ವಿಜಯಸಾಕ್ಷಿ ಸುದ್ದಿ, ಗದಗ: ಬಗರ್ಹುಕುಂ ಸಾಗುವಳಿದಾರರು, ಅರಣ್ಯ ಅವಲಂಬಿತ ರೈತರಿಗೆ ಹಕ್ಕುಪತ್ರ ನೀಡುವಂತೆ ಮತ್ತು ನರಸಾಪುರ ಕೈಗಾರಿಕಾ ಕೆಐಡಿಬಿ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಒತ್ತಾಯಿಸಿ ಉತ್ತರ ಕರ್ನಾಟಕ ಮಹಾಸಭಾ ವತಿಯಿಂದ ಜಿಲ್ಲಾಡಳಿತ ಭವನ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನೆ ಬುಧವಾರ 17ನೇ ದಿನಕ್ಕೆ ಕಾಲಿಟ್ಟಿತು.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಅರೆಬೆತ್ತಲೆ ಧರಣಿ ನಡೆಸಿ ಗದಗ-ಹುಬ್ಬಳ್ಳಿ ಮುಖ್ಯ ರಸ್ತೆಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಮೂರು ವಾರಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಯುತ್ತಿದ್ದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಯಾವುದೇ ಸ್ಪಂದನೆ ನೀಡಿಲ್ಲ ಎಂದು ಆರೋಪಿಸಿದರು. ರಸ್ತೆ ತಡೆ ಪ್ರತಿಭಟನೆಯಿಂದ ಕೆಲ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಹುಬ್ಬಳ್ಳಿಯಿಂದ ಗದಗ ಬರುವ ಕೆಲ ಬಸ್ಗಳು ಜಿಲ್ಲಾಡಳಿತ ಭವನದ ಮುಂಭಾಗದಲ್ಲೇ ಪ್ರಯಾಣಿಕರನ್ನು ಇಳಿಸಿ ಹುಬ್ಬಳ್ಳಿಗೆ ಮರಳಿದವು.
ಉತ್ತರ ಕರ್ನಾಟಕ ಮಹಾಸಭಾ ಅಧ್ಯಕ್ಷ ರವಿಕಾಂತ ಅಂಗಡಿ ಮಾತನಾಡಿ, ಜಿಲ್ಲೆಯ ಅರಣ್ಯ ಅವಲಂಬಿತ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಲ್ಲಿ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸದೇ ತಿರಸ್ಕರಿಸಲಾಗಿದೆ. ತಿರಸ್ಕೃತ ಅರ್ಜಿಗಳ ಮರುಪರಿಶೀಲನೆಗೆ ಸರ್ಕಾರ ಭರವಸೆ ನೀಡಿದ್ದರೂ ಇದುವರೆಗೆ ಯಾವುದೇ ಕ್ರಮ ಜರುಗಿಲ್ಲ. ಹೊಸ ಅರ್ಜಿ ಸ್ವೀಕಾರಕ್ಕೆ ಅನುಮತಿ ದೊರೆತಿದ್ದರೂ ಅರಣ್ಯ ಅವಲಂಬಿತ ರೈತರಿಂದ ಅರ್ಜಿಗಳನ್ನು ಸ್ವೀಕರಿಸದೇ ರೈತರಿಗೆ ಅನ್ಯಾಯ ಮಾಡಲಾಗಿದೆ. ತಕ್ಷಣ ಅರ್ಜಿಗಳನ್ನು ಸ್ವೀಕರಿಸಿ ಹಕ್ಕುಪತ್ರ ನೀಡಬೇಕು ಎಂದರು.
ಪ್ರತಿಭಟನೆಯಲ್ಲಿ ಎನ್.ಟಿ. ಪೂಜಾರ, ರಮೇಶ ಮಜ್ಜೂರು, ಶ್ರೀನಿವಾಸ ಶಿರಹಟ್ಟಿ, ಬಸವಣ್ಣೆಪ್ಪ ಚಿಂಚಲಿ, ಚಂಬಣ್ಣ ಚೆನ್ನಪಟ್ಟಣ, ಹನುಮಂತ ಚೆನ್ನಪಟ್ಟಣ, ಖಾದೀರ್ ಸಾಬ್, ಫಿರೋಜ್ ನದಾಫ್, ಮಹಮ್ಮದ ಶಲವಡಿ ಸೇರಿದಂತೆ ಜಿಲ್ಲೆಯ ರೈತರು, ಮಹಿಳೆಯರು ಭಾಗವಹಿಸಿದ್ದರು.
ಸತತ 17 ದಿನಗಳಿಂದ ಬಗರ್ಹುಕುಂ ಸಾಗುವಳಿದಾರರು, ಅರಣ್ಯ ಅವಲಂಬಿತ ರೈತರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಜಿಲ್ಲಾಡಳಿತದ ಎದುರು ಅಹೋರಾತ್ರಿ ನಡೆಸುತ್ತಿದ್ದು,ರಿತ್ತ ಗಮನ ಹರಿಸದ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳ ನಡೆ ಖಂಡಿಸಿ ಜಿಲ್ಲೆಯ ಕಿತ್ತೂರ ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿವರೆಗೂ ರೈತರ ಸಾಮೂಹಿಕ ದೀಡ್ ನಮಸ್ಕಾರ ಹಾಕಲಾಗುವುದು ಎಂದು ಉತ್ತರಕರ್ನಾಟಕ ಮಹಾಸಭಾದ ರಾಜ್ಯಾಧ್ಯಕ್ಷ ರವಿಕಾಂತ ಅಂಗಡಿ ಹೇಳಿದರು.



