ವಿಜಯಸಾಕ್ಷಿ ಸುದ್ದಿ, ಗದಗ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಗದುಗಿನ ಉಡಚಮ್ಮ ದೇವಿ ಜ್ಞಾನವಿಕಾಸ ಕೇಂದ್ರದ ಸಭೆ ತ್ರಿಕೂಟೇಶ್ವರ ದೇವಸ್ಥಾನದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ ಜರುಗಿತು.
ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಡಾ. ದೀಪಾ ಕಲ್ಲೇಶ ಮೂರಶಿಳ್ಳಿನ ಮಾತನಾಡಿ, ಇಂದಿನ ಆಧುನಿಕ ಯುಗದ, ಒತ್ತಡಯುಕ್ತ ಜೀವನದಲ್ಲಿ ಮಹಿಳೆಯರು ತಮ್ಮ ಆರೋಗ್ಯವನ್ನು ಸುಸ್ಥಿರವಾಗಿ ಕಾಯ್ದುಕೊಳ್ಳುವುದು ಕಷ್ಟ ಸಾಧ್ಯವಾಗುತ್ತಿದೆ. ಅದಕ್ಕೆ ಪೂರಕವಾದ ಜೀವನಶೈಲಿ ಮತ್ತು ಸರಿಯಾದ ಆಹಾರ ಕ್ರಮವನ್ನು ಅನುಸರಿಸಬೇಕಾಗಿದ್ದು ಅತೀ ಅವಶ್ಯಕ. ಮಹಿಳಾ ಸಬಲೀಕರಣಕ್ಕೆ ಶಿಕ್ಷಣ ಎಷ್ಟು ಮುಖ್ಯವೋ, ಅವರ ಆರೋಗ್ಯ ರಕ್ಷಣೆ ಕೂಡ ಅಷ್ಟೇ ಅವಶ್ಯಕ. ಆರೋಗ್ಯ ಮತ್ತು ಶಿಕ್ಷಣ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಅದಕ್ಕನುಸಾರವಾಗಿ ಸೇವಿಸುವ ಆಹಾರದಲ್ಲಿ ಕ್ಯಾಲ್ಸಿಯಂನ ಉಪಯುಕ್ತತೆ ಕುರಿತು ಸವಿಸ್ತಾರವಾಗಿ ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ಕೇಂದ್ರದ ಸಮನ್ವಯ ಅಧಿಕಾರಿ ಗಂಗಮ್ಮನವರ ಮಾತನಾಡಿ, ಮಹಿಳೆಯರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸರ್ಕಾರೇತರ ಸಂಸ್ಥೆಗಳಲ್ಲಿ ಒಂದಾಗಿರುವ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘ ಅನೇಕ ನೂತನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಅದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಭೆಯ ಅಧ್ಯಕ್ಷರಾದ ಸರೋಜ, ಸೇವಾ ಪ್ರತಿನಿಧಿ ಪಾರ್ವತಿ ಹಾಗೂ ಕೇಂದ್ರದ ಎಲ್ಲ ಸದಸ್ಯರು ಉಪಸ್ಥಿತರಿದ್ದರು.