ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಸರಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾವಿರಾರು ಅತಿಥಿ ಉಪನ್ಯಾಸಕರ ಉದ್ಯೋಗ ಭದ್ರತೆಯನ್ನು ಖಚಿತಪಡಿಸುವ ಉದ್ದೇಶದಿಂದ ನ. 25ರಿಂದ ಅನಿರ್ದಿಷ್ಟಾವಧಿ ಧರಣಿಗೆ ಕರೆ ನೀಡಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಡಾ. ಹನುಮಂತಗೌಡ ಕಲ್ಮನಿ ಹೇಳಿದರು.
ಸೋಮವಾರ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಳೆದ ಮೂರೂ ದಶಕಗಳಿಂದ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಸದ್ಯ ಯುಜಿಸಿ ನಿಯಮಾವಳಿ ಪ್ರಕಾರ ನೆಟ್, ಸೆಟ್ ಅಥವಾ ಪಿಎಚ್ಡಿ ಪಡೆದವರನ್ನು ಮಾತ್ರ ಸಂದರ್ಶನಕ್ಕೆ ಆಹ್ವಾನಿಸಿದ್ದಾರೆ. ಆದರೆ ಯು.ಜಿ.ಸಿ ನಿಯಮಗಳ ಪ್ರಕಾರ ಅರ್ಹತೆ ಪಡೆಯದೆ, ಇಪ್ಪತ್ತು ವರ್ಷಗಳಿಂದ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು ಬೀದಿಗೆ ತರುವ ಪ್ರಯತ್ನ ನಡೆಸಿದ್ದಾರೆ. ಸರ್ಕಾರದ ಈ ನಡೆಯನ್ನು ವಿರೋಧಿಸಿ ನ.25ರಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ. ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಬೇಡಿಕೆಗಳಿಗೆ ರಾಜ್ಯ ಸರಕಾರ ಸ್ಪಂದಿಸದಿದ್ದರೆ, ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಶ್ರೀದೇವಿ ಗದಗಿನ್, ವಿಜಯಕುಮಾರ ದೇಸಾಯಿಗೌಡ್ರ, ಗೀತಾ ಮೇಟಿ, ಜ್ಯೋತಿ ಗುದ್ದಿನ, ಶಾಂತಗೌಡ, ಶರಣು, ಎಸ್.ಪಿ. ಜಾಗಾಪುರ್, ಪದ್ಮ ತಳಕಲ್, ವಿರೂಪಾಕ್ಷ ಮುಳಗುಂದ, ಶರಣಬಸಪ್ಪ ಮಡಿವಾಳರ ಮುಂತಾದವರಿದ್ದರು.


