ಮುಂದಿನ ಪೀಳಿಗೆಗೆ ಆರೋಗ್ಯಕರ ಮಣ್ಣನ್ನೇ ಆಸ್ತಿಯಾಗಿ ಉಳಿಸಬೇಕು: ಉಪ ಕೃಷಿ ನಿರ್ದೇಕಿ ಸ್ಪೂರ್ತಿ ಜಿ.ಎಸ್

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಹುಲಕೋಟಿಯ ಐ.ಸಿ.ಎ.ಆರ್-ಕೆ.ಎಚ್.ಪಾಟೀಲ ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ಇಲಾಖೆ ಗದಗ ಸಹಭಾಗಿತ್ವದಲ್ಲಿ `ವಿಶ್ವ ಮಣ್ಣು ದಿನಾಚರಣೆ’ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮವನ್ನು ಹುಲಕೋಟಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.

Advertisement

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಪ ಕೃಷಿ ನಿರ್ದೇಕಿ ಸ್ಪೂರ್ತಿ ಜಿ.ಎಸ್, ಕೃಷಿಗೆ ಮಣ್ಣು ಅತ್ಯಂತ ಮಹತ್ವಪೂರ್ಣ ನೈಸರ್ಗಿಕ ಸಂಪನ್ಮೂಲವಾಗಿದ್ದು, ಮುಂದಿನ ಪೀಳಿಗೆಗೆ ನಾವು ಆರೋಗ್ಯಕರ ಮಣ್ಣನ್ನೇ ಆಸ್ತಿಯಾಗಿ ಉಳಿಸಬೇಕು. ಮಣ್ಣಿನಲ್ಲಿನ ಸಾವಯವ ಇಂಗಾಲ ದಿನಂಪ್ರತಿ ಕ್ಷೀಣಿಸುತ್ತಿದ್ದು, ನಾವು ಮಣ್ಣಿಗೆ ಸೇರಿಸುವ ಗೊಬ್ಬರವನ್ನು ಮಣ್ಣಿನ ಪರೀಕ್ಷೆಗೆ ಅನುಗುಣವಾಗಿ ಶಿಫಾರಸ್ಸಿನ ಪ್ರಕಾರ ಸೇರಿಸಬೇಕು ಎಂದರು

ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಎನ್.ಎಚ್. ಭಂಡಿ ಮಾತನಾಡಿ, ವಿಶ್ವ ಮಣ್ಣು ದಿನಾಚರಣೆಯ ಹಿನ್ನೆಲೆ, ಪ್ರಾಮುಖ್ಯತೆ ಹಾಗೂ ಮಣ್ಣಿನ ಆರೋಗ್ಯ ಕಾಪಾಡುವಲ್ಲಿ ಕೈಗೊಳ್ಳಬೇಕಾದ ಕೃಷಿ ಪದ್ಧತಿಗಳ ಕುರಿತು ಚರ್ಚಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥೆ ಡಾ. ಸುಧಾ ವ್ಹಿ.ಮಂಕಣಿ ಮಾತನಾಡಿ, ರೈತರು ಯಥೇಚ್ಛವಾಗಿ ರಸಗೊಬ್ಬರಗಳನ್ನು ಬಳಸುತ್ತಿದ್ದಾರೆ. ಇದರಿಂದ ಮಣ್ಣಿನ ರಚನೆ ಹಾಗೂ ಆರೋಗ್ಯ ಕೆಡುವುದಲ್ಲದೇ, ದೀರ್ಘಕಾಲೀನವಾಗಿ ಇಳುವರಿಯಲ್ಲಿಯೂ ವ್ಯತ್ಯಾಸವಾಗುತ್ತದೆ. ಆದ್ದರಿಂದ ಪ್ರತಿ ವರ್ಷ ರೈತರು ಸಾವಯವ ಗೊಬ್ಬರಗಳಾದ ಎರೆಹುಳು ಗೊಬ್ಬರ, ಕೊಟ್ಟಿಗೆ ಗೊಬ್ಬರ ಹಾಗೂ ಹಸಿರೆಲೆ ಗೊಬ್ಬರಗಳನ್ನು ಮಣ್ಣಿಗೆ ಸೇರಿಸಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಹಾಗೂ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ರೈತರಿಗೆ ಮಣ್ಣು ಆರೋಗ್ಯ ಪತ್ರಗಳನ್ನು ವಿತರಿಸಲಾಯಿತು. ಹುಲಕೋಟಿಯ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ರಾಜೇಶ್ವರಿ ಚಿನಿವಾರ, ಕೃಷಿ ಇಲಾಖೆ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು. ಡಾ. ವಿನಾಯಕ ನಿರಂಜನ್ ಸ್ವಾಗತಿಸಿ ನಿರೂಪಿಸಿದರು. ಲಲಿತಾ ಅಸೂಟಿ ವಂದಿಸಿದರು.


Spread the love

LEAVE A REPLY

Please enter your comment!
Please enter your name here