ಬೆಂಗಳೂರು: ನಗರದ ಹೊರವಲಯದ ಅವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಭಾರಿ ಪ್ರಮಾಣದ ಜಿಲೆಟಿನ್ ಕಡ್ಡಿಗಳು ಹಾಗೂ ವೈಯರ್ಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಅವಲಹಳ್ಳಿ ಪೊಲೀಸರು ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ನಿರ್ಜನ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಬಿದ್ದಿದ್ದ ಜಿಲೆಟಿನ್ ಕಡ್ಡಿಗಳು ಮತ್ತು ವೈಯರ್ಗಳನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಪ್ರದೇಶವನ್ನು ಭದ್ರತಾ ವಲಯವಾಗಿ ಘೋಷಿಸಿ ಪರಿಶೀಲನೆ ನಡೆಸಿದರು.
ಈ ಘಟನೆ ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಯ ವೇಳೆ ಪತ್ತೆಯಾಗಿದ್ದ ಜಿಲೆಟಿನ್ ಕಡ್ಡಿಗಳ ಪ್ರಕರಣವನ್ನು ನೆನಪಿಸಿದೆ. ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಆಗಮಿಸಿದ್ದ ಸಂದರ್ಭದಲ್ಲಿ, ಅವರ ಸಂಚಾರ ಮಾರ್ಗದ ಸಮೀಪದ ವಡೇರಹಳ್ಳಿ ಗೇಟ್ ಬಳಿ ಅನುಮಾನಾಸ್ಪದ ಬಾಕ್ಸ್ ಪತ್ತೆಯಾಗಿತ್ತು.
ಅಂದು ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದಾಗ ಬಾಕ್ಸ್ನಲ್ಲಿ ಎರಡು ಜಿಲೆಟಿನ್ ಕಡ್ಡಿಗಳು, ನಾಲ್ಕು ಗಂಧದ ಕಡ್ಡಿಗಳು, ಒಂದು ಬೆಂಕಿಪೊಟ್ಟಣ ಹಾಗೂ ಎರಡು ಬ್ಯಾಟರಿಗಳು ಪತ್ತೆಯಾಗಿದ್ದವು. ಬಳಿಕ ಭದ್ರತಾ ದೃಷ್ಟಿಯಿಂದ ಸಂಪೂರ್ಣ ಮಾರ್ಗವನ್ನು ಮರುಪರಿಶೀಲನೆ ನಡೆಸಿ ಪ್ರಧಾನಿಗಳ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು.
ಇದೀಗ ಮತ್ತೆ ಅವಲಹಳ್ಳಿ ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಸ್ಫೋಟಕ ವಸ್ತುಗಳನ್ನು ಕಲ್ಲು ಕ್ವಾರಿಗಳಲ್ಲಿ ಬಳಸಲು ತರಲಾಗಿರಬಹುದೆಂಬ ಶಂಕೆಯೂ ವ್ಯಕ್ತವಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಅವಲಹಳ್ಳಿ ಠಾಣೆ ಪೊಲೀಸರು ಜಿಲೆಟಿನ್ ಕಡ್ಡಿಗಳ ಮೂಲ, ಅವುಗಳನ್ನು ಅಲ್ಲಿ ಇರಿಸಿದವರು ಯಾರು ಹಾಗೂ ಅದರ ಉದ್ದೇಶವೇನು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ. ಎಫ್ಎಸ್ಎಲ್ ವರದಿ ಬಂದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.



