ನವದೆಹಲಿ: ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ನಾಯಕರ ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಬೆಳವಣಿಗೆ ಬಗ್ಗೆ ರಾಹುಲ್ ಗಾಂಧಿ ಚರ್ಚೆ ಮಾಡಿದರು. ಮುಖ್ಯವಾಗಿ ಜಾತಿಗಣತಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದರು.
ಕೆಲವರು ವರದಿಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚೆ ಆಯಿತು. ಜಾತಿಗಣತಿ ಸಮೀಕ್ಷೆ ಮಾಡಿ 9 ರಿಂದ 10 ವರ್ಷ ಆಗಿದೆ. ಹಾಗಾಗಿ ಮತ್ತೊಮ್ಮೆ ಸಮೀಕ್ಷೆ ಮಾಡಲು ಹೇಳಿದ್ದಾರೆ. ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆಗೆ ನಾವು ಒಪ್ಪಿಗೆ ನೀಡಿದ್ದೇವೆ. 90 ದಿನದೊಳಗೆ ಜಾತಿಗಣತಿ ಸಮೀಕ್ಷೆ ಮುಗಿಯಲಿದೆ ಎಂದು ಸ್ಪಷ್ಟಪಡಿಸಿದರು.
ಕಾಲ್ತುಳಿತ ದುರಂತ ಪ್ರಕರಣದ ಬಗ್ಗೆಯೂ ಸಭೆಯಲ್ಲಿ ಚರ್ಚೆ ಆಗಿದ್ದು, ಕೈಗೊಂಡಿರುವ ಕ್ರಮದ ಬಗ್ಗೆ ವಿವರಣೆ ನೀಡಿದ್ದೇವೆ. ಸಿಐಡಿ, ನ್ಯಾ.ಕುನ್ಹಾ ನೇತೃತ್ವದ ತನಿಖೆ ಬಗ್ಗೆ ಮಾಹಿತಿ ನೀಡಿದ್ದೇವೆ. ಪೊಲೀಸ್ ಅಧಿಕಾರಿಗಳ ಅಮಾನತು, ಇಂಟಲಿಜೆನ್ಸ್ ಮುಖ್ಯಸ್ಥರ ವರ್ಗಾವಣೆ ಈ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಲಾಗಿದೆ ಎಂದರು.
11 ಜನರು ಸಾಯಬಾರದಿತ್ತು. ಆ ಘಟನೆಯಿಂದ ನೋವಾಗಿದೆ. ಸಮರ್ಥನೆಗೆ ಕುಂಭಮೇಳದ ಘಟನೆಯನ್ನು ತೆಗೆದುಕೊಳ್ಳುವುದಿಲ್ಲ. ರಾಜ್ಯದಲ್ಲಿ ನಡೆದ ಘಟನೆಯಿಂದ ನೋವಾಗಿದೆ. ತನಿಖೆಯ ವರದಿ ಬಂದ ಬಳಿಕ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.