ವಿಜಯಸಾಕ್ಷಿ ಸುದ್ದಿ, ಗದಗ: ಯುವಕರು ಮುದುಕರಾಗುತ್ತಾರೆ, ಮುದುಕರು ಯುವಕರಾಗುವುದಿಲ್ಲ. ಹೀಗಾಗಿ ಹಿರಿಯರು ಜವಾಬ್ದಾರಿಗಳನ್ನು ತಮ್ಮಲ್ಲೇ ಇಟ್ಟುಕೊಳ್ಳದೆ, ಯುವಕರಿಗೆ ಉದ್ಯೋಗ, ಉದ್ಯಮದ ಅವಕಾಶ ನೀಡಿ ಸೂಕ್ತ ಮಾರ್ಗದರ್ಶನದೊಂದಿಗೆ ಮುನ್ನೆಲೆಗೆ ತರಬೇಕು ಎಂದು ಸೂಡಿ–ಗದಗ ಜುಕ್ತಿ ಹಿರೇಮಠದ ಕೊಟ್ಟೂರ ಬಸವೇಶ್ವರ ಶಿವಾಚಾರ್ಯರು ಹೇಳಿದರು.
ನಗರದ ಕೆ.ಎಚ್. ಪಾಟೀಲ ಸಭಾಂಗಣದಲ್ಲಿ ಭಾನುವಾರ ನಡೆದ ‘ಗದಗ ಉತ್ಸವ–2026’ ಕೈಗಾರಿಕಾ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದ ಶ್ರೇಷ್ಠ ವರ್ತಕ ಹಾಗೂ ಶ್ರೇಷ್ಠ ಉದ್ಯಮಿ ಪ್ರಶಸ್ತಿ ಪ್ರದಾನ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಗದಗ ‘ಮುದ್ರಣ ಕಾಶಿ’ಯಾಗಿ ಗುರುತಿಸಿಕೊಂಡಿದ್ದು, ಇದೀಗ ವಾಣಿಜ್ಯ ಮತ್ತು ಉದ್ಯಮ ಕ್ಷೇತ್ರದಲ್ಲೂ ತನ್ನದೇ ಛಾಪು ಮೂಡಿಸಿದೆ. ಸರ್ಕಾರ ಅಗತ್ಯ ಮೂಲಸೌಕರ್ಯ ಕಲ್ಪಿಸಿದರೆ ಜಿಲ್ಲೆಯಲ್ಲಿ ಆರ್ಥಿಕ ಚಟುವಟಿಕೆಗಳು ಮತ್ತಷ್ಟು ವಿಸ್ತರಿಸಲಿವೆ ಎಂದರು.
ಗದಗ ಉತ್ಸವದಲ್ಲಿ 140 ಮಳಿಗೆಗಳಿಗೆ ಉತ್ತಮ ಸ್ಪಂದನೆ ದೊರೆತಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಉತ್ಸವದ ಯಶಸ್ಸಿಗೆ ಸಾಕ್ಷಿಯಾಗಿದೆ. ಇಂತಹ ಉತ್ಸವಗಳು ವರ್ಷದಲ್ಲಿ ಎರಡು–ಮೂರು ಬಾರಿ ನಡೆಯಬೇಕು ಎಂದರು.
“ಕಿಂಗ್ ಆಗುವವರು ಹಲವರಿದ್ದಾರೆ; ಆದರೆ ಕಿಂಗ್ ಮೇಕರ್ ಆಗುವವರು ವಿರಳ. ತಾವೇ ಮುನ್ನೆಲೆಗೆ ಬರಬೇಕೆಂಬ ಆಸೆಗಿಂತ ಇತರರನ್ನು ಬೆಳೆಸುವ ಗುಣವೇ ನಿಜವಾದ ನಾಯಕತ್ವ.” ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಪ್ರೊ. ಎಸ್.ವ್ಹಿ. ಸಂಕನೂರ ಮಾತನಾಡಿ, ಕೃಷಿ ಹಾಗೂ ಜವಳಿ ಆಧಾರಿತ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು. ಉದ್ಯಮ ಆರಂಭಿಸುವ ಮುನ್ನ ಕಚ್ಚಾ ವಸ್ತು, ಮಾರುಕಟ್ಟೆ, ನುರಿತ ಕಾರ್ಮಿಕರು ಹಾಗೂ ಸಾರಿಗೆ ವ್ಯವಸ್ಥೆ ಕುರಿತು ಅಧ್ಯಯನ ಅಗತ್ಯ ಎಂದರು.
ಕಪ್ಪತಗುಡ್ಡದ ನೈಸರ್ಗಿಕ ಸಂಪತ್ತು ರಕ್ಷಿಸುವ ನಿಟ್ಟಿನಲ್ಲಿ ಪರಿಸರ ಸ್ನೇಹಿ ಕೈಗಾರಿಕೆಗಳಿಗೆ ಆದ್ಯತೆ ನೀಡಬೇಕು. ‘ಮೇಕ್ ಇನ್ ಇಂಡಿಯಾ’, ‘ಸ್ಟಾರ್ಟ್ಅಪ್ ಇಂಡಿಯಾ’, ‘ಸ್ಕಿಲ್ ಇಂಡಿಯಾ’ ಹಾಗೂ ‘ಮುದ್ರಾ’ ಯೋಜನೆಗಳ ಪ್ರಯೋಜನ ಪಡೆದು ಯುವಕರು ಉದ್ಯಮಶೀಲರಾಗಬೇಕು ಎಂದರು.
ಸಮಾರಂಭದ ಅಧ್ಯಕ್ಷತೆ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಶರಣಬಸಪ್ಪ ಗುಡಿಮನಿ ವಹಿಸಿದ್ದರು. ಮಧುಸೂಧನ ಪುಣೇಕರ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಂದ್ರು ಬಾಳಿಹಳ್ಳಿಮಠ ಹಾಗೂ ಮುರುಗೇಶ ಬಡ್ನಿ ನಿರೂಪಿಸಿದರು. ಕಾರ್ಯದರ್ಶಿ ಚನ್ನವೀರಪ್ಪ ಹುಣಶೀಕಟ್ಟಿ ವಂದಿಸಿದರು.
ವೇದಿಕೆಯಲ್ಲಿ ಮಾಜಿ ಸಚಿವ ಎಸ್.ಎಸ್. ಪಾಟೀಲ, ಜಯದೇವ ಮೆಣಸಗಿ, ಪ್ರಕಾಶ ಉಗಲಾಟ, ಸಿದ್ರಾಮಪ್ಪ ಉಮಚಗಿ, ರಾಘವೇಂದ್ರ ಕಾಲವಾಡ, ಅಶೋಕ ಸಂಕಣ್ಣವರ, ಅರವಿಂದ ಕಾಮತ, ಮಧುಸೂಧನ ಪುಣೇಕರ, ಮಂಜುನಾಥ ವೀರಲಿಂಗಯ್ಯನಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪ್ರಶಸ್ತಿ ಪ್ರದಾನ
ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಆನಂದ ಪೋತ್ನೀಸ್ ಹಾಗೂ ಈಶಣ್ಣ ಮುನವಳ್ಳಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶ್ರೇಷ್ಠ ಉದ್ಯಮಿ ಪ್ರಶಸ್ತಿಯನ್ನು ಕುಮಾರ ಫಟ್ಟದ, ವೀರಣ್ಣ ಸೊನ್ನದ ಹಾಗೂ ಶಿಗ್ಲಿಯ ವೀರಣ್ಣ ಪವಾಡದ ಅವರಿಗೆ, ಶ್ರೇಷ್ಠ ವರ್ತಕ ಪ್ರಶಸ್ತಿಯನ್ನು ಸುರೇಶಕುಮಾರ ಓಸವಾಲ, ಬಸಪ್ಪ ಶೆಟ್ಟಿಕೇರಿ, ಸಂಗಮೇಶ ಗೌರಿಮಠ ಹಾಗೂ ಗೌತಮ್ಚಂದ್ ಚೋಪ್ರಾ ಅವರಿಗೆ ಪ್ರದಾನ ಮಾಡಲಾಯಿತು.
ಶ್ರೇಷ್ಠ ಮಹಿಳಾ ಉದ್ಯಮಿ ಪ್ರಶಸ್ತಿಯನ್ನು ನಿರ್ಮಲಾ ಕೊಳ್ಳಿ ಅವರಿಗೆ ನೀಡಲಾಯಿತು. ವಿಜಯಕುಮಾರ ಮೇಗೂರ, ಅರಷದ್ ಖಾಜಿ ಹಾಗೂ ಸುವರ್ಣಾ ಮದರಿಮಠ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.
ಉದ್ಯಮ ಆರಂಭಿಸುವ ಮುನ್ನ ಕಚ್ಚಾ ವಸ್ತು, ಮಾರುಕಟ್ಟೆ, ನುರಿತ ಕಾರ್ಮಿಕರು ಹಾಗೂ ಸಾರಿಗೆ ವ್ಯವಸ್ಥೆ ಕುರಿತು ಅಧ್ಯಯನ ಅಗತ್ಯ. ಕೇವಲ ಸಬ್ಸಿಡಿ ನಿರೀಕ್ಷೆಯಲ್ಲಿ ಉದ್ಯಮ ಆರಂಭಿಸಿ ವಿಫಲರಾಗಬಾರದು.
– ಪ್ರೊ. ಎಸ್.ವ್ಹಿ. ಸಂಕನೂರ, ವಿಧಾನ ಪರಿಷತ್ ಸದಸ್ಯರು



