ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ನರಸಿಂಹತೀರ್ಥ ಅಂಡರ್ ಪಾಸ್ ಬಳಿ ನಿರ್ಮಾಣ ಹಂತದ ಸರ್ವೀಸ್ ರಸ್ತೆ ಮೇಲಿಂದ ಕಾರೊಂದು ಬಿದ್ದ ಪರಿಣಾಮ 11 ತಿಂಗಳ ಮಗು ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿ 75ರ ಅಂಡರ್ ಪಾಸ್ ಸಮೀಪದ ಸರ್ವೀಸ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬ ಇಂದು ಬೆಳಗ್ಗೆ ಸುಮಾರು 3 ಗಂಟೆಗೆ ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಸರ್ವೀಸ್ ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಕಾರು ಏಕಾಏಕಿ ಕೆಳಗೆ ಬಿದ್ದು ದುರ್ಘಟನೆ ಸಂಭವಿಸಿದೆ. ಘಟನೆಯಿಂದ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.
ಸ್ಥಳೀಯರು ಅವೈಜ್ಞಾನಿಕವಾಗಿ ನಿರ್ಮಿಸಿರುವ ಸರ್ವೀಸ್ ರಸ್ತೆಯ ಕಾರಣದಿಂದಲೇ ಈ ರೀತಿಯ ಅಪಘಾತಗಳು ಮರುಕಳಿಸುತ್ತಿವೆ ಎಂದು ಆರೋಪಿಸಿದ್ದಾರೆ.
ಘಟನೆ ಕುರಿತು ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.



