ವಿಜಯಸಾಕ್ಷಿ ಸುದ್ದಿ, ಗದ: ಗಸಮೀಪದ ತಿಮ್ಮಾಪೂರ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಭಾರತ ಸರ್ಕಾರ, ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯಿತಿ ಗದಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಲಕ್ಕುಂಡಿ ಇವರ ಸಹಯೋಗದಲ್ಲಿ `ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನ’ದ ಮೂಲಕ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಆರೋಗ್ಯ ಇಲಾಖೆಯ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಡಾ. ಎಸ್.ಎನ್. ಲಿಂಗದಾಳ ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಮಹಾತ್ಮ ಗಾಂಧೀಜಿ ಜಯಂತಿಯವರೆಗೂ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನದ ಮೂಲಕ ಆರೋಗ್ಯ ತಪಾಸಣಾ ಶಿಬಿರವನ್ನು ಜಿಲ್ಲಾದ್ಯಂತ ಹಮ್ಮಿಕೊಂಡಿದ್ದು, ಗ್ರಾಮೀಣ ಪ್ರದೇಶದ ಜನರಿಗೆ ಅವರ ಮನೆ ಬಾಗಿಲಿಗೆ ತೆರಳಿ ಆರೋಗ್ಯ ತಪಾಸಣೆ ಮಾಡುವದರ ಮೂಲಕ ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರೈತ ಸಂಘದ ಗದಗ ಜಿಲ್ಲಾಧ್ಯಕ್ಷ ಯಲ್ಲಪ್ಪ ಎಚ್.ಬಾಬರಿ ಮಾತನಾಡಿ, ಸ್ವಸ್ಥ ನಾರಿ ಎಂದರೆ ಉತ್ತಮ ಆರೋಗ್ಯವನ್ನು ಹೊಂದಿರುವ ಮಹಿಳೆ. ಮಹಿಳೆಯರು ತಮ್ಮ ಕುಟುಂಬದ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಆರೋಗ್ಯವಂತ ಕುಟುಂಬವನ್ನು ನಿರ್ಮಾಣ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಕಣ್ಣಿನ ತಪಾಸಣೆ, ಬಿಪಿ, ಶುಗರ್, ರಕ್ತ ಪರೀಕ್ಷೆ ತಪಾಸಣೆ ಮಾಡಿ ಔಷಧಿಗಳನ್ನು ವಿತರಣೆ ಮಾಡಲಾಯಿತು. ಗ್ರಾ.ಪಂ ಅಧ್ಯಕ್ಷರಾದ ಹನುಮವ್ವ ತಳವಾರ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷ ಹುಚ್ಚೀರಪ್ಪ ಜೋಗಿನ, ನೀಲಪ್ಪ ಗಾಜಿ, ಲಕ್ಷ್ಮಿ ಗಾಜಿ, ಪಿಡಿಒ ಶಿವಲೀಲಾ ಗೂಳಪ್ಪನವರ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಯಲ್ಲಪ್ಪ ಎನ್.ಕಡೆಮನಿ, ಶಾಂತಾ ನೂಕಾಪುರ, ಮುತ್ತಣ್ಣ ಹಟ್ಟಿಮನಿ ಸೇರಿದಂತೆ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು.



