ವಿಜಯಸಾಕ್ಷಿ ಸುದ್ದಿ, ಗದಗ: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತಕ್ಕೆ 12 ವರ್ಷಗಳು ಪೂರ್ಣಗೊಂಡಿರುವ ಸಂದರ್ಭದಲ್ಲಿ ಭಾರತವು ಜಾಗತಿಕ ಮಟ್ಟದಲ್ಲಿ ಹೊಸ ಗುರುತು ಮೂಡಿಸಿಕೊಂಡಿದ್ದು, ದೇಶದ ಅಭಿವೃದ್ಧಿ, ಭದ್ರತೆ ಹಾಗೂ ಜನಕಲ್ಯಾಣದ ಕ್ಷೇತ್ರಗಳಲ್ಲಿ ಐತಿಹಾಸಿಕ ಸಾಧನೆಗಳನ್ನು ದಾಖಲಿಸಿದೆ ಎಂದು ಬಿಜೆಪಿ ಮುಖಂಡ ಹಾಗೂ ಉದ್ಯಮಿ ವಿಜಯಕುಮಾರ ಗಡ್ಡಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಭಾರತವು ವಿಶ್ವದ ಪ್ರಬಲ ರಾಷ್ಟ್ರಗಳ ಸಾಲಿನಲ್ಲಿ ಸ್ಥಾನ ಪಡೆದುಕೊಂಡಿದ್ದು, ನವಭಾರತದ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಲಾಗಿದೆ ಎಂದು ಅಭಿಪ್ರಾಯಪಟ್ಟರು.
ಪ್ರಧಾನಿ ಮೋದಿ ಅವರು ರಾಜಕಾರಣವನ್ನು ಅಧಿಕಾರದ ಸಾಧನವಾಗಿ ಬಳಸದೇ, ಸೇವೆಯ ತಪಸ್ಸಾಗಿ ಆಚರಿಸುತ್ತಿದ್ದಾರೆ. ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಜನಸೇವೆಗೆ ಆದ್ಯತೆ ನೀಡುತ್ತಾ, ಯುವಜನರಿಗೆ ಮಾದರಿಯಾಗಿ ಹೊರಹೊಮ್ಮಿದ್ದಾರೆ ಎಂದು ಹೇಳಿದರು.
ಪ್ರಧಾನಮಂತ್ರಿ ಆವಾಸ್ ಯೋಜನೆ, ಜಲ್ ಜೀವನ್ ಮಿಷನ್, ಫಸಲ್ ಬಿಮಾ ಯೋಜನೆ, ಪಿಎಂ ಸ್ವನಿಧಿ, ಡಿಜಿಟಲ್ ಇಂಡಿಯಾ, ಜನಧನ್, ಕಿಸಾನ್ ಸಮ್ಮಾನ್ ನಿಧಿ, ಆಯುಷ್ಮಾನ್ ಭಾರತ್, ಸ್ಟಾರ್ಟ್ಅಪ್ ಇಂಡಿಯಾ ಹಾಗೂ ಸ್ಟ್ಯಾಂಡ್ಅಪ್ ಇಂಡಿಯಾ ಸೇರಿದಂತೆ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಕೋಟ್ಯಂತರ ಜನರ ಬದುಕಿನಲ್ಲಿ ಪರಿವರ್ತನೆ ತಂದಿದ್ದಾರೆ ಎಂದು ಶ್ಲಾಘಿಸಿದರು.
ದೇಶದ ಭದ್ರತೆ ಹಾಗೂ ಏಕತೆಯ ವಿಚಾರದಲ್ಲಿ ಮೋದಿ ಅವರು ಎಂದಿಗೂ ರಾಜಿ ಮಾಡಿಕೊಳ್ಳದೆ ದಿಟ್ಟ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ವಿಧಿ 370 ರದ್ದು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಸೇರಿದಂತೆ ಹಲವು ಐತಿಹಾಸಿಕ ನಿರ್ಧಾರಗಳ ಮೂಲಕ ದೇಶದ ಆಶೋತ್ತರಗಳಿಗೆ ಸ್ಪಂದಿಸಿದ್ದಾರೆ ಎಂದು ಹೇಳಿದರು.
ಇಂದು ಭಾರತವು ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ್ದು, ಜಾಗತಿಕ ವೇದಿಕೆಯಲ್ಲಿ ತನ್ನ ಪ್ರಭಾವವನ್ನು ಮತ್ತಷ್ಟು ವಿಸ್ತರಿಸಿದೆ. ಭಾರತದ ಏಳಿಗೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಪ್ರಧಾನಿ ಮೋದಿ ಅವರಂತಹ ನಾಯಕತ್ವ ದೇಶಕ್ಕೆ ಹೆಮ್ಮೆಯ ಸಂಗತಿಯಾಗಿದೆ ಎಂದು ವಿಜಯಕುಮಾರ ಗಡ್ಡಿ ತಿಳಿಸಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿ ಅವರ 12 ವರ್ಷಗಳ ಆಡಳಿತ ಭಾರತವನ್ನು ವಿಶ್ವದ ಗಮನ ಸೆಳೆಯುವ ರಾಷ್ಟ್ರವನ್ನಾಗಿ ರೂಪಿಸಿದೆ. ಅಭಿವೃದ್ಧಿ, ಭದ್ರತೆ ಮತ್ತು ಜನಕಲ್ಯಾಣದ ಮೂಲಕ ನವಭಾರತದ ಕನಸನ್ನು ನನಸು ಮಾಡುವ ದಿಕ್ಕಿನಲ್ಲಿ ದೇಶವನ್ನು ಮುನ್ನಡೆಸುತ್ತಿರುವ ಅವರು ನಿಜಕ್ಕೂ ನವಭಾರತದ ಭಾಗ್ಯವಿಧಾತರು.”
ವಿಜಯಕುಮಾರ ಗಡ್ಡಿ
ಬಿಜೆಪಿ ಮುಖಂಡ ಹಾಗೂ ಉದ್ಯಮಿ



