ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಹಗರಿಬೊಮ್ಮನಹಳ್ಳಿ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು ₹6 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ. ನೇಮಿರಾಜ್ ನಾಯಕ್ ಭೂಮಿಪೂಜೆ ಹಾಗೂ ಉದ್ಘಾಟನೆ ನೆರವೇರಿಸಿದರು.
ಪಟ್ಟಣದ ತೇರುಬೀದಿ ರಸ್ತೆಯಿಂದ ಗುರುಭವನದ ರಸ್ತೆವರೆಗೆ 2024-25 ಹಾಗೂ 2025-26ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಮೈಕ್ರೋ ಯೋಜನೆಯಡಿ ಸುಮಾರು ₹2 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.
ಇದೇ ವೇಳೆ ಕೆಚ್ಚಿನಬಂಡಿ ಬಸ್ಸ್ಟ್ಯಾಂಡ್ ಕ್ರಾಸ್ನಿಂದ ರಾರಾಳ್ ತಾಂಡಾ ವೃತ್ತದವರೆಗೆ, ಕೆಚ್ಚಿನ ಮಂಡಿ ಗ್ರಾಮದ ಒಳರಸ್ತೆ ಹಾಗೂ ಹೊಸ ಆನಂದ ದೇವನಹಳ್ಳಿವರೆಗೆ ಸಂಪರ್ಕಿಸುವ ರಸ್ತೆಗಳ ಅಭಿವೃದ್ಧಿಗೆ ಸುಮಾರು ₹4 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ನೇಮಿರಾಜ್ ನಾಯಕ್, ಕ್ಷೇತ್ರದಾದ್ಯಂತ ವಿವಿಧ ಅನುದಾನಗಳಡಿ ಒಟ್ಟು ₹90 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಹಿಂದಿನ ಹತ್ತು ವರ್ಷಗಳಲ್ಲಿ ಆಗದ ರಸ್ತೆ ಹಾಗೂ ಮೂಲಸೌಕರ್ಯ ಕಾಮಗಾರಿಗಳನ್ನು ತಮ್ಮ ಅವಧಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ತುಂಗಭದ್ರ ಡ್ಯಾಂನ 30 ಸ್ಟೀಲ್ ಗೇಟ್ಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಏಕೆ ತೆರಳಿಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ, ಅಧಿಕಾರಿಗಳು ಹಾಗೂ ನೀರಾವರಿ ಸಚಿವರಿಂದ ಆಹ್ವಾನ ಬಂದಿದ್ದರೂ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಜನರ ಕೆಲಸಗಳಿಗೆ ಆದ್ಯತೆ ನೀಡಿದ ಕಾರಣ ಕಾರ್ಯಕ್ರಮಕ್ಕೆ ತೆರಳಲಿಲ್ಲ ಎಂದು ಸ್ಪಷ್ಟಪಡಿಸಿದರು.
ಗುರುಭವನ ರಸ್ತೆ ಕಾಮಗಾರಿಯನ್ನು ಕರ್ನಾಟಕ ಭೂಸೇನಾ ನಿಗಮ ಹಾಗೂ ಕೆಚ್ಚಿನ ಮಂಡಿ ರಸ್ತೆ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯ ನವೀನ್ ಸಂಜ್ಯೋತ, ಬಿಜೆಪಿ ಮಂಡಲ ಅಧ್ಯಕ್ಷ ಬೆಣಕಲ್ ಪ್ರಕಾಶ್, ಬಿಜೆಪಿ ಮುಖಂಡ ಸಂದೀಪ್ ಶಿವಮೊಗ್ಗ, ಜೆಡಿಎಸ್ ಕ್ಷೇತ್ರಾಧ್ಯಕ್ಷ ವೈ. ಮಲ್ಲಿಕಾರ್ಜುನ, ಕನ್ನಿಹಳ್ಳಿ ಚಂದ್ರಶೇಖರ್, ಸರ್ದಾರ್ ಯಮನೂರಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
“ಕ್ಷೇತ್ರದ ರಸ್ತೆ ಅಭಿವೃದ್ಧಿಗೆ ₹90 ಕೋಟಿ ವೆಚ್ಚದ ಗುರಿ ಹೊಂದಿದ್ದೇವೆ. ಜನರು ನನ್ನನ್ನು ಗೆಲ್ಲಿಸಿ ಕಳುಹಿಸಿರುವುದರಿಂದ ಅವರ ಕೆಲಸಕ್ಕೆ ಮೊದಲ ಆದ್ಯತೆ ನೀಡುತ್ತಿದ್ದೇನೆ. ಪ್ರತಿಯೊಂದು ಗ್ರಾಮಕ್ಕೂ ಗುಣಮಟ್ಟದ ರಸ್ತೆ ಮತ್ತು ಮೂಲಸೌಕರ್ಯ ಕಲ್ಪಿಸುವುದು ನನ್ನ ಸಂಕಲ್ಪ.”
– ಕೆ. ನೇಮಿರಾಜ್ ನಾಯಕ್, ಶಾಸಕ, ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ