ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚಿನ ದಿನಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿ ನೆಪದಲ್ಲಿ ಸಾಲಗಾರರಿಗೆ ಕಿರುಕುಳ ನೀಡುತ್ತಿರುವ ಪ್ರಕರಣಗಳು ಜಾಸ್ತಿಯಾಗುತ್ತಿರುವುದರಿಂದ ಕರ್ನಾಟಕ ಸರಕಾರವು ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆದ್ಯಾದೇಶ, 2025ನ್ನು 12-02-2025ರಿಂದ ಜಾರಿಗೊಳಿಸಿದೆ.
ಈ ಆದ್ಯಾದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಉದ್ದೇಶದಿಂದ ಸಾರ್ವಜನಿಕರಿಗೆ ಮೈಕ್ರೋ ಫೈನಾನ್ಸ್ ಸಂಸ್ಥೆಯವರು ನೀಡಬಹುದಾದ ಕಿರುಕುಳ ಹಾಗೂ ಬೆದರಿಕೆಯನ್ನು ವರದಿ ಮಾಡಿಕೊಳ್ಳಲು ಪ್ರತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ಸೂಚನೆ ನೀಡಲಾಗಿದೆ. ಸಾರ್ವಜನಿಕರ ಕರೆಗಳನ್ನು ಸ್ವೀಕರಿಸಿ ಸಾರ್ವಜನಿಕರ ಅಹವಾಲುಗಳಿಗೆ ತಕ್ಕಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ವಿಷಯವನ್ನು ತಿಳಿಸಲು (08372-239177) ಹೆಲ್ಪ್ ಡೆಸ್ಕ್ನ್ನು ತೆರೆಯಲಾಗಿದೆ. ಜಿಲ್ಲೆಯ ಸಾರ್ವಜನಿಕರು ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ತಮ್ಮ ಕಿರುಕುಳ ಹಾಗೂ ಬೆದರಿಕೆ ದೂರುಗಳಿದ್ದಲ್ಲಿ ಹೆಲ್ಪ್ ಡೆಸ್ಕ್ನ್ನು ಸಂಪರ್ಕಿಸಲು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.