ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುತ್ತತ್ತಿ ಸಮೀಪದ ಕಾವೇರಿ ನದಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರುಪಾಲಾಗಿದ್ದಾರೆ.
ಈ ಘಟನೆ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಿಸಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಮೃತರನ್ನು ಚೈತ್ರಾ (20), ಶ್ವೇತಾ (38), ವಿಜಯಮ್ಮ (50), ಪ್ರಿಯಾಂಕಾ (28) ಮತ್ತು ಮಹೇಶ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ರಾಮನಗರ ಜಿಲ್ಲೆಯ ಚನ್ನಪಟ್ಟಣ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ.
ಮಾಹಿತಿಯ ಪ್ರಕಾರ, ಬುಧವಾರ ಸಂಜೆ ಸುಮಾರು 4.45ರ ವೇಳೆಗೆ ಕುಟುಂಬದ ಸದಸ್ಯರು ಮುತ್ತತ್ತಿಯ ಮುತ್ತೆತ್ತರಾಯ ದೇಗುಲಕ್ಕೆ ಭೇಟಿ ನೀಡಿದ್ದರು. ಬಳಿಕ ಕಾವೇರಿ ನದಿಯ ತೀರಕ್ಕೆ ತೆರಳಿದ ಅವರು ಫೋಟೋ ತೆಗೆಯುವ ಉದ್ದೇಶದಿಂದ ನದಿಗೆ ಇಳಿದಿದ್ದಾರೆ. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಒಬ್ಬರ ಹಿಂದೆ ಒಬ್ಬರು ಮುಳುಗಿದ್ದಾರೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಭಿಸಿದರು. ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಐವರ ಮೃತದೇಹಗಳನ್ನು ನದಿಯಿಂದ ಹೊರತೆಗೆದಿದ್ದಾರೆ.
ಪ್ರಕರಣ ಸಂಬಂಧ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.



