ಮಂಗಳೂರು: ರಾಜ್ಯದಲ್ಲಿ ಸರ್ಕಾರಿ ವೈದ್ಯರ ಕೊರತೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರನ್ನು ಸರ್ಕಾರಿ ಸೇವೆಯಲ್ಲಿ ಉಳಿಸಿಕೊಳ್ಳಲು ಹಾಗೂ ಗ್ರಾಮೀಣ ಆರೋಗ್ಯ ವ್ಯವಸ್ಥೆ ಬಲಪಡಿಸಲು ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ ಇಡಲು ಮುಂದಾಗಿದೆ. ಈ ಕುರಿತು ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಸುಳಿವು ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆ ಪರಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ವೈದ್ಯರ ವೇತನ ಹೆಚ್ಚಳದ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ನಿವಾರಣೆಗಾಗಿ ಹೊಸ ನೀತಿ ರೂಪಿಸಲಾಗುತ್ತಿದ್ದು, ವೈದ್ಯರನ್ನು ಸರ್ಕಾರಿ ಸೇವೆಯತ್ತ ಆಕರ್ಷಿಸುವ ಹಲವು ಸುಧಾರಣಾ ಕ್ರಮಗಳನ್ನು ಜಾರಿಗೆ ತರಲು ಇಲಾಖೆ ಸಿದ್ಧತೆ ನಡೆಸುತ್ತಿದೆ ಎಂದು ತಿಳಿಸಿದರು.
ಇದೇ ವೇಳೆ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ವೈದ್ಯರ ಭವಿಷ್ಯದ ಕುರಿತೂ ಮಹತ್ವದ ಚರ್ಚೆ ನಡೆಯುತ್ತಿದೆ. ಹಿಂದೆ ಮೂರು ವರ್ಷ ಸೇವೆ ಪೂರ್ಣಗೊಳಿಸಿದ ಗುತ್ತಿಗೆ ವೈದ್ಯರನ್ನು ಖಾಯಂ ಮಾಡುವ ವ್ಯವಸ್ಥೆ ಜಾರಿಯಲ್ಲಿತ್ತು. ಅದನ್ನು ಮತ್ತೆ ಜಾರಿಗೆ ತರಲು ಸರ್ಕಾರ ಮಟ್ಟದಲ್ಲಿ ಗಂಭೀರ ಚಿಂತನೆ ನಡೆಯುತ್ತಿದೆ ಎಂದು ಖಾದರ್ ಹೇಳಿದರು.
ಸರ್ಕಾರಿ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು ಮತ್ತು ವೈದ್ಯರಿಗೆ ಉದ್ಯೋಗ ಭದ್ರತೆ ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಶೀಘ್ರದಲ್ಲೇ ಈ ಸಂಬಂಧ ಮಹತ್ವದ ನಿರ್ಧಾರಗಳು ಹೊರಬೀಳುವ ಸಾಧ್ಯತೆ ಇದೆ ಎಂದು ಸಚಿವರು ಸೂಚನೆ ನೀಡಿದರು.



