ವಿಜಯಸಾಕ್ಷಿ ಸುದ್ದಿ, ಗದಗ: ಮಕರ ಸಂಕ್ರಾತಿ ಹಬ್ಬದ ಅಂಗವಾಗಿ ಜನವರಿ 15ರಂದು ಹರಿಹರದ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ಹರಜಾತ್ರೆ ನಡೆಯಲಿದ್ದು, ಈ ವೇಳೆ ಕಿತ್ತೂರು ರಾಣಿ ಚನ್ನಮ್ಮಾಜೀ ದ್ವಿಶತಮಾನ ವಿಜಯೋತ್ಸವ ಸಮಾರೋಪ ಸಮಾರಂಭ, ಲಿಂ. ಶ್ರೀ ಡಾ.ಮಹಾಂತ ಶಿವಾಚಾರ್ಯ ಮಹಾಸ್ವಾಮಿಗಳವರ 13ನೇ ವರ್ಷದ ಪುಣ್ಯ ಸ್ಮರಣೋತ್ಸವ, ವಚನಾನಂದ ಮಹಾಸ್ವಾಮಿಗಳವರ ಅಷ್ಟಮ ವಾರ್ಷಿಕ ಪೀಠಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹರಿಹರದ ಪಂಚಮಸಾಲಿ ಗುರುಗಳಾದ ವಚನಾನಂದ ಶ್ರೀಗಳು ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀಗಳು, ಹರಿಹರದ ಪೀಠದಲ್ಲಿ 2020ರಿಂದ ಹರಜಾತ್ರಾ ಮಹೋತ್ಸವ ನಡೆಯುತ್ತಿದೆ. ವರ್ಷದಿಂದ ವರ್ಷಕ್ಕೆ ಸಾಮಾಜಿಕವಾಗಿ, ಧಾರ್ಮಿಕವಾಗಿ ಜಾತ್ರೆ ಅದ್ದೂರಿಯಾಗಿ ನಡೆಯುತ್ತಿದೆ ಎಂದರು.
ಹಾವೇರಿಯ ಖ್ಯಾತ ವೈದ್ಯ ಡಾ. ಬಸವರಾಜ ವೀರಾಪೂರ ಅವರನ್ನು 2026ರ ಹರಜಾತ್ರೆಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಜಿಲ್ಲೆಯ ಸಮಾಜ ಬಾಂಧವರು ಹರಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು. ಪ್ರಸಕ್ತ ವರ್ಷದಿಂದ ಹರಿಹರ ಪೀಠದಿಂದ ವೀರರಾಣಿ ಕಿತ್ತೂರ ಚನ್ನಮ್ಮಳ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಹಾಗೂ 2026ರ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.
ಈ ವೇಳೆ ಅಖಿಲ ಕರ್ನಾಟಕ ವೀರಶೈವ ಪಂಚಮಸಾಲಿ ಸಮಾಜದ ರಾಜ್ಯಾಧ್ಯಕ್ಷ ಸೋಮನಗೌಡ ಪಾಟೀಲ, ವೀರಣ್ಣ ಕರಿಬಿಷ್ಠಿ, ಎಸ್.ವಿ. ಪಲ್ಲೇದ, ಬಸವರಾಜ ವೀರಾಪೂರ, ಮೋಹನ್ ಲಿಂಬೆಕಾಯಿ, ಎಫ್.ವ್ಹಿ. ಮರಿಗೌಡ, ವಸಂತ ಪಡಗದ, ಅಶೋಕ ಸಂಕಣ್ಣನವರ, ಮಂಜು ಮಾಗಡಿ, ಮೋಹನ್ ಮಾಳಶೆಟ್ಟಿ, ಅನಿಲ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
ಹಿಂದಿನ ಜಾತ್ರಾ ಅವಧಿಯಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿತ್ತು. ಸುಮಾರು 6,543 ಯುವಕ-ಯುವತಿಯರು ಭಾಗವಹಿಸಿದ್ದರು. 14ಕ್ಕೂ ಹೆಚ್ಚು ವಿವಿಧ ಕಂಪನಿಗಳು ಹಾಜರಿದ್ದವು. ಈ ವೇಳೆ ಸುಮಾರು 6,453 ಉದ್ಯೋಗಗಳು ಸೃಷ್ಟಿಯಾದವು. ಶೈಕ್ಷಣಿಕ ಶೃಂಗ ಸಭೆ ನಡೆಸಲಾಗಿತ್ತು. ರಾಜ್ಯದ ವಿಶ್ವವಿದ್ಯಾಲಯದ ಕುಲಪತಿಗಳನ್ನು ಕರೆತಂದು ಮಾಹಿತಿ ನೀಡಲಾಯಿತು. ಅದರಂತೆ ಪ್ರಸಕ್ತ ವರ್ಷ ಕಿತ್ತೂರ ಚನ್ನಮ್ಮ ವಿಜಯೋತ್ಸವದ ದ್ವಿಶತಮಾನೋತ್ಸವದ ಸಮಾರೋಪ ಸಮಾರಂಭ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಶ್ರೀಗಳು ತಿಳಿಸಿದರು.



