ಚಾಮರಾಜನಗರ: ಹನೂರು ಸಮೀಪ ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲಾಧಿಕಾರಿ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದಾರೆ.
ಕೊಳ್ಳೇಗಾಲ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, 7 ದಿನಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಹನೂರಿನಲ್ಲಿ ಮಾತನಾಡಿದ ಎಸಿ ದಿನೇಶ್ ಕುಮಾರ್ ಮೀನಾ, ಜಿಲ್ಲಾಧಿಕಾರಿಗಳ ಆದೇಶದಂತೆ ತನಿಖೆ ಈಗಾಗಲೇ ಆರಂಭವಾಗಿದ್ದು, ಸ್ಥಳ ಮಹಜರು ಪೂರ್ಣಗೊಂಡಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಮಗ್ರ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಹನೂರಿನಲ್ಲಿ ಉದ್ವಿಗ್ನ ಪ್ರತಿಭಟನೆ:
ಮೂವರ ಸಾವಿನ ವಿರುದ್ಧ ಹನೂರಿನಲ್ಲಿ ಪ್ರತಿಭಟನೆಗಳು ಮುಂದುವರಿದಿವೆ. ಪ್ರತಿಭಟನಾಕಾರರು ದಿಢೀರ್ ರಸ್ತೆ ತಡೆ ನಡೆಸಿದ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು. ಉದ್ವಿಗ್ನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
ಹನೂರು ಪೊಲೀಸ್ ಠಾಣೆ ಎದುರು ಕೂಡ ಪ್ರತಿಭಟನೆ ನಡೆದಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಅರಣ್ಯ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆತರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕೆ.ಆರ್. ಆಸ್ಪತ್ರೆಯಲ್ಲಿ ಪಂಚನಾಮೆಗೆ ಸಿದ್ಧತೆ:
ಮೈಸೂರಿನ ಕೆ.ಆರ್. ಆಸ್ಪತ್ರೆಯ ಶವಾಗಾರದಲ್ಲಿ ಮೂವರು ಮೃತರ ಪಂಚನಾಮೆಗೆ ಸಿದ್ಧತೆ ನಡೆಸಲಾಗಿದೆ. ಈ ಕಾರ್ಯಕ್ಕಾಗಿ ಮೂವರು ತಹಶೀಲ್ದಾರರಿಗೆ ಪ್ರತ್ಯೇಕ ಜವಾಬ್ದಾರಿ ನೀಡಲಾಗಿದೆ.
-
ಕೊಳ್ಳೇಗಾಲ ತಹಶೀಲ್ದಾರ್ ಬಸವರಾಜು ಅವರಿಗೆ ಸೆಬಾಸ್ಟಿಯನ್ ಡೇವಿಡ್ ಕುಮಾರ್ ಅವರ ಜವಾಬ್ದಾರಿ
-
ಯಳಂದೂರು ತಹಶೀಲ್ದಾರ್ ನಯನಾ ಅವರಿಗೆ ಆಂಥೋಣಿ ಅವರ ಜವಾಬ್ದಾರಿ
-
ಚಾಮರಾಜನಗರ ತಹಶೀಲ್ದಾರ್ ಗಿರಿಜಾ ಅವರಿಗೆ ಪೀಟರ್ ಅವರ ಜವಾಬ್ದಾರಿ ವಹಿಸಲಾಗಿದೆ
ಪೀಟರ್ ಅವರ ಕುಟುಂಬಸ್ಥರು ಇನ್ನೂ ಶವಾಗಾರಕ್ಕೆ ಬಂದಿಲ್ಲ ಎಂದು ತಿಳಿದುಬಂದಿದೆ.
ದಕ್ಷಿಣ ವಲಯ ಐಜಿಪಿ ಡಾ. ಬೋರಲಿಂಗಯ್ಯ ಅವರು ಹನೂರಿನ ಪ್ರವಾಸಿ ಮಂದಿರದಲ್ಲಿ ಮೊಕ್ಕಾಂ ಹೂಡಿದ್ದು, ತನಿಖಾಧಿಕಾರಿ ದಿನೇಶ್ ಕುಮಾರ್ ಮೀನಾ, ಚಾಮರಾಜನಗರ ಎಸ್ಪಿ ಮುತ್ತುರಾಜ್ ಹಾಗೂ ಮೈಸೂರು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರೊಂದಿಗೆ ಸಭೆ ನಡೆಸಿ ಪ್ರಕರಣದ ಮಾಹಿತಿ ಕಲೆಹಾಕುತ್ತಿದ್ದಾರೆ.



