ಗದಗ: ನಿನ್ನೆ ರಾತ್ರಿಯಿಡೀ ಸುರಿದ ಮಹಾಮಳೆಗೆ ಗದಗ ಜಿಲ್ಲೆಯಲ್ಲಿ ಹಲವು ಅವಾಂತರ ಸೃಷ್ಟಿಯಾಗಿದೆ. ಧಾರವಾಡ ಜಿಲ್ಲೆಯಲ್ಲಿ ಸುರಿದ ಅಬ್ಬರದ ಮಳೆಗೆ ಗದಗ ಜಿಲ್ಲೆಯಲ್ಲಿ ಸಂಕಷ್ಟ ಎದುರಾಗಿದೆ. ಜಿಲ್ಲೆಯ ರೋಣ ತಾಲೂಕಿನ ಯಾವಗಲ್ ಗ್ರಾಮದ ಬಳಿ ಬೆಣ್ಣೆ ಹಳ್ಳ ಉಕ್ಕಿ ಹರಿಯುತ್ತಿದೆ. ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿರುವದರಿಂದ ಸಂಪರ್ಕ ರಸ್ತೆ ಸಂಪೂರ್ಣವಾಗಿ ಜಲಾವೃತಗೊಂಡಿದೆ.
ರೋಣ ಹಾಗೂ ನರಗುಂದ ತಾಲೂಕಿಗೆ ಸಂಪರ್ಕ ಕಲ್ಪಿಸುವ ನಾಲ್ಕು ಸೇತುವೆಗಳು ಮುಳುಗಡೆಯಾಗಿದ್ದು, ಇದರಿಂದಾಗಿ ರೋಣ ಹಾಗೂ ನರಗುಂದ ತಾಲೂಕಿನ ಹಲವು ಹಳ್ಳಿಗಳ ರಸ್ತೆಗಳ ಸಂಪರ್ಕ ಕಡಿತಗೊಂಡಿವೆ,
ಯಾವಗಲ್ , ಮೆಣಸಗಿ, ಕುರ್ಲಗೇರಿ, ಸುರಕೋಡ ಸೇತುವೆಗಳು ಮುಳುಗಡೆಯಾಗಿವೆ. ಯಾವಗಲ್ ಮೆಣಸಗಿ ರೋಣ ತಾಲೂಕಿನ ಹಳ್ಳಿಗಳು, ಕುರ್ಲಗೇರಿ ಹಾಗೂ ಸುರಕೋಡ ನರಗುಂದ ತಾಲೂಕಿನ ಹಳ್ಳಿಗಳು ಸೇರಿದಂತೆ ಹಳ್ಳದ ಪಕ್ಕದ ಜಮೀನುಗಳು ಜಲಾವೃತಗೊಂಡಿದೆ. ಇದರಿಂದ ಈ ಮಾರ್ಗದ ಹಾದಿಯಲ್ಲಿ ಸಾಗುವ ವಾಹನಗಳು ಸ್ಥಗಿತಗೊಂಡಿವೆ. ಜನಜೀವನದಲ್ಲಿ ಅಸ್ತವ್ಯಸ್ತಗೊಂಡಿದೆ.
ಬೆಣ್ಣೆ ಹಳ್ಳದ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ.ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಕುಂದ್ರಳ್ಳಿ ಗ್ರಾಮದಲ್ಲಿ ಮಳೆಯ ನೀರು ಮನೆಗಳಿಗೆ ನುಗ್ಗಿ ಅಪಾರ ಪ್ರಮಾಣದ ಗೃಹೋಪಯೋಗಿ ವಸ್ತುಗಳು ನೀರುಪಾಲಾಗಿವೆ.ರಾತ್ರಿಯಿಡೀ ಮನೆಗೆ ನುಗ್ಗಿದ ನೀರನ್ನು ಹೊರಹಾಕಲು ಜನರು ಹರಸಾಹಸ ಪಟ್ಟರು. ಸುದ್ದಿ ತಿಳಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.