ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶುಕ್ರವಾರ ಶಿರಹಟಿಯಲ್ಲಿ ವಿವಿಧ ಹಿಂದೂ ಸಂಘಟನೆಗಳ ಒಕ್ಕೂಟದ ವತಿಯಿಂದ ಪಿಎಸ್ಐ ಈರಣ್ಣ ರಿತ್ತಿ ಅವರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ ನಂತರ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರಾಜು ಖಾನಪ್ಪನವರ, ಸಂತೋಷ ಕುರಿ, ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಬೇಕಾಗಿರುವ ಪೊಲೀಸ್ ಅಧಿಕಾರಿಗಳೇ ಶಿರಹಟ್ಟಿ ತಾಲೂಕಿನಲ್ಲಿ ಮುಗ್ಧ ರೈತರು, ಹಿಂದೂಗಳ ಮೇಲೆ ದೌರ್ಜನ್ಯ ನಡೆಸಿ ಹಣ ವಸೂಲಿ ಕೆಲಸದಲ್ಲಿ ನಿರತರಾಗಿದ್ದಾರೆ. ದೇವಿಹಾಳ ಗ್ರಾಮದ ಅಮಾಯಕ ಲಂಬಾಣಿ ರೈತ ಸೋಮಪ್ಪ ಲಮಾಣಿ ಜಮೀನಿನ ಕೆಲಸ ಕಾರ್ಯ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಪಿಎಸ್ಐ ಈರಣ್ಣ ರಿತ್ತಿ ಇಸ್ಪೀಟ್ ಆಡಿದ್ದಾರೆಂಬ ಸುಳ್ಳು ಪ್ರಕರಣ ದಾಖಲಿಸಿ ಹಣ ವಸೂಲಿ ಮಾಡಿ ಲಾಠಿಯಿಂದ ಮನಸೋಇಚ್ಛೆ ಥಳಿಸಿ ಜಾತಿ ನಿಂದನೆ ಮಾಡಿದ್ದಾರೆ. ಇದರಿಂದಾಗಿ ಸೋಮಪ್ಪ ಲಮಾಣಿಯ ಮೂತ್ರಪಿಂಡಕ್ಕೆ ಬಾವು ಬಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಿಎಸ್ಐ ಈರಣ್ಣ ರಿತ್ತಿ ಅಮಾನತ್ತಿಗೆ ಆಗ್ರಹಿಸಿ ಕಳೆದ 15 ದಿನಗಳಿಂದ ತಹಸೀಲ್ದಾರ ಕಚೇರಿ ಮುಂದೆ ನಿರಂತರ ಪ್ರತಿಭಟನೆ ನಡೆಸಿದರೂ ಸಹ ಸರ್ಕಾರ ಈ ಅಧಿಕಾರಿಯ ಒತ್ತಡಕ್ಕೆ ಮಣಿದು ಯಾವುದೇ ಕ್ರಮ ಕೈಕೊಳ್ಳದೇ ಭ್ರಷ್ಟ ಹಿಂದೂ ವಿರೋಧಿ ಅಧಿಕಾರಿಯನ್ನು ರಕ್ಷಿಸುತ್ತಿದೆ. ಒಂದು ವೇಳೆ ಈ ಅಧಿಕಾರಿಯ ಮೇಲೆ ಕ್ರಮ ಜರುಗಿಸಲು ಹಿಂದೇಟು ಹಾಕಿದಲ್ಲಿ ಗದಗ ಜಿಲ್ಲಾಧಿಕಾರಿ ಕಚೇರಿ, ಬೆಳಗಾವಿ ಐಜಿಪಿ ಕಚೇರಿ, ಬೆಂಗಳೂರಿನ ವಿಧಾನಸೌಧದ ಮುಂದೆ ವಿವಿಧ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ಉಗ್ರ ಪ್ರತಿಭಟನೆ ನಡೆಸಲಾಗುವುದೆಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ನಾಗರಾಜ ಲಕ್ಕುಂಡಿ, ಫಕ್ಕೀರೇಶ ರಟ್ಟಿಹಳ್ಳಿ, ಶಂಕರ ಮರಾಠೆ, ಬಿ.ಡಿ. ಪಲ್ಲೇದ, ನಂದಾ ಪಲ್ಲೇದ, ಅಶೋಕ ಶಿರಹಟ್ಟಿ ಮಾತನಾಡಿದರು.
ಇದಕ್ಕೂ ಮುನ್ನ ಪಟ್ಟಣದ ಶ್ರೀ ಹನುಮಂತದೇವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆಯು ಬಜಾರ ರಸ್ತೆ, ಬಸವೇಶ್ವರ ವೃತ್ತ, ನೆಹರು ವೃತ್ತಗಳ ಮೂಲಕ ಸಾಗಿತು. ಮುಂಜಾಗ್ರತಾ ಕ್ರಮವಾಗಿ ಡಿಎಸ್ಪಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದ್ದರು.
ಈ ವೇಳೆ ಜಾನು ಲಮಾಣಿ, ರಾಮಣ್ಣ ಕಂಬಳಿ, ಶಿವು ಲಮಾಣಿ, ಪುಂಡಲೀಕ ಲಮಾಣಿ, ಥಾವರೆಪ್ಪ ಲಮಾಣಿ, ಅಶೋಕ ವರವಿ, ವಿಠ್ಠಲ ಭಿಡವೆ, ಪರಶುರಾಮ ಡೊಂಕಬಳ್ಳಿ, ಸಂತೋಷ ತೋಡೆಕಾರ, ತಿಪ್ಪಣ್ಣ ಲಮಾಣಿ ಮುಂತಾದವರು ಉಪಸ್ಥಿತರಿದ್ದರು.
ಶುಕ್ರವಾರ ಸಂಜೆ ಒಳಗೆ ಪಿಎಸ್ಐ ಈರಣ್ಣ ರಿತ್ತಿ ಅವರನ್ನು ಬೇರೆ ಕಡೆಗೆ ವರ್ಗಾವಣೆ ಮಾಡಬೇಕು. ಇಲ್ಲದೇ ಹೋದರೆ ಡಿಸೆಂ. 13ರಂದು ಲಕ್ಷ್ಮೇಶ್ವರ ಪಟ್ಟಣಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಿದ ಸಂದರ್ಭದಲ್ಲಿಯೂ ಸಂಘಟನೆಯ ವತಿಯಿಂದ ಕಪ್ಪು ಪಟ್ಟಿ ಪ್ರದರ್ಶನ ಮಾಡಲಾಗುವುದು. ಶಿರಹಟ್ಟಿ ಬಂದ್ಗೆ ಕರೆ ನೀಡಲಾಗಿತ್ತು. ಬಹುತೇಕರು ನಮ್ಮ ಕರೆಗೆ ಸ್ಪಂದಿಸಿಲ್ಲ. ಹೋರಾಟವನ್ನು ಹತ್ತಿಕ್ಕುವ ಕೆಲಸ ನಡೆದಿದೆ, ಮುಂಬರುವ ದಿನಗಳಲ್ಲಿ ಇವರಿಗೆ ಕಾನೂನಿನ ಮೂಲಕವೇ ನಾವು ಉತ್ತರಿಸಲಿದ್ದೇವೆ ಎಂದು ರಾಜು ಖಾನಪ್ಪನವರ ಹೇಳಿದರು.



