ಹಾವೇರಿ: ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆ ಭಾರೀ ಅನಾಹುತದ ಭೀತಿ ಮೂಡಿಸಿತು.
ಹಲವು ಕಡೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಮರಗಳು ರಸ್ತೆಯ ಮೇಲೆ ಬಿದ್ದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿತು.
ನಗರದ ಗೌರಿಶಂಕರ ನಗರದಲ್ಲಿ ಮಳೆ ಅಬ್ಬರದಿಂದ ಮನೆಗಳ ಮುಂಭಾಗ ಹಾಗೂ ರಸ್ತೆ ಮೇಲೆ ಮರಗಳು ಹಾಗೂ ವಿದ್ಯುತ್ ಕಂಬಗಳು ಬಿದ್ದವು. ಅದೃಷ್ಟವಶಾತ್ ಮಳೆ ಬೀಳುವ ವೇಳೆ ಜನ ಸಂಚಾರ ಕಡಿಮೆ ಇದ್ದುದರಿಂದ ದೊಡ್ಡ ಅನಾಹುತ ತಪ್ಪಿದೆ.
ವಿದ್ಯುತ್ ಕಂಬಗಳು ಬಿದ್ದ ಹಿನ್ನೆಲೆ ನಗರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿ ಜನರು ತೊಂದರೆ ಅನುಭವಿಸಿದರು. ಅಲ್ಲದೆ ರಸ್ತೆಗಳ ಮೇಲೆ ಕಂಬಗಳು ಬಿದ್ದಿರುವುದರಿಂದ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು.
ಸುದ್ದಿ ತಿಳಿಯುತ್ತಿದ್ದಂತೆ ವಿದ್ಯುತ್ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತುರ್ತು ದುರಸ್ತಿ ಕಾರ್ಯ ಕೈಗೊಂಡರು. ಇದೇ ವೇಳೆ ನಗರದ ಗಡಾದ ಆಸ್ಪತ್ರೆ ಸಮೀಪ ನಿಲ್ಲಿಸಿದ್ದ ಆಟೋ ಮೇಲೆ ಭಾರೀ ಗಾತ್ರದ ಮರ ಬಿದ್ದ ಪರಿಣಾಮ ಆಟೋ ಸಂಪೂರ್ಣ ಜಖಂಗೊಂಡಿದೆ.
ಮಳೆ ವೇಳೆ ಆಟೋವನ್ನು ಮರದ ಕೆಳಗೆ ನಿಲ್ಲಿಸಿದ್ದ ಮಾಲೀಕ ಜಬೀಯುಲ್ಲಾ, ತನ್ನ ವಾಹನ ನಾಶವಾಗಿರುವುದರಿಂದ ಸಂಕಷ್ಟಕ್ಕೀಡಾಗಿದ್ದಾರೆ. ಬಿರುಗಾಳಿ ಮಳೆಯಿಂದ ಉಂಟಾದ ಹಾನಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.



