ಮೈಸೂರು: ಕುರುಕುರೆಯ ಪ್ಯಾಕೆಟ್ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ಗಂಟಲಿಗೆ ಸಿಲುಕಿ ಮೂರು ವರ್ಷದ ಮಗು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗೌರಿಪುರ ಗ್ರಾಮದಲ್ಲಿ ನಡೆದಿದೆ.
ಗೌರಿಪುರ ಗ್ರಾಮದ ಸಂತೋಷ್ ಮತ್ತು ಐಶ್ವರ್ಯ ದಂಪತಿಯ ಏಕೈಕ ಪುತ್ರ ಮುಕುಂದ್ ಮಯೂರ್ (3) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ.
ಮಗು ಕುರುಕುರೆಯೊಂದಿಗೆ ಪ್ಯಾಕೆಟ್ನಲ್ಲಿ ಇದ್ದ ಪ್ಲಾಸ್ಟಿಕ್ ಬಾಲ್ ಅನ್ನು ಬಾಯಿಗೆ ಹಾಕಿಕೊಂಡಿದ್ದು, ಅದನ್ನು ನುಂಗಿದ ಪರಿಣಾಮ ಬಾಲ್ ಗಂಟಲಿನಲ್ಲಿ ಸಿಲುಕಿಕೊಂಡಿದೆ. ಇದರಿಂದ ಮಗು ಉಸಿರಾಡಲು ಸಾಧ್ಯವಾಗದೆ ತೀವ್ರವಾಗಿ ಒದ್ದಾಡಿದೆ.
ಮಗುವಿನ ಸ್ಥಿತಿ ಗಂಭೀರವಾಗಿರುವುದನ್ನು ಗಮನಿಸಿದ ಪೋಷಕರು ಕೂಡಲೇ ಹುಣಸೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವ ಮುನ್ನವೇ ಮಾರ್ಗ ಮಧ್ಯದಲ್ಲೇ ಮಗು ಉಸಿರುಗಟ್ಟಿ ಮೃತಪಟ್ಟಿದೆ.
ಇದ್ದ ಒಬ್ಬನೇ ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಗೌರಿಪುರ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಘಟನೆ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಮೃತ ಮಗುವಿನ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಈ ಘಟನೆ ಬಳಿಕ ಮಕ್ಕಳಿರುವ ಪೋಷಕರಲ್ಲಿ ಆತಂಕ ಹೆಚ್ಚಾಗಿದ್ದು, ತಿಂಡಿ ಪ್ಯಾಕೆಟ್ಗಳಲ್ಲಿ ಆಕರ್ಷಣೆಗಾಗಿ ಆಟಿಕೆಗಳು ಅಥವಾ ಪ್ಲಾಸ್ಟಿಕ್ ವಸ್ತುಗಳನ್ನು ಹಾಕುವ ಬಗ್ಗೆ ಕಠಿಣ ನಿಯಮ ಜಾರಿಗೆ ತರಬೇಕು ಎಂಬ ಒತ್ತಾಯ ಕೇಳಿಬಂದಿದೆ.
ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಇಂತಹ ವಸ್ತುಗಳ ಬಳಕೆಗೆ ನಿಯಂತ್ರಣ ಅಗತ್ಯವಿದ್ದು, ಸಂಬಂಧಪಟ್ಟ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.



