಯರೋಗಕ್ಕೆ ಭಯಪಡದೇ ನಿಗದಿತ ಕಾಲಾವಧಿಯಲ್ಲಿಯೇ ಸೂಕ್ತ ಚಿಕಿತ್ಸೆ ಪಡೆದರೆ ಗುಣಮುಖರಾಗಬಹುದಾಗಿದೆ ಎಂದು ಎಸ್.ವಿ. ಸಂಕನೂರ ತಿಳಿಸಿದರು.


Spread the love

LEAVE A REPLY

Please enter your comment!
Please enter your name here