ವಿಜಯಸಾಕ್ಷಿ ಸುದ್ದಿ, ಗದಗ : ಸಫಾಯಿ ಕರ್ಮಚಾರಿಗಳಿಗಿರುವ ಸರ್ಕಾರದ ಸೌಲಭ್ಯಗಳನ್ನು ಸರಿಯಾಗಿ ಇಲಾಖಾ ಅಧಿಕಾರಿಗಳು ತಲುಪಿಸಬೇಕೆಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ವೆಂಕಟೇಶನ್ ಹೇಳಿದರು.
ಗುರುವಾರ ನಗರದ ಡಿ.ಸಿ. ಮಿಲ್ ಹತ್ತಿರದ ಸಫಾಯಿ ಕರ್ಮಚಾರಿ ಕಾಲೋನಿಗಳಲ್ಲಿನ ಪೌರ ಕಾರ್ಮಿಕರ ಮನೆಗಳಿಗೆ ಭೇಟಿ ನೀಡಿ, ನಂತರ ಬಾಬು ಜಗಜೀವನರಾಂ ಸಭಾ ಭವನದಲ್ಲಿ ಏರ್ಪಡಿಸಿದ ಸಫಾಯಿ ಕರ್ಮಚಾರಿಗಳ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಫಾಯಿ ಕರ್ಮಚಾರಿಗಳಿಗೆ ಸರ್ಕಾರ ಹಲವಾರು ಸೌಲಭ್ಯಗಳನ್ನು ಹಾಗೂ ನಿಗದಿತ ವೇತನವನ್ನು ಗೊತ್ತುಪಡಿಸಿದ್ದು, ಸರ್ಕಾರ ಗೊತ್ತುಪಡಿಸಿದ ಸೌಲಭ್ಯಗಳು ಸಫಾಯಿ ಕರ್ಮಚಾರಿಗಳಿಗೆ ತಲುಪುತ್ತಿರುವ ಬಗ್ಗೆ ಸಂವಾದ ನಡೆಸುವ ಮೂಲಕ ಪರಿಶೀಲನೆ ನಡೆಸಿದರು. ಸಫಾಯಿ ಕರ್ಮಚಾರಿಗಳಿಗೆ ನಿವೃತ್ತಿ ನಂತರ ದೊರೆಯಬೇಕಾದ ಸೌಲಭ್ಯಗಳು ದೊರಕಿದೆಯೇ ಎಂಬ ಬಗ್ಗೆ ಸ್ವತಃ ತಾವೇ ಸಫಾಯಿ ಕರ್ಮಚಾರಿಗಳೊಂದಿಗೆ ಸಂವಾದ ನಡೆಸುವ ಮೂಲಕ ಖಚಿತಪಡಿಸಿಕೊಂಡರು.
ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರು ಹಾಗೂ ಸಫಾಯಿ ಕರ್ಮಚಾರಿಗಳಿಗೆ ಹೊರಗುತ್ತಿಗೆ ಏಜೆನ್ಸಿದಾರರು ಸರಿಯಾದ ಸಮಯಕ್ಕೆ ವೇತನ ಪಾವತಿ ಮಾಡುವ ಬಗ್ಗೆ ಹಾಗೂ ವೇತನದೊಂದಿಗೆ ಇ.ಎಸ್.ಐ, ಪಿ.ಎಫ್ ಕಡಿತಗೊಳಿಸುವ ಬಗ್ಗೆ ಮಾಹಿತಿ ಪಡೆದ ಅವರು, ಸರಿಯಾಗಿ ವೇತನ ಪಾವತಿ ಮಾಡದ ಏಜೆನ್ಸಿದಾರರ ಮೇಲೆ ಶಿಸ್ತು ಕ್ರಮ ಅನಿವಾರ್ಯ ಎಂಬ ಎಚ್ಚರಿಕೆ ನೀಡಿದರು.
ಗುತ್ತಿಗೆ ಸಫಾಯಿ ಕರ್ಮಚಾರಿಗಳಿಗೆ ರಜೆ ಸೌಲಭ್ಯ ನೀಡುತ್ತಿರುವ ಬಗ್ಗೆ ಹಾಗೂ ರಾಷ್ಟ್ರೀಯ ಹಬ್ಬಗಳನ್ನು ಕಾರ್ಯನಿರ್ವಹಿಸುವ ಸಫಾಯಿ ಕರ್ಮಚಾರಿಗಳಿಗೆ ವೇತನ ಪಾವತಿ ಸೌಲಭ್ಯಗಳ ಕುರಿತು ತಿಳಿಸಿಕೊಡುವ ಪ್ರಯತ್ನ ಮಾಡಿದರು.
ಇದೇ ಸಂದರ್ಭದಲ್ಲಿ ಬಾಬು ಜಗಜೀವನರಾಂ ಸಮುದಾಯ ಭವನದ ಹತ್ತಿರವಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಹೂಮಾಲೆ ಹಾಕಿ ಪುಷ್ಪಾರ್ಚನೆಯನ್ನು ನೆರವೇರಿಸಿದರು.
ಜಿ.ಪಂ ಮುಖ್ಯ ಕಾರ್ಯನಿರ್ವಹಣಾದಿಕಾರಿ ಭರತ್ ಎಸ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಅವರುಗಳು ಸಂವಾದ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರ ಕುಂದುಕೊರತೆಗಳನ್ನು ಆಲಿಸುವ ಮೂಲಕ ಆಯೋಗದ ಅಧ್ಯಕ್ಷರಿಗೆ ವಿವರಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಕೃಷ್ಣಾ ಪರಾಪುರ, ನಗರಸಭೆ ಪೌರಾಯುಕ್ತ ಪ್ರಶಾಂತ ವರಗಪ್ಪನವರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್ ಸೇರಿದಂತೆ ಪೌರ ಕಾರ್ಮಿಕ ಸಂಘದ ಪದಾಧಿಕಾರಿಗಳು, ಪೌರಕಾರ್ಮಿಕರು, ಸಫಾಯಿ ಕರ್ಮಚಾರಿಗಳು ಹಾಜರಿದ್ದರು.
ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಮಾತನಾಡಿ, ಸಫಾಯಿ ಕರ್ಮಚಾರಿಗಳು ಹಾಗೂ ಪೌರಕಾರ್ಮಿಕರುಗಳಿಗೆ ಸರಿಯಾದ ವೇತನ ಪಾವತಿಸಬೇಕು. ಸಮವಸ್ತç ಒದಗಿಸಬೇಕು. ಜೊತೆಗೆ ಇತರ ಸಂರಕ್ಷಣಾ ಪರಿಕರಗಳನ್ನು ಒದಗಿಸಿ ನಿಯಮಿತವಾಗಿ ಆರೋಗ್ಯ ತಪಾಸಣೆ ಕೈಗೊಳ್ಳುವಂತೆ ಇಲಾಖಾಧಿಕಾರಿಗಳಿಗೆ ಹಾಗೂ ಗುತ್ತಿಗೆ ಏಜೆನ್ಸಿದಾರರಿಗೆ ಸೂಚಿಸಿದರು.