ಬೆಂಗಳೂರು: ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ವೇಳೆ ಈ ಘೋಷಣೆ ಮಾಡಿರುವ ಸಿಎಂ, ಮುಂದಿನ ಶೈಕ್ಷಣಿಕ ವರ್ಷದಿಂದಲೇ ಈ ಸೌಲಭ್ಯ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಉನ್ನತ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಘೋಷಿಸಲಾಗಿದೆ. ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ (ADB) ನೆರವಿನಡಿ 40 ಸರ್ಕಾರಿ ಪದವಿ ಕಾಲೇಜುಗಳು ಹಾಗೂ 11 ಪಾಲಿಟೆಕ್ನಿಕ್ ಸಂಸ್ಥೆಗಳ ಅಭಿವೃದ್ಧಿ ಕೈಗೊಳ್ಳಲಾಗುವುದು. ಜೊತೆಗೆ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಉತ್ತೇಜಿಸಲು 9 ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.
ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಬೋಧಕ ಸಿಬ್ಬಂದಿಯ ಕೊರತೆಯನ್ನು ನೀಗಿಸಲು 1000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ವಿದ್ಯಾರ್ಥಿನಿಯರು ಹೆಚ್ಚಿರುವ ಕಾಲೇಜುಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲು 31 ಕೋಟಿ ರೂ. ವೆಚ್ಚ ಮಾಡಲಾಗುವುದು.
ಇದಲ್ಲದೆ, 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇರುವ ಪದವಿ ಕಾಲೇಜುಗಳನ್ನು ಉನ್ನತೀಕರಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.



