ವಿಜಯಸಾಕ್ಷಿ ಸುದ್ದಿ, ಗದಗ : ಅನೇಕ ಸ್ವಾತಂತ್ರ್ಯ ಹೋರಾಟಗಾರರ, ದೇಶಭಕ್ತರ ತ್ಯಾಗ-ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕಿದೆ. ಎಲ್ಲ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ಮೂಲಕ ನಾವಿಂದು ಶಾಂತಿ, ಸೌಹಾರ್ದತೆ ಮತ್ತು ಭಾತೃತ್ವವನ್ನು ಎತ್ತಿ ಹಿಡಿದು ದೇಶವನ್ನು ಅಭಿವೃದ್ಧಿ ಪಥದೆಡೆಗೆ ಮುನ್ನಡೆಸಬೇಕು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.
ಅವರು ಬುಧವಾರ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಗದಗ ಜಿಲ್ಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಪ್ರಯುಕ್ತ ವಾಕಥಾನ್ಗೆ ಚಾಲನೆ ನೀಡಿ ಮಾತನಾಡಿದರು.
ದೇಶಭಕ್ತಿ ಗೀತೆಗಳ ನಿನಾದದೊಂದಿಗೆ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ತಿರಂಗಾ ಅಭಿಯಾನವು ಪ್ರಾರಂಭವಾಗಿ ನಗರದ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ ಗಾಂಧಿ ವೃತ್ತಕ್ಕೆ ಬಂದು ತಲುಪಿತು. ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಮುದುಕಮ್ಮನವರ ಅವರು ಸಂವಿಧಾನದ ಪೀಠಿಕೆಯನ್ನು ಪಠಿಸಿದರು.
ವಾಕಥಾನ್ನಲ್ಲಿ ಶಾಲಾ ಮಕ್ಕಳ ವಿವಿಧ ಸ್ವಾತಂತ್ರ್ಯ ಹೋರಾಟಗಾರರ ವಿವಿಧ ರೂಪಕಗಳು ಕಣ್ಮನ ಸೆಳೆದವು.
ವಾಕಥಾನ್ವು ಎನ್ಸಿಸಿ, ಎನ್ಎಸ್ಎಸ್, ಮಾಜಿ ಸೈನಿಕರ ಸಂಘ, ಸ್ಕೌಟ್ಸ್ ಮತ್ತು ಗೈಡ್ಸ್, ಪೊಲೀಸ್ ಇಲಾಖೆ, ಶಾಲಾ-ಕಾಲೇಜಗಳ ಸಹಕಾರದೊಂದಿಗೆ ಯಶಸ್ವಿಯಾಗಿ ಜರುಗಿತು.

ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ ಎಸ್, ಉಪವಿಭಾಗಾಧಿಕಾರಿ ಗಂಗಪ್ಪ. ಎಂ, ತಹಸೀಲ್ದಾರ ಶ್ರೀನಿವಾಸ ಕುಲಕರ್ಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ ಬಿ, ಯುವಜನ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ರವಿ ಗುಂಜೀಕರ್, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ನಾವಿಂದು ಶಾಂತಿ, ಸೌಹಾರ್ದತೆಗೆ ಹಾಗೂ ಭಾತೃತ್ವಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಸದೃಢ ಸಮಾಜವನ್ನು ನಿರ್ಮಿಸಬೇಕು. ಈ ನಿಟ್ಟಿನಲ್ಲಿ ದೇಶದ ಎಲ್ಲ ಪ್ರಜೆಗಳೂ ಈ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ.ಪಾಟೀಲ ತಿಳಿಸಿದರು.



