ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಬಿಬಿಎಂಪಿಯ ಘನ ತ್ಯಾಜ್ಯ ನಿರ್ವಹಣೆಯ ಟೆಂಡರ್​ಗೆ​ ಮಧ್ಯಂತರ ತಡೆ ನೀಡಿದ ಹೈಕೋರ್ಟ್!

0
Spread the love

ಬೆಂಗಳೂರು:- ಬಿಬಿಎಂಪಿಯ ಘನ ತ್ಯಾಜ್ಯ ನಿರ್ವಹಣೆಯ ಟೆಂಡರ್​ಗೆ​ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಹಿನ್ನೆಡೆಯಾದಂತಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿಯ ಗುತ್ತಿಗೆ ಟೆಂಡರ್‌ಗೆ ಇಲಾಖಾ ಸಚಿವರ ಅನುಮೋದನೆ ಪಡೆದುಕೊಳ್ಳಬೇಕೆಂಬ ಷರತ್ತು ವಿಧಿಸಿರುವ ಕಾರಣಕ್ಕೆ ಮರು ಟೆಂಡರ್‌ ಪ್ರಕ್ರಿಯೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. ಬೆಂಗಳೂರು ಮಹಾನಗರ ಗುತ್ತಿಗೆದಾರರ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್​ ಇಂದು ನಡೆಸಿತು.

Advertisement

ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಪಿ.ಪ್ರಸನ್ನ ಕುಮಾರ್, ‘ಬಿಎಸ್‌ಡಬ್ಲ್ಯುಎಂಎಲ್‌ 2023ರಲ್ಲಿ ಆಹ್ವಾನಿಸಿದ್ದ ಟೆಂಡರ್‌ ನಿಯಮಗಳನ್ನು ಪ್ರಶ್ನಿಸಿ ಹಲವು ಗುತ್ತಿಗೆದಾರರು ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ಇದೇ ನ್ಯಾಯಪೀಠ ಇತ್ತೀಚೆಗಷ್ಟೇ ವಿಲೇವಾರಿ ಮಾಡಿತ್ತು. ಅಂತೆಯೇ, ‘ನಾಲ್ಕು ತಿಂಗಳಲ್ಲಿ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಿ’ ಎಂದು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಆದೇಶಿಸಿತ್ತು’ ಎಂದರು.

ಈ ಆದೇಶದ ಅನುಸಾರ 2025 ಮೇ ತಿಂಗಳಲ್ಲಿ ಮರು ಟೆಂಡರ್ ಕರೆಯಲಾಗಿದೆ. ಆದರೆ, ಮರು ಟೆಂಡರ್ ಅಧಿಸೂಚನೆಯಲ್ಲಿ, ಸಕ್ಷಮ ಪ್ರಾಧಿಕಾರಗಳಿಂದ ಅಗತ್ಯ ಅನುಮೋದನೆ ಪಡೆದು ಇಲಾಖಾ ಸಚಿವರ ಅನುಮೋದನೆಯೊಂದಿಗೆ ತುರ್ತಾಗಿ ಅನುಷ್ಠಾನಗೊಳಿಸಲು ಆದೇಶಿಸಲಾಗಿದೆ ಎಂಬ ಷರತ್ತು ವಿಧಿಸಲಾಗಿದೆ. ಇದು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕ (ಕೆಟಿಪಿಪಿ) ಕಾಯ್ದೆ-1999ಕ್ಕೆ ಸಂಪೂರ್ಣ ತದ್ವಿರುದ್ಧವಾಗಿದೆ’ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

‘ಅಲ್ಲದೆ, ಸರ್ಕಾರದ ಪರವಾಗಿ ಅಡ್ವೊಕೇಟ್‌ ಜನರಲ್‌ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಪ್ರಮಾಣಪತ್ರದ ಉಲ್ಲಂಘನೆಯೂ ಆಗಿದೆ’ ಎಂದರು. ಈ ಮಾತಿಗೆ ಆಘಾತ ವ್ಯಕ್ತಪಡಿಸಿದ ನ್ಯಾಯಪೀಠ, ‘ಇಲ್ಯಾಕೆ ಇಲಾಖೆ ಸಚಿವರು ಬಂದರು’ ಎಂದು ಸರ್ಕಾರದ ಪರ ವಕೀಲರನ್ನು ಪ್ರಶ್ನಿಸುವ ಮೂಲಕ ಸರ್ಕಾರದ ನಡೆಯನ್ನು ಕುಟುಕಿತು. ಇದಕ್ಕೆ ಸರ್ಕಾರದ ಪರ ವಕೀಲ ಸ್ಫೂರ್ತಿ ಹೆಗಡೆ, ‘ಈ ಪ್ರಕರಣದಲ್ಲಿ ಅಡ್ವೊಕೇಟ್ ಜನರಲ್ ಬಂದು ವಾದ ಮಂಡಿಸಲಿದ್ದಾರೆ. ಅದಕ್ಕಾಗಿ ಒಂದಷ್ಟು ಕಾಲಾವಕಾಶ ನೀಡಬೇಕು’ ಎಂದು ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿದಾರರ ಮಧ್ಯಂತರ ಮನವಿಯನ್ನು ಮನ್ನಿಸಿ ಮರು ಟೆಂಡರ್‌ಗೆ ಮಧ್ಯಂತರ ತಡೆ ನೀಡಿ ಆದೇಶಿಸಿತು.


Spread the love

LEAVE A REPLY

Please enter your comment!
Please enter your name here