ವಿಜಯಸಾಕ್ಷಿ ಸುದ್ದಿ, ರೋಣ: ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳ ಆರ್ಥಿಕ ಸ್ಥಿತಿ ಸುಧಾರಿಸಲು ಸಾದ್ಯವಾಗಿದೆ. ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಮತ್ತಷ್ಟು ಶಕ್ತಿ ನೀಡಿದಂತಾಗಿದೆ ಎಂದು ರೋಣ ತಾಲೂಕಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಸಂಗನಗೌಡ ಪಾಟೀಲರಲ್ಲಿ ನೂರಾರು ಮಹಿಳೆಯರು ಮೆಚ್ಚುಗೆ ವ್ಯಕ್ತಪಡಿಸಿದರು.
ಗ್ಯಾರಂಟಿ ಸಮಿತಿ ಅಧ್ಯಕ್ಷ ಸಂಗನಗೌಡ ಪಾಟೀಲರು ಕಳೆದ ಕೆಲ ದಿನಗಳಿಂದ ಪ್ರತಿ ಗ್ರಾಮಗಳಿಗೆ ತೆರಳಿ ಗ್ಯಾರಂಟಿ ಯೋಜನೆಗಳ ಮಹತ್ವ ಮತ್ತು ಕುಟುಂಬಗಳಿಗೆ ಆಗುತ್ತಿರುವ ಅನುಕೂಲತೆಯ ಬಗ್ಗೆ ಸಭೆಗಳನ್ನು ನಡೆಸಿ ಜಾಗೃತಿಯನ್ನು ಮೂಡಿಸುತ್ತಿದ್ದಾರೆ. ಗುರುವಾರ ರೋಣ ಬಸ್ ನಿಲ್ದಾಣದತ್ತ ತೆರಳಿ ಮಹಿಳಾ ಪ್ರಯಾಣಿಕರ ಜೊತೆಗೆ ಶಕ್ತಿ ಯೋಜನೆ ಕುರಿತು ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಬಸ್ ನಿಲ್ದಾಣದಲ್ಲಿದ್ದ ನೂರಾರು ಮಹಿಳೆಯರು ಶಕ್ತಿ ಯೋಜನೆಯಿಂದ ಬಡ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ. ಅಲ್ಲದೆ, ನಿತ್ಯ ಬೆರೆ ಸ್ಥಳಗಳಿಗೆ ತೆರಳಿ ವ್ಯಾಪಾರ-ವಹಿವಾಟು ನಡೆಸುವ ಮತ್ತು ಬಟ್ಟೆ ಅಂಗಡಿಗಳಲ್ಲಿ ಕೆಲಸ ನಿರ್ವಹಿಸುವ ಮಹಿಳೆಯರು ಸೇರಿ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೂ ಯೋಜನೆ ಸಹಕಾರಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಗೃಹಲಕ್ಷ್ಮೀ, ಗೃಹ ಜ್ಯೋತಿ ಯೋಜನೆಗಳಿಂದಲೂ ಕುಟುಂಬದ ಆರ್ಥಿಕ ಸ್ಥಿತಿ ಸುಧಾರಿಸಿದೆ. ದುಬಾರಿ ಕಾಲದಲ್ಲಿ ಬಡವರ ಬದುಕು ಹಸನುಗೊಳ್ಳಲು ಗ್ಯಾರಂಟಿ ಯೋಜನೆಗಳು ಲಾಭದಾಯಕವಾಗಿದ್ದು, ಇದರಿಂದ ಮಹಿಳೆಯರಿಗೆ ಕಾಂಗ್ರೆಸ್ ಸರಕಾರ ಶಕ್ತಿ ನೀಡಿದಂತಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಬಗ್ಗೆ ತಮ್ಮ ಹರ್ಷವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಗ್ಯಾರಂಟಿ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಮಹಿಳೆಯರು ಮೆಚ್ಚುಗೆ ವ್ಯಕ್ತಪಡಿಸುತ್ತಿರುವುದು ನಮಗೆ ಹರ್ಷ ಮೂಡಿಸಿದೆ. ನಾನು ಸಹ ಪ್ರತಿ ಗ್ರಾಮಗಳಿಗೆ ತೆರಳಿ ಗ್ಯಾರಂಟಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿ, ಸಮಸ್ಯೆಗಳಿದ್ದಲ್ಲಿ ಸ್ಥಳದಲ್ಲಿಯೇ ಸರಿಪಡಿಸಿ ಫಲಾನುಭವಿಗಳಿಗೆ ಯೋಜನೆಗಳ ಲಾಭವನ್ನು ತಲುಪುವಂತೆ ಮಾಡಲಾಗುತ್ತಿದೆ.
– ಸಂಗನಗೌಡ ಪಾಟೀಲ.
ಅಧ್ಯಕ್ಷರು, ಗ್ಯಾರಂಟಿ ಸಮಿತಿ-ರೋಣ.
“ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಯೋಜನೆಗಳಿಂದ ನಮಗೆ ಅನುಕೂಲವಾಗಿದೆ. ಇವತ್ತು ಆರ್ಥಿಕ ಸ್ಥಿತಿ ಸುಧಾರಿಸಲು, ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಲು ಸಹಕಾರಿಯಾಗಿದೆ. ನಾವೆಲ್ಲ ಗ್ರಾಮಗಳಿಗೆ ತೆರಳಿ ಹಣ್ಣು ಮಾರಾಟ ಮಾಡುತ್ತೇವೆ. ಬಸ್ ಪ್ರಯಾಣ ಉಚಿತವಾದಾಗಿನಿಂದ ಬಡವರ್ಗದವರಿಗೆ ಸಹಾಯವಾಗಿದೆ.
– ಮಲ್ಲವ್ವ.
ಗ್ಯಾರಂಟಿ ಯೋಜನೆಯ ಫಲಾನುಭವಿ.