ಸಾರ್ವಜನಿಕರಿಗೆ ತೊಂದರೆಯಾಗದಂತೆ ಗಮನ ವಹಿಸಿ

0
Guarantee Schemes Progress Review Meeting
Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ : ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಕಡೆ ಅಧಿಕಾರಿಗಳು ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಅವರು ಹೇಳಿದರು.

Advertisement

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಸಾಂಸ್ಥಿಕ ಕಾರ್ಯ ವಿಧಾನಗಳು ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಳ್ಳಾವರ ಮತ್ತು ಕುಂದಗೋಳ ತಾಲೂಕಿನ ಕೆಲವು ಭಾಗಗಳಲ್ಲಿ ಸಾರಿಗೆ ಬಸ್‌ಗಳ ಹೆಚ್ಚಿನ ಬೇಡಿಕೆ ಇದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಗಮನಹರಿಸಬೇಕು. ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರಿಗೆ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಹಳ್ಳಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಹಣ ಸರಿಯಾಗಿ ಫಲಾನುಭವಿಗಳಿಗೆ ತಲುಪುತ್ತಿಲ್ಲ ಎಂದು ಬಹಳಷ್ಟು ದೂರುಗಳು ದಾಖಲಾಗುತ್ತಿವೆ. ಫಲಾನುಭವಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ತ್ವರಿತವಾಗಿ ನಿವಾರಿಸಬೇಕು.

ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಸುಳ್ಳು ಸುದ್ದಿಗಳು ಕೇಳಿ ಬರುತ್ತಿದ್ದು, ಅದರ ಬಗ್ಗೆ ಜನರಿಗೆ ಸರಿಯಾದ ಮಾಹಿತಿಯನ್ನು ಅಧಿಕಾರಿಗಳು ನೀಡಬೇಕು ಎಂದು ಹೇಳಿದರು.

ಯುವನಿಧಿ ಯೋಜನೆಯ ಪ್ರಚಾರಕ್ಕೆ ಎಲ್ಲಾ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಬೇಕು. ಹಿಂದಿನ ಸಭೆಯಲ್ಲಿ ನ್ಯಾಯ ಬೆಲೆ ಅಂಗಡಿಯ ಮುಂದೆ ಬೋರ್ಡ್ ಅಳವಡಿಸಲು ಸೂಚಿಸಲಾಗಿದ್ದು, ಇಲ್ಲಿಯವರೆಗೆ ಯಾವುದೇ ನ್ಯಾಯ ಬೆಲೆ ಅಂಗಡಿಗಳು ಬೋರ್ಡ್ ಅಳವಡಿಸದಿರುವುದು ಗಮನಕ್ಕೆ ಬಂದಿದೆ. ಇದರ ಬಗ್ಗೆ ಇಲಾಖೆಯ ಅಧಿಕಾರಿಗಳು ಗಮನಿಸಬೇಕು ಎಂದು ಅವರು ತಿಳಿಸಿದರು.

ಆಹಾರ ಇಲಾಖೆಯ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ ಮಾತನಾಡಿ, ಜಿಲ್ಲೆಯಲ್ಲಿ ಅನ್ಯಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರರಿಗೆ ಇಲ್ಲಿಯವರೆಗೆ ಒಟ್ಟು 3,50,684 ಜನ ಫಲಾನುಭವಿಗಳಿಗೆ ರೂ. 256.017 ಕೋಟಿ ನೇರ ನಗದು ವರ್ಗಾವಣೆ ಮೂಲಕ ಹಣ ಸಂದಾಯ ಮಾಡಲಾಗಿದೆ. ಈ ಮೂಲಕ ಶೇ. 97.95ರಷ್ಟು ಪ್ರಗತಿ ಸಾಧಿಸಿದೆ ಮತ್ತು ಬಾಕಿ ಇರುವ 6,470 ಜನ ಫಲಾನುಭವಿಗಳ ಹಣ ಜಮಾ ಮಾಡಲು ಕ್ರಮ ವಹಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ರವೀಂದ್ರ ದ್ಯಾಬೇರಿ ಮಾತನಾಡಿ, ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 4,821 ಜನ ನೋಂದಣಿಯಾಗಿದ್ದು, 1,725 ಪುರುಷ ಹಾಗೂ 2,071 ಮಹಿಳೆಯರು ಸೇರಿ ಒಟ್ಟು 3,796 ಜನ ಫಲಾನುಭವಿಗಳಿಗೆ ಸಹಾಯಧನ ಸರಕಾರದಿಂದ ಜಮೆ ಆಗುತ್ತಿದೆ. 1,025 ಜನ ಫಲಾನುಭವಿಗಳ ಅರ್ಜಿ ಬಾಕಿಯಿದ್ದು, ಪರಿಶೀಲನಾ ಹಂತದಲ್ಲಿವೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರುಗಳಾದ ಮುರಗಯ್ಯಾ ವಿರಕ್ತಮಠ, ಅರವಿಂದ ಏಗನಗೌಡರ, ಅಬ್ದುಲ್ ರಶೀದ ಬೋಳಾಬಾಯಿ ಹಾಗೂ ರತ್ನಾ ತೇಗೂರಮಠ ಸಭೆಯಲ್ಲಿ ಮಾತನಾಡಿದರು.

ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಉಪಸ್ಥಿತರಿದ್ದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಶಾಲಾ, ಕಾಲೇಜು, ಆಸ್ಪತ್ರೆಗಳು ಇರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಬಸ್ ನಿಲುಗಡೆಗೆ ವ್ಯವಸ್ಥೆಯಾಗಬೇಕು. ಗ್ಯಾರಂಟಿ ಯೋಜನೆಗಳನ್ನು ಫಲಾನುಭಾವಿಗಳಿಗೆ ಉತ್ತಮವಾಗಿ ತಲುಪಿಸುವ ಕಾರ್ಯವನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಬೇಕೆಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here