ಬೆಂಗಳೂರು: ರಾಜ್ಯದ ಸಾರಿಗೆ ನೌಕರರಿಗೆ ಸರ್ಕಾರದಿಂದ ಸಿಹಿ ಸುದ್ದಿ ದೊರೆತಿದ್ದು, 26 ತಿಂಗಳ ಹಿಂಬಾಕಿ ವೇತನ ಪಾವತಿಗೆ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ. ಈ ಸಂಬಂಧ ಹಣ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ.
ಒಟ್ಟು 1,271 ಕೋಟಿ ರೂಪಾಯಿ ಹಿಂಬಾಕಿ ಪಾವತಿಗೆ ಸರ್ಕಾರ ಅನುಮೋದನೆ ನೀಡಿದ್ದು, ಮೊದಲ ಹಂತದಲ್ಲಿ 450 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. 2021ರ ಜನವರಿ 1ರಿಂದ 2023ರ ಫೆಬ್ರವರಿ 28ರವರೆಗೆ ಬಾಕಿ ಉಳಿದಿರುವ ವೇತನವನ್ನು ಈ ಮೂಲಕ ಪಾವತಿಸಲಾಗುತ್ತಿದೆ.
ನಾಲ್ಕು ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದರೂ ಸಹಾನುಭೂತಿಯ ಆಧಾರದ ಮೇಲೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಇದರ ಪ್ರಯೋಜನ ರಾಜ್ಯದ ನಾಲ್ಕೂ ಸಾರಿಗೆ ಸಂಸ್ಥೆಗಳ ನೌಕರರಿಗೆ ಲಭ್ಯವಾಗಲಿದೆ.
ನೌಕರರಿಗೆ ಏಕಕಾಲದಲ್ಲಿ ಹಣ ಪಾವತಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತು ಕಳೆದ ಫೆಬ್ರವರಿಯಲ್ಲಿ ಮಾತನಾಡಿದ್ದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸಾರಿಗೆ ನೌಕರರ ಬಹುದಿನಗಳ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, 38 ತಿಂಗಳ ಹಿಂಬಾಕಿ ಪೈಕಿ 26 ತಿಂಗಳ ಬಾಕಿಯನ್ನು ಪಾವತಿಸಲು ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದ್ದರು. ಬಜೆಟ್ ನಂತರ 1,271 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುವುದು ಎಂಬ ಭರವಸೆಯನ್ನೂ ನೀಡಿದ್ದರು.
ಸಾರಿಗೆ ನೌಕರರು 38 ತಿಂಗಳ ಸಂಪೂರ್ಣ ಹಿಂಬಾಕಿ ಪಾವತಿ, ಸರ್ಕಾರಿ ನೌಕರರಿಗೆ ಸಮಾನ ವೇತನ, ಕಾರ್ಮಿಕರ ಮೇಲಿನ ಕಿರುಕುಳಕ್ಕೆ ತೆರೆ ಹಾಗೂ 2024ರ ಜನವರಿ 1ರಿಂದ ಹೊಸ ವೇತನ ಜಾರಿಗೆ ತರಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದರು.
ಸರ್ಕಾರದ ಈ ನಿರ್ಧಾರ ಸಾರಿಗೆ ನೌಕರರಲ್ಲಿ ಸಂತಸ ಮೂಡಿಸಿದ್ದು, ಉಳಿದ ಬೇಡಿಕೆಗಳ ಈಡೇರಿಕೆಗೆ ಕೂಡ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.



