ಬೆಂಗಳೂರು: ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂಬ ಚರ್ಚೆಗಳ ನಡುವೆಯೂ, ಯಾವುದೇ ಗ್ಯಾರಂಟಿಯನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಮತ್ತು ಯಾವುದೇ ರೀತಿಯ ಪರಿಷ್ಕರಣೆಯನ್ನೂ ಮಾಡಲಾಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಅನಾವಶ್ಯಕ ಊಹಾಪೋಹಗಳು ಹರಡಲಾಗುತ್ತಿವೆ. ಕೆಲವು ಪ್ರಕರಣಗಳಲ್ಲಿ ಮೃತಪಟ್ಟಿರುವವರ ಬ್ಯಾಂಕ್ ಖಾತೆಗಳಿಗೆ ಗ್ಯಾರಂಟಿ ಯೋಜನೆಯ ಹಣ ಜಮೆಯಾಗಿರುವುದು ಮತ್ತು ಪಡಿತರ ಅಕ್ಕಿಯನ್ನೂ ಸಹ ಮೃತರ ಹೆಸರಿನಲ್ಲಿ ಪಡೆಯಲಾಗುತ್ತಿರುವುದು ಗಮನಕ್ಕೆ ಬಂದಿದೆ ಎಂದು ತಿಳಿಸಿದರು.
ಗೃಹಜ್ಯೋತಿ ಯೋಜನೆಯಲ್ಲಿ ಇಂತಹ ಸಮಸ್ಯೆಗಳು ಎದುರಾಗುವುದಿಲ್ಲ ಎಂದ ಅವರು, ಇತರ ಯೋಜನೆಗಳಲ್ಲಿ ದುರುಪಯೋಗವಾಗಿರುವುದು ಸತ್ಯವಾಗಿದ್ದು, ಮೃತರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಪಡೆದಿರುವ ಪ್ರಕರಣಗಳಿವೆ ಎಂದು ಹೇಳಿದರು. ಈ ರೀತಿಯ ಅಕ್ರಮಗಳನ್ನು ತಡೆಯಲು ಸರ್ಕಾರ ಕ್ರಮ ಕೈಗೊಳ್ಳಲಿದ್ದು, ಮೃತಪಟ್ಟವರ ನಿಖರ ಲೆಕ್ಕ ಸಿಗದೆ ಇರುವುದೇ ದೊಡ್ಡ ಸವಾಲಾಗಿದೆ ಎಂದರು. ಈ ಸಮಸ್ಯೆಯನ್ನು ಹೇಗೆ ಬಗೆಹರಿಸಬೇಕು ಎಂಬ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಶಿವಕುಮಾರ್ ಹೇಳಿದರು. ಸ್ಥಿತಿವಂತರು ಸ್ವಯಂಪ್ರೇರಿತವಾಗಿ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯಬಾರದು ಎಂಬ ಸಲಹೆ ಕುರಿತು ಕೇಳಿದಾಗ, ಆ ವಿಷಯವನ್ನೂ ಪರಿಶೀಲಿಸಲಾಗುವುದು ಎಂದು ಅವರು ಪ್ರತಿಕ್ರಿಯಿಸಿದರು.



